- ಚಿನ್ನದ ಮಳೆ, ಬೆಳೆ ಬರಲಿ ಎಂದು ಹೊನ್ನೇರು ಪೂಜೆ: ಮಹೇಶ್ ಕುಮಾರ್
ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆಯೂ ಯುಗಾದಿಯಾಗಿದ್ದು, ಚಾಮರಾಜನಗರ ಜಿಲ್ಲೆಯ ಹಲವೆಡೆ ಸಂಭ್ರಮದಿಂದ ಹೊನ್ನೇರನ್ನು ಕಟ್ಟಿ ಭೂಮಿ ತಾಯಿಯನ್ನು ಪ್ರಾರ್ಥಿಸುವುದು ವಾಡಿಕೆ.
ಚಾಮರಾಜನಗರ:ಯುಗಾದಿ ಬಂತೆಂದರೆ ಪ್ರಕೃತಿಯಲ್ಲಿ ನವೋಲ್ಲಾಸದ ಸಡಗರ. ಅದೇ ರೀತಿ, ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆಯೂ ಇದಾಗಿದ್ದು, ಚಾಮರಾಜನಗರ ಜಿಲ್ಲೆಯ ಹಲವೆಡೆ ಸಂಭ್ರಮದಿಂದ ಹೊನ್ನೇರನ್ನು ಕಟ್ಟಿ ಭೂಮಿ ತಾಯಿಯನ್ನು ಪ್ರಾರ್ಥಿಸುವುದು ವಾಡಿಕೆಯಾಗಿದ್ದು, ತಾಲೂಕಿನ ಹೆಗ್ಗವಾಡಿಪುರ- ದೇಶವಳ್ಳಿಯಲ್ಲಿ ಹೆಚ್ ಎಂ ಸಿ ಮನೆತನ ತಲೆತಲೆಮಾರುನಿಂದ ಯಗಾದಿ ಹೊನ್ನೇರು ಆಚರಣೆ ಮಾಡಿಕೊಂಡು ಬಂದಿದ್ದು ಇಂದು ಬೆಳಿಗ್ಗೆ ಸಂಪ್ರದಾಯದಂತೆ ಹೊನ್ನೇರು ಪೂಜೆ ಸಲ್ಲಿಸಿದರು.
ರೈತ ಮುಖಂಡ ಹೆಗ್ಗವಾಡಿಪುರ ಮಹೇಶ್ ಕುಮಾರ್ ಮಾತನಾಡಿ, ಸೂರ್ಯೋದಯಕ್ಕೂ ಮುನ್ನವೇ ರೈತರು ಹೊನ್ನೇರನ್ನು ಕಟ್ಟಿ ಹೊಸ ಬಟ್ಟೆಗಳನ್ನು ಧರಿಸಿ ಜಮೀನುಗಳಿಗೆ ಗೊಬ್ಬರ ಸಿಂಪಡಿಸುವ ಮೂಲಕ ಹೊಸ ವರ್ಷದ ಮೊದಲ ದಿನ ಕೃಷಿ ಚಟುವಟಿಕೆ ಆರಂಭಿಸಿ ಮಳೆ-ಬೆಳೆ ಚೆನ್ನಾಗಿ ಬಂದು ರೋಗ-ರುಜಿನ ಮಾಯವಾಗಿ ನೆಮ್ಮದಿಯ ಜೀವನ ಸಿಗಲೆಂದು ಬೇಡುವುದು ಹಿಂದಿನಿಂದಲೂ ನಡೆದು ಬಂದಿರುವ ಸಂಪ್ರದಾಯವಾಗಿದೆ.
ಯುಗಾದಿ ಆರಂಭವಾಗುತ್ತಿದ್ದಂತೆ ಮಳೆ ಬರಲಿದ್ದು ಕೃಷಿ ಚಟುವಟಿಕೆಗಳು ಆರಂಭವಾಗುತ್ತದೆ. ಎತ್ತುಗಳು ಮತ್ತು ಗಾಡಿಗೆ ಹೊಂಬಾಳೆ ಕಟ್ಟಿ ಪೂಜೆ ಸಲ್ಲಿಸಿ ಗೊಬ್ಬರವನ್ನು ಜಮೀನುಗಳಿಗೆ ಸಿಂಪಡಿಸುವ ಸಂಪ್ರದಾಯಕ್ಕೆ ಹೊನ್ನೇರು ಎಂದು ಕರೆಯುತ್ತಾರೆ. ನಮ್ಮ ಮನೆತನವೂ ತಲೆತಲೆಮಾರುನಿಂದ ಆಚರಣೆ ಮಾಡಿಕೊಂಡು ಬಂದಿದೆ ಎಂದರು. ಜಿಲ್ಲೆಯ ಬಹುತೇಕ ಗ್ರಾಮದಲ್ಲಿ ಈ ಸಂಪ್ರದಾಯವನ್ನು ಇಂದಿಗೂ ಅದ್ಧೂರಿಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಎಂದರು.
ಈ ಸಂದರ್ಭದಲ್ಲಿ ಹೆಚ್.ಸಿ.ಶ್ರೀಕಂಠಶರ್ಮಾ, ಶೈಲಜಾ, ಹೆಚ್.ಎಂ.ಅಜಯ್, ಹೆಚ್.ಎಂ.ಓಂಕಾರ್, ಮೌನಶ್ರೀ, ಬಿಲ್ವಪ್ರಿಯ, ಸುಮುಖ್, ಶಂಕರೇಗೌಡ,ಮಂಜುನಾಥ್ ಇತರರು ಭಾಗವಹಿಸಿದ್ದರು.