ಸುನೀಲ್ ಬೋಸ್ ಹೆಚ್ಚಿನ ಬಹುಮತದಿಂದ ಗೆಲ್ಲಿಸಲು ಗಣೇಶ್ ಪ್ರಸಾದ್ ಮನವಿ

ಚಾಮರಾಜನಗರ: ಕ್ಷೇತ್ರದ ಸಮಗ್ರ ಅಭಿವೃದ್ದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪರ ಗ್ಯಾರಂಟಿ ಯೋಜನೆಗಳು ಕೇಂದ್ರದಲ್ಲಿಯು ಅನುಷ್ಠಾನಗೊಳ್ಳಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಗುಂಡ್ಲುಪೇಟೆ ಕ್ಷೇತ್ರದ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ತಿಳಿಸಿದರು.

ತಾಲೂಕಿನ ಹರವೆಯಲ್ಲಿ ಹರವೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಚುನಾವಣೆ ಪ್ರಚಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಯಾವುದೇ ಅಭಿವೃದ್ದಿ ಕೆಲಸಗಳನ್ನು ಮಾಡಲಿಲ್ಲ. ಹೀಗಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮತದಾರರು ಸೋಲಿಸಿದರು. ಹರವೆ ಭಾಗದಲ್ಲಿ ಅಭೂತಪೂರ್ವ ಬೆಂಬಲ ನೀಡಿದ್ದೀರಿ. ಈ ಬಾರಿಯೂ ನನಗೆ ನೀಡಿದಂತೆ ನಮ್ಮ ಪಕ್ಷದ ಅಭ್ಯರ್ಥಿಯಾಗಿರುವ ಸುನೀಲ್ ಬೋಸ್ ಅವರನ್ನು ಗೆಲ್ಲಿಸಬೇಕು ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದಂತೆ ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿ, ರಾಜ್ಯವನ್ನು ಅಭಿವೃದ್ದಿಯತ್ತ ಕೊಂಡೊಯ್ಯತ್ತಿದ್ದಾರೆ. ಅವರಿಗೆ ಇನ್ನು ಹೆಚ್ಚಿನ ಶಕ್ತಿ ತುಂಬಲು ಹಾಗೂ ಕೇಂದ್ರದಲ್ಲಿ ನಮ್ಮದೇ ಕಾಂಗ್ರೆಸ್ ಸರ್ಕಾರ ರಚನೆಯಾಗಲು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರನ್ನು ಗೆಲ್ಲಿಸಬೇಕು. ಇದರಿಂದ ನನಗೂ ಸಹ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಶಕ್ತಿ ಬರುತ್ತದೆ. ನಮ್ಮ ತಂದೆ.

ಎಚ್.ಎಸ್.ಮಹದೇವಪ್ರಸಾದ್ ಅವರು ಕ್ಷೇತ್ರದ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಿದ್ದರು. ಹರವೆ ಭಾಗದ 20 ಕೆರೆಗಳಿಗೆ ನೀರು ತುಂಬಿಸಲು ಅವರು ಪಟ್ಟ ಶ್ರಮ ಹೆಚ್ಚಿನದ್ದಾಗಿದೆ. ಯಡಿಯೂರಪ್ಪ ಕಾಲದಲ್ಲಿ ಮಂಜೂರು ಆಗಿದ್ದು ಬಿಟ್ಟರೆ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಕೆರೆಗಳಿಗೆ ನೀರು ತುಂಬಿಸಿದ್ದರು. ನಂತರ ನಾನು ಕ್ಷೇತ್ರದ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಈ ಚುನಾವಣೆಯ ಮೂಲಕ ನಮ್ಮ ವರ್ಚಸ್ಸು ಹೆಚ್ಚಲಿದೆ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕೈ ಬಲಪಡಿಸಲು ಕಾಂಗ್ರೆಸ್‍ಗೆ ಮತ ನೀಡಿ ಎಂದು ಮನವಿ ಮಾಡಿದರು. ನಾನು ಸಹ 2008 ರಿಂದಲೂ ರಾಜಕೀಯದಲ್ಲಿದ್ದು ಅವಕಾಶಕ್ಕಾಗಿ ಕಾಯುತ್ತಿದ್ದಂತೆ ಪಕ್ಷದ ಈ ಬಾರಿ ಲೋಕಸಭೆಗೆ ಸ್ಪರ್ಧೆ ಮಾಡುವಂತೆ ಸೂಚನೆ ಕೊಟ್ಟಿದೆ. ನಾನು ಸಹ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ದುಡಿಯುತ್ತಿದ್ದೇವೆ. ದಿ. ಆರ್. ಧ್ರುವನಾರಾಯನ್ ಅವರು ಈ ಭಾಗದವರಾಗಿದ್ದು, ಹೆಚ್ಚಿನ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ದಿ.ಎಚ್.ಎಸ್. ಮಹದೇವಪ್ರಸಾದ್, ದಿ. ಆರ್. ಧ್ರುವನಾರಯಣ್ ನಮಗೆ ಸ್ಪೂರ್ತಿಯಾಗಿದ್ದಾರೆ. ಅವರ ಅಭಿವೃದ್ದಿ ಕಾರ್ಯಗಳನ್ನು ಮುಂದುವರಿಸಲು ನªನಗೊಂದು ಅವಕಾಶ ಕೊಡಿ ಎಂದು ಮನವಿ ಮಾಡಿದರು.

