ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 132 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇಂದು ಕೂಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ .ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಕಾರಗಳು, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿನಲ್ಲಿ ನೀರು ತುಂಬಿದ್ದರೂ ಕೂಡ ಕಾವೇರಿ ನೀರಿನ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿಲ್ಲ. ಕರ್ನಾಟಕ ರಾಜ್ಯದ ಮೇಲೆ ಮಲತಾಯಿಧೋರಣೆ ಅನುಸರಿಸುತ್ತಿದೆ ಎಂದು ದೂರಿದರು.
ರೈತರ ಜೀವನಾಡಿಯಾದ ಕಾವೇರಿ ನೀರನ್ನು ಸಂರಕ್ಷಣೆ ಮಾಡಬೇಕು ಮಳೆ ಅಭಾವದಿಂದ ರಾಜ್ಯದಲ್ಲಿ ಜಲಾಶಯಗಳು ಬರಿದಾಗುತ್ತಿದ್ದು, ಎಲ್ಲತರದ ಬೆಳೆಗಳು ಸಂಪೂರ್ಣ ಒಣಗುತ್ತಿವೆ. ರಾಜ್ಯದಲ್ಲಿ ನೀರಿನ ಅಭಾವ ಇದ್ದು, ಮುಂದಿನ ದಿನಗಳಲ್ಲಿ ತೀವ್ರ ಬರಗಾಲ ಬರಲಿದೆ.ಹೀಗಾಗಿ ಕರ್ನಾಟಕ ಸರ್ಕಾರ ಎಚ್ಚೆತ್ತುಗೊಂಡು ತಮಿಳುನಾಡಿಗೆ ಬಿಟ್ಟಿರುವ ನೀರನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದರು.
ಪ್ರತಿಭಟನೆಯಲ್ಲಿ ಚಾ.ವೆಂ.ರಾಜ್ ಗೋಪಾಲ್, ಗು.ಪುರುಷೋತ್ತಮ್, ರವಿಚಂದ್ರಪ್ರಸಾದ್, ಪ್ರಕಾಶ್, ಮಂಜು, ಲಿಂಗರಾಜು,ವೀರಭದ್ರ ಇತರರು ಭಾಗವಹಿಸಿದ್ದರು.