ಚಾಮರಾಜನಗರ: ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಕಟ್ಟಡವನ್ನು ಲೋಕಾರ್ಪಣೆ ಮಾಡಿದರು.

ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಜಿಲ್ಲಾಕೇಂದ್ರದಲ್ಲಿ 3 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಗ್ರಂಥಾಲಯ ಕಟ್ಟಡವನ್ನು ಉದ್ಘಾಟಿಸಿದರು.
ಜಿಲ್ಲಾ ಕೇಂದ್ರ ಗ್ರಂಥಾಲಯ ಕಟ್ಟಡದಲ್ಲಿರುವ ದೈನಂದಿನ ದಿನಪತ್ರಿಕೆ ಓದುವ ಕೊಠಡಿ, ಗ್ರಂಥಾಲಯದಲ್ಲಿರುವ ಪುಸ್ತಕ ಭಂಡಾರ, ಕಟ್ಟಡದ ಮೊದಲ ಮಹಡಿಗೆ ಹೋಗುವ ಲಿಫ್ಟ್ ಹಾಗೂ ಸಭಾಂಗಣ ವೀಕ್ಷಿಸಿದರು.
ಬಳಿಕ ನೂತನ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಜಿಲ್ಲಾಕೇಂದ್ರದಲ್ಲಿ ಪುಸ್ತಕ ಪ್ರೇಮಿಗಳ ಬಹುದಿನಗಳ ಬೇಡಿಕೆಯಾಗಿದ್ದ ಸುಸಜ್ಜಿತ ಗ್ರಂಥಾಲಯವನ್ನು ಓದುಗರಿಗೆ ಮುಕ್ತಗೊಳಿಸಲಾಗಿದೆ. ಗ್ರಂಥಾಲಯ ಇಲಾಖೆಯಿಂದ 1 ಕೋಟಿ ಹಾಗೂ ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ 2 ಕೋಟಿ ವಿಶೇಷ ಅನುದಾನ (ಶೇ.6) ಸೇರಿದಂತೆ ಒಟ್ಟು 3 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಸಾರ್ವಜನಿಕರು, ವಿದ್ಯಾರ್ಥಿಗಳು ಗ್ರಂಥಾಲಯವನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.
ನೂತನ ಗ್ರಂಥಾಲಯ ಕಟ್ಟಡದಲ್ಲಿ 6080 ಪುಸ್ತಕಗಳ ಸಂಗ್ರಹವಿದ್ದು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಪುಸ್ತಕಪ್ರೇಮಿಗಳು ಸೇರಿದಂತೆ ಎಲ್ಲರಿಗೂ ಅನುಕೂಲವಾಗುವಂತೆ ನಗರದ ಹೃದಯಭಾಗದಲ್ಲಿ ನೂತನ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ಶೇ. 95ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಸುತ್ತುಗೋಡೆ, ಇತರೆ ಮೂಲಸೌಲಭ್ಯ ಕಾಮಗಾರಿಗಳಿಗಾಗಿ ಹೆಚ್ಚುವರಿ ಅನುದಾನ ಅಗತ್ಯವಾಗಿದೆ. ಮುಂದಿನ ದಿನಗಳಲ್ಲಿ ಸಿ.ಎಸ್.ಆರ್. ಫಂಡ್ ಹಾಗೂ ಎಂ.ಎಸ್.ಐ.ಎಲ್ ನಿಂದ ಅವಶ್ಯ ಅನುದಾನ ನೀಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ಮೆಡಿಕಲ್, ಎಂಜಿನಿಯರಿಂಗ್, ಕಾನೂನು, ಕೃಷಿ ಸೇರಿದಂತೆ ವಿವಿಧ ಕಾಲೇಜುಗಳು ಜಿಲ್ಲೆಯಲ್ಲಿ ಆರಂಭವಾಗಿವೆ. ಜಿಲ್ಲೆಯನ್ನು ಶೈಕ್ಷಣಿಕವಾಗಿ ಮುಂಚೂಣಿಗೆ ತರುವುದು ಪ್ರಮುಖ ಉದ್ದೇಶವಾಗಿದೆ. ಈಗ ಸುಸಜ್ಜಿತ ಗ್ರಂಥಾಲಯ ಕಾರ್ಯಾರಂಭ ಮಾಡಿದೆ. ಇದು ಸ್ಪರ್ಧಾತ್ಮಕ ಯುಗ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಲು ಗ್ರಂಥಾಲಯ ವೇದಿಕೆಯಾಗಲಿದೆ. ಗ್ರಂಥಾಲಯಕ್ಕೆ ಅವಶ್ಯ ಪುಸ್ತಕಗಳ ಬೇಡಿಕೆ ಇದ್ದರೆ ಪೂರೈಸಲಾಗುವುದು. ಡಾ. ಬಿ.ಆರ್. ಅಂಬೇಡ್ಕರ್ ಆಶಯದಂತೆ ವಿದ್ಯಾರ್ಥಿಗಳು ಪುಸ್ತಕಗಳನ್ನು ಓದಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಗ್ರಂಥಾಲಯ ಸಾಕಷ್ಟು ನೆರವಾಗಲಿದೆ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಹೇಳಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ ಅವರು ಮಾತನಾಡಿ ಈ ಗ್ರಂಥಾಲಯವು ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಉತ್ತಮ ಮಾಹಿತಿ ಕೇಂದ್ರವಾಗಲಿದೆ. ವಿದ್ಯಾರ್ಥಿಗಳು ಗ್ರಂಥಾಲಯವನ್ನು ಬಳಸಿಕೊಂಡು ವಿವಿಧ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಜಿಲ್ಲೆಗೆ ಕೀರ್ತಿ ತರಬೇಕೆಂದು ಹೇಳಿದರು.
ಜಿಲ್ಲಾಧಿಕಾರಿ ಶ್ರೀರೂಪ ಅವರು ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ, ಪುಸ್ತಕಪ್ರೇಮಿಗಳಿಗೆ ಇಂದು ಅವೀಸ್ಮರಣೀಯ ದಿನವಾಗಿದ್ದು, ಗ್ರಂಥಾಲಯವು ಪ್ರತಿಯೊಬ್ಬರಿಗೂ ಜೀವನದ ಅವಿಭಾಜ್ಯ ಅಂಗವಾಗಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ವಿದ್ಯಾರ್ಥಿಗಳು ಗ್ರಂಥಾಲಯ ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಮಾತನಾಡಿ ಜಿಲ್ಲಾಕೇಂದ್ರದಲ್ಲಿ ಗ್ರಂಥಾಲಯದ ನೂತನ ಕಟ್ಟಡ ಆಗಿದ್ದು, ಜಿಲ್ಲೆಯ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಮೆರಿಟ್ ಪಡೆದು ಟಾಪರ್ ಗಳಾಗಿ ಹೊರಹೊಮ್ಮವಂತೆ ಹಾರೈಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಸಭೆ ಪೌರಾಯುಕ್ತರಾದ ಪರಶುರಾಮ್ ಛಲವಾದಿ, ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಶಿವಸ್ವಾಮಿ, ಕ್ಷೇತ್ರ ಶಿಕ್ಷಣಧಿಕಾರಿ ಹನುಮಶೆಟ್ಟಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು