ಮುಖ್ಯ ಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು, ಶಾಸಕರಿಂದ ಡಾ.ರಾಜ್ ಭಾವಚಿತ್ರಕ್ಕೆ ಪುಷ್ಪಾರ್ಚನೆ

ಚಾಮರಾಜನಗರ: ಕನ್ನಡದ ಮೇರುನಟ ನಟಸಾರ್ವಭೌಮ ಡಾ. ರಾಜ್ ಕುಮಾರ್ ಅವರ 97ನೇ ಜನ್ಮ ದಿನಾಚರಣೆ ಅಂಗವಾಗಿ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯ ಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್, ಇನ್ನಿತರ ಸಚಿವರು ಡಾ. ರಾಜ್ಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.
ಸಚಿವ ಸಂಪುಟ ಸಭೆ ನಡೆದ ಬಳಿಕ ಮಾಧ್ಯಮಗೋಷ್ಠಿಗೂ ಮೊದಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಡಾ. ರಾಜ್ ಕುಮಾರ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಇನ್ನಿತರ ಸಚಿವರು ಪಾಲ್ಗೊಂಡು ಡಾ. ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಗೌರವ ಸಲ್ಲಿಸಿದರು.
ಇದೇ ವೇಳೆ ಡಾ.ರಾಜ್ ಕುಮಾರ್ ಅವರ ಬದುಕು, ಚಲನಚಿತ್ರ ರಂಗದ ಮಹತ್ವ ಸಾರುವ ಛಾಯಾಚಿತ್ರ ಸಂಗ್ರಹದ ವೀಡಿಯೋ ಅನ್ನು ಬೃಹತ್ ಎಲ್.ಇ.ಡಿ ಪರದೆ ಮೇಲೆ ಪ್ರದರ್ಶಿಸಲಾಯಿತು.
ವರನಟ ಡಾ. ರಾಜ್ ಕುಮಾರ್ ಅವರ ತವರು ಜಿಲ್ಲೆ ಚಾಮರಾಜನಗರ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಇತರೆ ಸಚಿವರು, ಶಾಸಕರು, ಭಾಗವಹಿಸಿ ಡಾ. ರಾಜ್ ಕುಮಾರ್ ಅವರ ಜನ್ಮ ದಿನಾಚರಣೆಯಲ್ಲಿ ಪುಷ್ಪಾರ್ಚನೆ ನೆರವೇರಿಸಿದ್ದು ಅರ್ಥಪೂರ್ಣವಾಯಿತು.
ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್.ಸಿ. ಮಹದೇವಪ್ಪ, ಕಾನೂನು, ನ್ಯಾಯಾ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ. ಪಾಟೀಲ್, ಉನ್ನತ ಶಿಕ್ಷಣ ಸಚಿವರಾದ ಸುಧಾಕರ್, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎಂ.ಆರ್. ಮಂಜುನಾಥ್, ಎ.ಆರ್. ಕೃಷ್ಣಮೂರ್ತಿ, ಡಾ. ಡಿ. ತಿಮ್ಮಯ್ಯ,ಹಿರಿಯ ಉನ್ನತ ಅಧಿಕಾರಿಗಳಾದ ಎಲ್.ಕೆ. ಅತೀಕ್, ಮುಂತಾದ ಗಣ್ಯರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.