ಜನ ಜಾನುವಾರುಗಳಿಗೆ ಕುಡಿಯುವ ನೀರು, ಮೇವಿಗೆ ಕೊರತೆಯಾಗದಂತೆ ಜಿಲ್ಲಾಡಳಿತದಿಂದ ಕ್ರಮ
ಚಾಮರಾಜನಗರ: ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜನ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಜಾನುವಾರುಗಳ ಮೇವಿಗೆ ಯಾವುದೇ ಕೊರತೆಯಾಗದಂತೆ ಜಿಲ್ಲಾಡಳಿತ ವತಿಯಿಂದ ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಶಿಲ್ಪಾ ನಾಗ್ ಅವರು ತಿಳಿಸಿದ್ದಾರೆ.

ಗುಂಡ್ಲುಪೇಟೆ, ಹನೂರು ಮತ್ತು ಚಾಮರಾಜನಗರ ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕುಗಳೆಂದು ಹಾಗೂ ಕೊಳ್ಳೇಗಾಲ, ಯಳಂದೂರು ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರವು ಈಗಾಗಲೇ ಘೋಷಿಸಿದ್ದು, ಬರ ನಿರ್ವಹಣೆ ಸಂದರ್ಭದಲ್ಲಿ ಅನೇಕ ತುರ್ತು ಕ್ರಮಗಳನ್ನು ಜಿಲ್ಲಾಡಳಿತದಿಂದ ಕೈಗೊಳ್ಳಲಾಗಿರುವ ನಿಟ್ಟಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಸಾರ್ವಜನಿಕರಿಂದ ಬರುವ ದೂರುಗಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ.
ಜಿಲ್ಲೆಯಲ್ಲಿ ಬರ ನಿರ್ವಹಣೆಗಾಗಿ ಇದುವರೆಗೆ 16 ಬಾರಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಬರ ನಿರ್ವಹಣೆ ಕುರಿತು ಚರ್ಚಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನಗಳನ್ನು ನೀಡಲಾಗಿದೆ. ಈ ಸಂಬಂಧ ಪ್ರತೀ 15 ದಿನಗಳಿಗೊಮ್ಮೆ ಸಭೆ ನಡೆಸಿ ಜನ ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಕೊರತೆ ಉಂಟಾಗದಂತೆ ಅತ್ಯಗತ್ಯವಾಗಿರುವ ತುರ್ತು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ತಾಲ್ಲೂಕು ಮಟ್ಟದಲ್ಲೂ ಸಂಬಂಧಪಟ್ಟ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ಸಮಿತಿ ರಚಿಸುವುದಲ್ಲದೇ ಬರ ನಿರ್ವಹಣೆ ಕುರಿತು ಸಭೆ ನಡೆಸಿ ಆಯಾ ತಾಲ್ಲೂಕುಗಳ ಬರ ನಿರ್ವಹಣೆಗೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಿ ಅನುμÁ್ಟನಗೊಳಿಸಲಾಗುತ್ತಿದೆ.
