ಜೂ. 27ರಂದು ನಗರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ : ಸಕಲ ಸಿದ್ದತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಸೂಚನೆ

ಚಾಮರಾಜನಗರ, ಜೂನ್ 23 (ಕರ್ನಾಟಕ ವಾರ್ತೆ):- ನವಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಇದೇ ತಿಂಗಳ 27ರಂದು ನಗರದಲ್ಲಿ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಕೇಂದ್ರದಲ್ಲಿ ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಚರಿಸುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರ ಅಧ್ಯಕ್ಷತೆಯಲ್ಲಿ ಸಮುದಾಯದ ಮುಖಂಡರು, ಪದಾಧಿಕಾರಿಗಳು ಹಾಗೂ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಆರಂಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ನಾಡಿನ ಅಭಿವೃದ್ಧಿಗಾಗಿ ಜನಪರ ಯೋಜನೆಗಳನ್ನು ಜಾರಿಗೊಳಿಸಿದ ಕೆಂಪೇಗೌಡ ಅವರ ಪರಿಶ್ರಮದಿಂದ ಬೆಂಗಳೂರು ಇಂದು ವಿಶ್ವಮಟ್ಟದಲ್ಲಿ ಹೆಸರುಗಳಿಸಿದೆ. ಸರ್ಕಾರದ ನಿರ್ದೇಶನದಂತೆ ಕೆಂಪೇಗೌಡ ಅವರ ಜೀವನ-ಸಾಧನೆಗಳನ್ನು ಸ್ಮರಿಸುವ ಸಲುವಾಗಿ ಇದೇ ತಿಂಗಳ 27ರಂದು ನಗರದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮವನ್ನು ಜೂನ್ 27ರಂದು ನಗರದ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ. ಕಾರ್ಯಕ್ರಮ ಆಯೋಜನೆಯಲ್ಲಿ ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿಯವರು ಸೂಚಿಸಿದರು. 

ಬಳಿಕ ಹೆಚ್ಚುವರಿ ಜಿಲ್ಲಾಧಿಕಾರಿಯವರು ಕೆಂಪೇಗೌಡ ಜಯಂತಿ ಅಚರಣೆಗೆ ಸಂಬಂಧಿಸಿದಂತೆ ಅನಿಸಿಕೆ, ಅಭಿಪ್ರಾಯ ಹಾಗೂ ಸಲಹೆ ನೀಡುವಂತೆ ಸಭೆಯಲ್ಲಿ ಹಾಜರಿದ್ದ ಸಮಾಜದ ಮುಖಂಡರು ಹಾಗೂ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳಿಗೆ ಕೋರಿದರು.  

ಸಮಾಜದ ಮುಖಂಡರು ಮಾತನಾಡಿ ಈ ಬಾರಿಯ ಕೆಂಪೇಗೌಡ ಜಯಂತಿಯ ಮೆರವಣಿಗೆಯನ್ನು ರದ್ದುಪಡಿಸಿ ವೇದಿಕೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ವೇದಿಕೆ ಕಾರ್ಯಕ್ರಮದ ಬ್ಯಾಕ್‍ಡ್ರಾಪ್ ಉತ್ತಮವಾಗಿರಬೇಕು. ಆಹ್ವಾನ ಪತ್ರಿಕೆಯನ್ನು ಶಿಷ್ಠಾಚಾರ ಪ್ರಕಾರವೇ ಮುದ್ರಿಸಿ ಎಲ್ಲಾ ಗಣ್ಯರಿಗೂ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಜನಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿ, ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲು ಕೆಂಪೇಗೌಡರ ಬಗ್ಗೆ ಹೆಚ್ಚಾಗಿ ಅಧ್ಯಯನ ಮಾಡಿರುವ ನುರಿತ ಪರಿಣಿತರನ್ನು ಆಯ್ಕೆ ಮಾಡಬೇಕು ಎಂದರು. 

ಜಯಂತಿ ಆಚರಣೆ ದಿನದಂದು ನಗರದ ಪ್ರಮುಖ ವೃತ್ತಗಳಲ್ಲಿ ಮತ್ತು ಜಿಲ್ಲಾ ರಂಗಮಂದಿರದ ಎರಡು ಕಡೆ ಕೆಂಪೇಗೌಡರ ಜನಪರ ಸಾಧನೆ ಬಿಂಬಿಸುವ ಫ್ಲೆಕ್ಸ್, ಬ್ಯಾನರ್‍ಗಳನ್ನು ಅಳವಡಿಸಬೇಕು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಕೆಂಪೇಗೌಡರ ಕುರಿತ ಹಾಡುಗಾರಿಕೆ ಏರ್ಪಡಿಸಬೇಕು. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕೆಂಪೇಗೌಡರ ಭಾವಚಿತ್ರ ಅಳವಡಿಕೆಯಾಗಬೇಕು. ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸಮುದಾಯದ ಮಕ್ಕಳಿಗೆ ಬಹುಮಾನ ವಿತರಿಸಬೇಕು.  ಶಾಲಾ ಕಾಲೇಜು ಮಕ್ಕಳಿಗೆ ಕೆಂಪೇಗೌಡರ ಬಗ್ಗೆ ಚಿತ್ರಕಲೆ, ಪ್ರಬಂಧ, ಇತರೆ ಸ್ಪರ್ಧೆ ಏರ್ಪಡಿಸಿ ವಿಜೇತರನ್ನು ಕಾರ್ಯಕ್ರಮದಲ್ಲಿ ಗೌರವಿಸಬೇಕು ಎಂಬುದು ಸೇರಿದಂತೆ ಇನ್ನಿತರೆ ಸಲಹೆಗಳನ್ನು ಸಮುದಾಯದ ಮುಖಂಡರು ನೀಡಿದರು.

ಮುಖಂಡರ ಸಲಹೆಗಳಿಗೆ ಸಹಮತ ವ್ಯಕ್ತಪಡಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ಕಾರ್ಯಕ್ರಮ ಆಚರಣೆ ಎಲ್ಲಾ ಸಿದ್ದತಾ ಕೆಲಸಗಳನ್ನು ಅದಷ್ಟು ಶೀಘ್ರವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ನಂಜುಂಡಯ್ಯ, ಸಮುದಾಯದ ಮುಖಂಡರುಗಳಾದ ಸುದರ್ಶನ್ ಗೌಡ, ಸೋಮಣ್ಣ, ಚಿನ್ನಮೂರ್ತಿ, ಮಹೇಶ್, ನಾಗೇಂದ್ರ, ಚಾ.ರಂ. ಶ್ರೀನಿವಾಸ್‍ಗೌಡ ಸಂಘಸಂಸ್ಥೆ ಮುಖಂಡರಾದ ಜಿ. ಬಂಗಾರು. ಜನಪದ ಗಾಯಕರಾದ ಸಿ.ಎಂ. ನರಸಿಂಹಮೂರ್ತಿ, ಆಲೂರು ನಾಗೇಂದ್ರ, ನಾರಾಯಣ್, ಇತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *