ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು 170ನೇ ದಿನವಾದ ಇಂದು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು.
169ದಿನಗಳಿಂದಲೂ ನಿರಂತರವಾಗಿ ಪ್ರತಿಭಟಿಸುತ್ತಿರುವ ಕಾರ್ಯಕರ್ತರು, ಇಂದು ಕೂಡಾ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ನಗರದ ಭುವನೇಶ್ವರಿ ವೃತ್ತದಲ್ಲಿ ಹೆದ್ದಾರಿ ಸಂಚಾರವನ್ನು ತಡೆದು ಪ್ರತಿಭಟಿಸಿದರು.
ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕರ್ನಾಟಕದಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿದೆ. ಜಲಾಶಯಗಳು ಬತ್ತಿಹೋಗುತ್ತಿವೆ. ಬಿಸಿಲಿನ ತಾಪ ಹೆಚ್ಚಾಗಿದ್ದು, ಇಂತಹ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ಕ್ರಮವನ್ನು ಖಂಡಿಸಿ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ಮತ್ತು ಕಾವೇರಿ ನಿರ್ವಹಣಾ ಮಂಡಳಿ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕೇಂದ್ರ ಸರ್ಕಾರ ಒಕ್ಕೂಟದ ವ್ಯವಸ್ಥೆಯ ಮೇಲೆ ಗೌರವ ಇದ್ದರೆ, ಎರಡು ರಾಜ್ಯಗಳನ್ನು ಕರೆದು ಮಾತನಾಡುವ ಮೂಲಕ ಮಧ್ಯ ಪ್ರವೇಶ ಮಾಡಿ ರಾಜ್ಯದ ಜನತೆಗೆ ನ್ಯಾಯ ಒದಗಿಸುವಂತಹ ಕೆಲಸವನ್ನು ಮಾಡಬೇಕು ಎಂದರು.
ಮುಂದಿನ ದಿನಗಳಲ್ಲಿ ಕುಡಿಯಲು ನೀರಿಲ್ಲದಂತಹ ಪರಿಸ್ಥಿತಿಗೆ ಸಿಲುಕಬೇಕಾಗುತ್ತದೆ. ತಮಿಳುನಾಡಿನ ಒತ್ತಡಕ್ಕೆ ಮಣಿದು ಹರಿಸುತ್ತಿರುವ ಕಾವೇರಿ ನೀರನ್ನು ತಕ್ಷಣವೇ ನಿಲ್ಲಿಸಬೇಕು ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಎಲ್ಲಿಯವರೆಗೆ ನೀವು ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವುದಿಲ್ಲವೋ ಅಲ್ಲಿಯವರೆಗೂ ಉಗ್ರವಾದ ಹೋರಾಟವನ್ನು ಮಾಡುತ್ತೇವೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಗು.ಪುರುಷೋತ್ತಮ್, ರವಿಚಂದ್ರ, ಚಾ.ಸಿ.ಸಿದ್ದರಾಜು, ಚಾ.ವೆಂ.ರಾಜಗೋಪಾಲ್, ಗಡಿನಾಡು ಕನ್ನಡ ರಕ್ಷಣ ಹೋರಾಟ ವೇದಿಕೆ ಅಧ್ಯಕ್ಷ ಚಾ.ರಂ.ಕುಮಾರ್, ನಿಜಧ್ವನಿ ಗೋವಿಂದರಾಜು, ವೀರಭದ್ರ, ನಂಜುಂಡಶೆಟ್ಟಿ, ಮಹೇಶ್ಗೌಡ, ಲಿಂಗರಾಜು, ಆಟೋ ನಾಗೇಶ್, ಸೋಮವಾರಪೇಟೆ ಮಂಜು ಮತ್ತಿತರರಿದ್ದರು.