ಜಿಲ್ಲೆಯ ಬರ ನಿರ್ವಹಣೆಗೆ ಸಂಬಂಧಪಟ್ಟಂತೆ ಗ್ರಾಮೀಣ ಭಾಗದ ಸಾರ್ವಜನಿಕರ ಕುಡಿಯುವ ನೀರಿನ ನಿರ್ವಹಣೆಗಾಗಿ 2024ರ ಫೆಬ್ರವರಿ ಮಾಹೆಯಲ್ಲಿ ಜಿಲ್ಲೆಯಾದ್ಯಂತ ಸರ್ವೆ ಕಾರ್ಯ ನಡೆಸಿ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಂಬಂಧ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ (ಚಾಮರಾಜನಗರ-48, ಗುಂಡ್ಲುಪೇಟೆ-17, ಹನೂರು-15, ಕೊಳ್ಳೇಗಾಲ-20, ಯಳಂದೂರು-11) ಹಾಗೂ ತುರ್ತು ಸಂದರ್ಭದಲ್ಲಿ ಕುಡಿಯುವ ನೀರಿನ ಕೊರತೆಯನ್ನು ನಿವಾರಿಸಲು 69 ಖಾಸಗಿ ಹೆಚ್ಚುವರಿ ಇಳುವರಿ ಕೊಡುವ ಬೋರ್ವೆಲ್ಗಳನ್ನು ಗುರುತಿಸಿ (ಚಾಮರಾಜನಗರ-17, ಗುಂಡ್ಲುಪೇಟೆ-16, ಕೊಳ್ಳೇಗಾಲ-11, ಯಳಂದೂರು 11 ಹಾಗೂ ಹನೂರು-14) ಖಾಸಗಿ ಬೋರ್ವೆಲ್ಗಳ ಮಾಲೀಕರಿಂದ ಈಗಾಗಲೇ ಒಪ್ಪಂದ ಪತ್ರಗಳನ್ನು ಪಡೆಯಲಾಗಿದೆ. ಅವಶ್ಯವಿರುವ ಕಡೆ ಈಗಾಗಲೇ ಖಾಸಗಿ ಬೋರ್ವೆಲ್ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಜಿಲ್ಲಾ ಕೇಂದ್ರದಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆದು ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವುಗಳ ಪೂರೈಕೆಗೆ ಸಂಬಂಧಪಟ್ಟಂತೆ ಸಂಪರ್ಕಿಸಲು ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ.
ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಸಹಾಯವಾಣಿಗೆ 2024ರ ಮಾರ್ಚ್ 5 ರಿಂದ ಮೇ 4ರವರೆಗೆ (ಚಾಮರಾಜನಗರ-71, ಹನೂರು-57, ಗುಂಡ್ಲುಪೇಟೆ-26, ಕೊಳ್ಳೇಗಾಲ-13) ಸೇರಿದಂತೆ ಒಟ್ಟು 168 ಕುಡಿಯುವ ನೀರಿನ ಸಮಸ್ಯೆಗಳ ಕುರಿತು ದೂರುಗಳನ್ನು ಸ್ವೀಕರಿಸಲಾಗಿದ್ದು, ಜಿಲ್ಲೆಯ ಸಾರ್ವಜನಿಕರಿಂದಲ್ಲದೇ ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳಿಂದ ವರದಿಯಾಗುವ ಸುದ್ದಿಗಳನ್ನು ಸಹ ಸಾರ್ವಜನಿಕರ ದೂರುಗಳೆಂದೇ ಭಾವಿಸಲಾಗಿದೆ. 168 ದೂರುಗಳಲ್ಲಿ 159 ದೂರುಗಳಿಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ 24 ಗಂಟೆಯೊಳÀಗೆ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲಾಗಿದೆ.
ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಚಾಮರಾಜನಗರ ನಗರಸಭೆಯ 10 ವಾರ್ಡ್ಗಳಲ್ಲಿ ಒಟ್ಟು 86 ಟ್ಯಾಂಕರ್ ನೀರನ್ನು, ಗುಂಡ್ಲುಪೇಟೆ ಪುರಸಭೆಯ ಒಟ್ಟು 10 ವಾರ್ಡ್ಗಳಲ್ಲಿ 376 ಟ್ಯಾಂಕರ್ ನೀರನ್ನು ಹಾಗೂ ಹನೂರು ಪಟ್ಟಣ ಪಂಚಾಯಿತಿಯಲ್ಲಿ ಒಟ್ಟು 6 ವಾರ್ಡ್ಗಳಲ್ಲಿ 9 ಟ್ಯಾಂಕರ್ ನೀರನ್ನು ಸರಬರಾಜು ಮಾಡಲಾಗಿದೆ. ಗುಂಡ್ಲುಪೇಟೆ ಪುರಸಭೆಗೆ ಸಂಬಂಧಪಟ್ಟಂತೆ ಕಬಿನಿ ಕುಡಿಯುವ ನೀರಿನ ಸಂಬಂಧ ದುರಸ್ಥಿ ಮಾಡಿಸಲು ಸಾಧ್ಯವಿಲ್ಲದ ಮೋಟರ್ ಅನ್ನು ತೆಗೆದು ಹಾಕಿ ಟೆಂಡರ್ ಮೂಲಕ ಹೊಸ ಮೋಟಾರನ್ನು ಖರೀದಿಸಿ ಅಳವಡಿಸಿ ಗುಂಡ್ಲುಪೇಟೆ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲಾಗಿದೆ.
