ಚಾಮರಾಜನಗರ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ‘ನನ್ನ ಮತ-ನನ್ನ ಹಕ್ಕು’ ಎಂಬ ಮಹತ್ವ ಸಂದೇಶ ಸಾರುವ ಉದ್ದೇಶದೊಂದಿಗೆ ಚಾಮರಾಜನಗರ ಜಿಲ್ಲೆಯಿಂದ ಬೆಂಗಳೂರಿಗೆ ಹೊರಟ ಬೈಕ್ ರ್ಯಾಲಿಗೆ ನಗರದಲ್ಲಿಂದು ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಚಾಲನೆ ನೀಡಿದರು.
ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ರೋಟರಿ ಸಿಲ್ಕ್ ಸಿಟಿ ಸಹಯೋಗದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ಕರ್ ಅಕ್ಷಯ್ ಅಶೋಕ್ ನೇತೃತ್ವದ ಬೈಕ್ ರ್ಯಾಲಿ ತಂಡಕ್ಕೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ನಿಶಾನೆ ತೋರಿ ಶುಭ ಹಾರೈಸಿದರು.
ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಸಂವಿಧಾನ ಪೀಠಿಕೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಬಳಿಕ ಮಾತನಾಡಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ‘ನನ್ನ ಮತ-ನನ್ನ ಹಕ್ಕು’ ಘೋಷವಾಕ್ಯದೊಂದಿಗೆ ಬೆಂಗಳೂರಿನಲ್ಲಿ ನಡೆಯುವ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರತಿ ಜಿಲ್ಲೆಗಳಿಂದ 10 ಮಂದಿ ತಂಡವು ಹೊರಡುತ್ತಿದೆ ಎಂದರು.
ಭಾರತ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. 1893ರಲ್ಲಿ ಸ್ವಿಡ್ಜರ್ಲ್ಯಾಂಡಿನಲ್ಲಿ ಮೊದಲಬಾರಿಗೆ ಪ್ರಜಾಪ್ರಭುತ್ವ ಜಾರಿಯಾಯಿತು. ಪ್ರಸ್ತುತ 90 ರಿಂದ 110 ದೇಶಗಳಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆ. ಪ್ರಜಾಪ್ರಭುತ್ವದಡಿ ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ, ಪ್ರಜೆಗಳಿಂದ ರಚಿತವಾದ ಸರ್ಕಾರವೇ ಆಡಳಿತ ನಡೆಸಲಿದೆ. ಸಂವಿಧಾನ ರಚನೆ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ಅವರು ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಕೊಟ್ಟಿದ್ದಾರೆ. ಎಲ್ಲರಿಗೂ ಸಮಾನತೆ, ಎಲ್ಲಾ ಕ್ಷೇತ್ರಗಳಲ್ಲಿ ಸಮಾನ ಅವಕಾಶಗಳನ್ನು ನೀಡಿದ ಅಂಬೇಡ್ಕರ್ ಅವರನ್ನು ಸ್ಮರಿಸುತ್ತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸೆಪ್ಟೆಂಬರ್ 15ರಂದು ಪ್ರತಿವರ್ಷ ಆಚರಿಸಲಾಗುತ್ತಿದೆ ಎಂದು ಶಾಸಕರಾದ ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ವಿಧಾನ ಪರಿಷತ್ ಶಾಸಕರಾದ ಡಾ. ಡಿ. ತಿಮ್ಮಯ್ಯ ಅವರು ಸ್ವಾತಂತ್ರ್ಯಪೂರ್ವದಲ್ಲಿ ಬ್ರಿಟಿಷರ ಆಡಳಿದ ಭಾರತದಲ್ಲಿ ಯಾವುದೇ ಮೂಲಸೌಲಭ್ಯಗಳಿಲ್ಲದೇ ಜನರ ಪರಿಸ್ಥಿತಿ ಸಂಕಷ್ಟದಲ್ಲಿತ್ತು. ಸ್ವಾತಂತ್ರ್ಯನಂತರದ ಭಾರತ ಸಾಮಾಜಿಕ, ಅರ್ಥಿಕ, ರಾಜಕೀಯ, ಸಮಾನತೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿ ಅಭಿವೃದ್ಧೀಶೀಲ ರಾಷ್ಟ್ರವಾಗಿದೆ. ಇದಕ್ಕೆ ನಮ್ಮ ಸುಭದ್ರ ಪ್ರಜಾಪ್ರಭುತ್ವ ಹಾಗೂ ಶ್ರೇಷ್ಠ ಸಂವಿಧಾನವೇ ಕಾರಣವಾಗಿದೆ. ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ನೀಡಿರುವ ಸಂವಿಧಾನವವನ್ನು ಪ್ರತಿಯೊಬ್ಬರು ಗೌರವಿಸಬೇಕು. ರಾಷ್ಟ್ರಕವಿ ಕುವೆಂಪು ಹೇಳಿದಂತೆ ಸರ್ವ ಜನಾಂಗದ ಶಾಂತಿಯ ತೋಟವನ್ನು ಎಲ್ಲರೂ ಸೇರಿ ಕಟ್ಟೋಣ ಎಂದರು.
ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ಕರ್ ಅಕ್ಷಯ್ ಅಶೋಕ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಎಚ್.ಎಸ್. ಬಿಂದ್ಯಾ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮದ ಆರಂಭದಲ್ಲಿ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಇತರೆ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ಕರ್ ಅಕ್ಷಯ್ ಅಶೋಕ್ ನೇತೃತ್ವದ ಬೈಕ್ ರ್ಯಾಲಿ ತಂಡದಲ್ಲಿ ಪೊಲೀಸ್ ಇಲಾಖೆಯ ಮಹಮದ್ ಫಾರೂಖ್, ರೋಟರಿ ಸಿಲ್ಕ್ ಸಿಟಿ ಸಹಾಯಕ ಗೌರ್ನರ್ ಗಿರೀಶ್, ಸದಸ್ಯರಾದ ಶರತ್ಕುಮಾರ್, ಬಸವರಾಜು, ಮುರುಗೇಂದ್ರಸ್ವಾಮಿ, ಮಹೇಶ್ಕುಮಾರ್, ಕುಮಾರಸ್ವಾಮಿ, ಎಸ್. ಮಹೇಶ್, ಶರತ್ಕುಮಾರ್ ಬೆಂಗಳೂರಿಗೆ ಹೊರಟರು. ಸುರಕ್ಷತೆಯ ಹಿತದೃಷ್ಠಿಯೊಂದಿಗೆ ಪೊಲೀಸ್ ಇಲಾಖೆಯ ಭದ್ರತಾ ವಾಹನ, ಸಿಬ್ಬಂದಿ, ಆರೋಗ್ಯ ಇಲಾಖೆಯ ವೈದ್ಯರು, ಸಹಾಯಕರು ಅಂಬುಲೆನ್ಸ್ನೊಂದಿಗೆ ಬೈಕ್ ರ್ಯಾಲಿ ಜೊತೆ ತೆರಳಿದರು.