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಯೋಜಕ ಕೆರೆಹಳ್ಳಿ ನವೀನ್ ಮಾತನಾಡಿ, ಕ್ಷೇತ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಆಲೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸೀಟುಗಳನ್ನು ಪಡೆದುಕೊಳ್ಳುವ ಮೂಲಕ ಸಿದ್ದರಾಮಯ್ಯ ಅವರ ಆಡಳಿತಕ್ಕೆ ಬೆಂಬಲ ನೀಡಲಿದೆ. ತಾಯಿಂದರು ಗ್ಯಾರಂಟಿ ಯೋಜನೆಯ ಮೂಲಕ ಕಾಂಗ್ರೆಸ್ ಬೆಂಬಲಿಸಲು ಮುಂದಾಗಿದ್ದಾರೆ. ಕೇಂದ್ರದಲ್ಲಿಯೂ ಸಹ ಒಂದು ಲಕ್ಷ ರೂ. ಗ್ಯಾರಂಟಿ ಘೋಷಣೆ ಮಾಡಿದ್ದು, ವರ್ಷಕ್ಕೆ ಒಂದು ಕುಟುಂಬಕ್ಕೆ 1.24 ಲಕ್ಷ ರೂ. ದೊರೆಯಲಿದೆ. ಹೀಗಾಗಿ ಮಹಿಳೆಯರು ಮತ್ತು ರೈತರು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬಹುಮತವನ್ನು ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ, ಚಾಮುಲ್ ನಿರ್ದೇಶಕ ಎಚ್.ಎಸ್. ನಂಜುಂಡಪ್ರಸಾದ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾಜತ್ತಿ, ಜಿ.ಪಂ. ಮಾಜಿ ಸದಸ್ಯರಾದ ಬೊಮ್ಮಯ್ಯ, ಚನ್ನಪ್ಪ, ಮುಖಂಡರಾದ ಶಿವನಾಗಪ್ಪ, ಎಚ್.ಎಸ್. ನಂಜಪ್ಪ, ಮುಕ್ಕಡಹಳ್ಳಿ ರವಿಕುಮಾರ್, ಬೆಳ್ಳೇಗೌಡ, ರಾಜಶೇಖರ್, ನಾಗರತ್ನ, ರೇವಣ್ಣ, ನಟರಾಜು, ಕೆಂಪರಾಜು, ಮಧೂಸೂಧನ್, ಹಿರೇಬೇಗೂರು ಗುರುಸ್ವಾಮಿ, ಮೊದಲಾಧವರು ಇದ್ದರು.

ಚಾಮರಾಜನಗರ ತಾಲೂಕಿನ ಹರವೆಯಲ್ಲಿ ನಡೆದ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಚುನಾವಣೆ ಪ್ರಚಾರ ಸಭೆಯಲ್ಲಿ ಶಾಸಕ ಗಣೇಶ ಪ್ರಸಾದ್ ಮಾತನಾಡಿದರು.

Leave a Reply

Your email address will not be published. Required fields are marked *