ಗ್ರಾಮೀಣ ಭಾಗದಲ್ಲಿ ಹನೂರು ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಕುಡಿಯುವ ನೀರನ್ನು ಒಟ್ಟು 157 ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗಿದೆ. ಅದರಲ್ಲೂ ಅತೀ ಹೆಚ್ಚಾಗಿ ಮಲೆ ಮಹದೇಶ್ವರಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೊಕ್ಕೆಬೊರೆ, ಇಂಡಿಗನತ್ತ, ಮಂದಾರೆ ಗ್ರಾಮಗಳಿಗೆ ಸರಬರಾಜು ಮಾಡಲಾಗಿದೆ. ಗುಂಡ್ಲುಪೇಟೆ ತಾಲ್ಲೂಕಿನ ನೇನೇಕಟ್ಟೆ, ಪಂಜನಹಳ್ಳಿ ಗ್ರಾಮಗಳಿಗೆ ತುರ್ತು ಸಂದರ್ಭದಲ್ಲಿ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗಿದೆ.
ಬರ ನಿರ್ವಹಣೆ ಸಂದರ್ಭದಲ್ಲಿ ಕುಡಿಯುವ ನೀರಿಗೆ ಸಂಬಂಧ ಈಗಾಗಲೇ ಚಾಮರಾಜನಗರ ತಾಲ್ಲೂಕಿನಲ್ಲಿ 05, ಕೊಳ್ಳೇಗಾಲ 11, ಗುಂಡ್ಲುಪೇಟೆ 21 ಹಾಗೂ ಹನೂರು ತಾಲೂಕಿನಲ್ಲಿ 41 ಹೊಸ ಬೋರ್ವೆಲ್ಗಳನ್ನು ಕೊರೆಸಲಾಗಿದೆ. ಅಲ್ಲದೇ ಕೊಳ್ಳೇಗಾಲ ತಾಲ್ಲೂಕಿನಲ್ಲಿ 1 ಮತ್ತು ಹನೂರು ತಾಲ್ಲೂಕಿನಲ್ಲಿ ದುರಸ್ಥಿಗೆ ಒಳಗಾಗಿದ್ದ 22 ಕೊಳವೆ ಬಾವಿಗಳನ್ನು ಸರಿಪಡಿಸಲಾಗಿದೆ.
ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವುಗಳ ಸಂಬಂಧ ಜಿಲ್ಲಾಡಳಿತ ವತಿಯಿಂದ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ ಜಿಲ್ಲೆಯಾದ್ಯಂತ 31,943 ಮೇವಿನ ಕಿಟ್ಗಳನ್ನು ಅರ್ಹ 14,045 ರೈತರಿಗೆ ವಿತರಿಸಲಾಗಿದೆ. ಈಗಾಗಲೇ ಹಲವು ರೈತರು ಜಾನುವಾರುಗಳಿಗೆ ಮೇವಿನ ಬೆಳೆಯನ್ನು ಬೆಳೆದಿರುತ್ತಾರೆ.
ಬರ ನಿರ್ವಹಣೆ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಯ ರೈತರ ಜಾನುವಾರುಗಳ ಮೇವಿನ ಸಮಸ್ಯೆಗಳಿಗೆ ಸ್ಪಂದಿಸಿ ರಾಜ್ಯದಲ್ಲಿಯೇ ಅತೀ ಹೆಚ್ಚು ಗೋಶಾಲೆಗಳನ್ನು ತೆರೆದು ಜಾನುವಾರುಗಳಿಗೆ ಮೇವನ್ನು ಒದಗಿಸಲಾಗುತ್ತಿದೆ. ಹನೂರು ತಾಲ್ಲೂಕಿನಲ್ಲಿ ಈಗಾಗಲೇ 17 ಗೋಶಾಲೆಗಳನ್ನು ತೆರೆದು 9546 ದೊಡ್ಡ ಜಾನುವಾರುಗಳಿಗೆ ಮೇವು ಒದಗಿಸಿ ಆಶ್ರಯ ಕಲ್ಪಿಸಲಾಗಿದೆ. 1 ಕಡೆ ಮೇವು ನಿಧಿಯನ್ನು ತೆರೆಯಲಾಗಿದೆ. ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಅವಶ್ಯವಿದ್ದ 1 ಕಡೆ ಮೇವು ನಿಧಿಯನ್ನು ತೆರೆದು 947 ರೈತರಿಗೆ 115 ಟನ್, ಚಾಮರಾಜನಗರ ತಾಲ್ಲೂಕಿನಲ್ಲಿ 228 ರೈತರಿಗೆ 51.92 ಟನ್ ಸೇರಿದಂತೆ 1175 ರೈತರಿಗೆ ಒಟ್ಟು 166.74 ಟನ್ ಗಳಷ್ಟು ಮೇವನ್ನು ಮೇವು ಬ್ಯಾಂಕ್ ನಿಧಿಯಿಂದ ವಿತರಿಸಲಾಗಿದೆ.
ಅವಶ್ಯವಿರುವ ಕಡೆ ಮೇವು ಬ್ಯಾಂಕ್ಗಳನ್ನು ಸ್ಥಾಪಿಸಿ ರೈತರ ಜಾನುವಾರುಗಳಿಗೆ ಮೇವು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಾನುವಾರುಗಳಿಗೆ ಗ್ರಾಮಗಳಲ್ಲಿರುವ ಕುಡಿಯುವ ನೀರಿನ ತೊಟ್ಟಿಯನ್ನು ಸ್ವಚ್ಛ ಗೊಳಿಸಲಾಗುತ್ತಿದೆ. ಅವಶ್ಯವಿರುವ ಕಡೆ ದುರಸ್ಥಿಯನ್ನು ಗ್ರಾಮ ಪಂಚಾಯಿತಿ ವತಿಯಿಂದ ಮಾಡಿಸಲಾಗುತ್ತಿದೆ. ಅಲ್ಲದೇ ಜಾನುವಾರುಗಳಿಗೆ ಕುಡಿಯುವ ನೀರಿನ ಮೂಲಗಳು ಯಾವುದೂ ಇಲ್ಲದಿದ್ದಲ್ಲಿ ಟ್ಯಾಂಕರ್ ಮೂಲಕ ತೊಟ್ಟಿಗೆ ನೀರು ತುಂಬಿಸಲು ಅಧಿಕಾರಿಳಿಗೆ ನಿರ್ದೇಶನ ನೀಡಲಾಗಿದೆ.
ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರವು ತೆರೆದಿರುವ ಸಹಾಯವಾಣಿ ಕೇಂದ್ರಕ್ಕೆ ಕುಡಿಯುವ ನೀರು ಮತ್ತು ಮೇವಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬರುವ ದೂರುಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ 24 ಗಂಟೆಗಳಲ್ಲಿ ಸಮಸ್ಯೆಗೆ ಪರಿಹಾರವನ್ನು ಒದಗಿಸಲಾಗುತ್ತಿದೆ. ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವುಗಳಿಗೆ ಸಂಬಂಧಪಟ್ಟಂತೆ ಅಲಭ್ಯತೆಯಿಂದ ಯಾವುದೇ ಜಾನುವಾರುಗಳು ಮೃತಪಟ್ಟಿಲ್ಲದಿರುವುದನ್ನು ಜಿಲ್ಲಾಡಳಿತವು ದೃಢಪಡಿಸಿಕೊಂಡಿದೆ ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.