ಲೋಕಸಭಾ ಸದಸ್ಯ ಸುನೀಲ್ ಬೋಸ್ ಅವರಿಂದ ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ : ಶಾಲೆ ವೀಕ್ಷಣೆ

ಚಾಮರಾಜನಗರ: ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಇಂದು ಕೊಳ್ಳೇಗಾಲ ಭಾಗಕ್ಕೆ ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ ನಡೆಸಿದರು.

ಕೊಳ್ಳೇಗಾಲ ಭಾಗದ ಸತ್ತೇಗಾಲದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪರಿಶೀಲನೆ ನಡೆÀಸಿದ ಲೋಕಸಭಾ ಸದಸ್ಯರು ಸ್ಥಳೀಯ ಗ್ರಾಮಸ್ಥರಿಂದ ಅಹವಾಲುಗಳನ್ನು ಆಲಿಸಿದರು. 

ರಸ್ತೆ ಸುರಕ್ಷತೆ ಸಂಬಂಧ ಅಳವಡಿಸಿರುವ ವ್ಯವಸ್ಥೆಗಳನ್ನು ವೀಕ್ಷಿಸಿದರು. ಅಪಘಾತಗಳಿಗೆ ಅವಕಾಶವಾಗದಂತೆ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು. ಯಾವುದೇ ದೂರುಗಳು ತೊಂದರೆಗಳಿಗೆ ಆಸ್ಪದವಾಗದಂತೆ ನಿರ್ವಹಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸಂಸದರು ಸೂಚನೆ ನೀಡಿದರು. 

ಇದೇ ವೇಳೆ ಸ್ಥಳೀಯರು ಟೋಲ್ ನಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದರು. ಈ ಕುರಿತು ಸೂಚನೆ ನೀಡಿದ ಸಂಸದರು, ಸ್ಥಳೀಯ ಗ್ರಾಮಸ್ಥರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಸ್ಥಳೀಯರ ಓಡಾಟಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.   

ಕೊಳ್ಳೇಗಾಲ ತಾಲೂಕಿನ ಮುಡಿಗುಂಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದಿಡೀರ್ ಭೇಟಿ ನೀಡಿ ಪರಿಶೀಲಿಸಿದರು. ಶಾಲೆಯ ಕಟ್ಟಡ ವೀಕ್ಷಿಸಿ ಅಲ್ಲಿಯ ಶಿಕ್ಷಕರು ಸಿಬ್ಬಂದಿಯೊಂದಿಗೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಪರಿಹರಿಸಲು ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳಿಗೆ ಸೂಚಿಸಿದರು. ಶಾಲೆಯ ಬೇಡಿಕೆಗಳ ಬಗ್ಗೆ ಮನವಿ ಸ್ವೀಕರಿಸಿದ ಸಂಸದರು ಸಕಾರಾತ್ಮಕವಾಗಿ ಈಡೇರಿಸುವ ಭರವಸೆ ನೀಡಿದರು.

ಭೇಟಿಯ ವೇಳೆ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಮಾಜಿ ಶಾಸಕರಾದ ಆರ್. ನರೇಂದ್ರ, ಅಧಿಕಾರಿಗಳು, ಇತರೆ ಮುಖಂಡರು ಇದ್ದರು.

Leave a Reply

Your email address will not be published. Required fields are marked *