ಚಾಮರಾಜನಗರ: ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಹೆಲ್ಪಿಂಗ್ ಹ್ಯಾಂಡ್ ಟ್ರಸ್ಟ್ ವತಿಯಿಂದ ಜನ ಹಿತಾಶಕ್ತಿ ಹೋರಾಟ ವೇದಿಕೆ ಅಧ್ಯಕ್ಷ ರಾಮಸಮುದ್ರ ಸುರೇಶ್ ಸಾರ್ವಜನಿಕರಿಗೆ ಮಾಸ್ಕ್ಗಳನ್ನು ವಿತರಿಸಿದರು.
ನಂತರ ಮಾತನಾಡಿದ ಅವರು, 2019ರಲ್ಲಿ ಬಂದಿರುವ ಮಹಾಮಾರಿ ಕೋವಿಡ್ಗೆ ಹಲವು ಮಂದಿ ಬಲಿಯಾಗಿ, ಸಾಕಷ್ಟು ಮಂದಿ ಸಾವುನೋವುಗಳನ್ನು ಅನುಭವಿಸಿದ್ದಾರೆ. ನಮ್ಮ ರಾಜ್ಯದಲ್ಲಿ ಮತ್ತೆ ಕೋವಿಡ್ ಭೀತಿ ಉಲ್ಬಣಗೊಳ್ಳುತ್ತಿದ್ದು, ಅದನ್ನು ತಡೆಗಟ್ಟಲು ಪ್ರತಿಯೊಬ್ಬರೂ ಕೂಡಾ ಕಡ್ಡಾಯವಾಗಿ ಮಾಸ್ಕ್ನ್ನು ಧರಿಸಬೇಕು ಎಂದು ಸಾರ್ವಜನಿಕರಿಗೆ ಕಿವಿಮಾತು ಹೇಳಿದರು.
ಸಾರ್ವಜನಿಕರು ತಮ್ಮ ಮನೆ, ಶಾಲೆ, ಊರಿನ ಸ್ವಚ್ಛತೆಯನ್ನು ಕಾಪಾಡುವಲ್ಲಿ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಪ್ರತಿಯೊಬ್ಬರೂ ಕೂಡಾ ಮನೆ ಮುಂದೆ ಒಂದೊಂದು ಗಿಡ ನೆಡುವ ಮೂಲಕ ಪರಿಸರವನ್ನು ಬೆಳೆಸುವಂತಾಗಬೇಕು ಎಂದರು.
ನಮ್ಮ ಪರಿಸರವನ್ನು ಕಾಪಾಡುವಲ್ಲಿ ಎಲ್ಲರೂ ಕೈಜೋಡಿಸಬೇಕು. ಈ ಹಿಂದೆ ಆಕ್ಸಿಜನ್ ಕೊರತೆಯಿಂದ ಜಿಲ್ಲೆಯಲ್ಲಿ ಹಲವು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಆದ್ದರಿಂದ ಪ್ರತಿಯೊಬ್ಬರೂ ಗಿಡ ಬೆಳೆಸುವತ್ತ ಹೆಚ್ಚಿನ ಗಮನ ಹರಿಸಿ. ಇದರಿಂದ ಸಾಕಷ್ಟು ಪ್ರಮಾಣದಲ್ಲಿ ಆಕ್ಸಿಜನ್ ದೊರೆಯುತ್ತದೆ ಎಂದರು. ಈ ಸಂದರ್ಭದಲ್ಲಿ ಗೋಪಿನಾಥಂ, ಪಿ.ಸೇಂದಿಲ್ ಮತ್ತಿತರರಿದ್ದರು.
