ಚಾಮರಾಜನಗರ: ಲೋಕಸಭಾ ಸದಸ್ಯರಾದ ಸುನಿಲ್ ಬೋಸ್ ಅವರು ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಅವರ ಕಚೇರಿಯಲ್ಲಿ ಇಂದು ರೈಲ್ವೆ ಹಾಗೂ ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಮೈಸೂರು-ಚಾಮರಾಜನಗರ ರೈಲ್ವೆ ವಿದ್ಯುದೀಕರಣ ಕಾಮಗಾರಿ ಮತ್ತು ಚಾಮರಾಜನಗರದ ರೈಲ್ವೆ ನಿಲ್ದಾಣದ ಕಾಮಗಾರಿಯ ಬಗ್ಗೆ ಸಮಗ್ರ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡರು.ನಿಗದಿತ ಸಮಯದೊಳಗೆ ಕಾಮಗಾರಿಯನ್ನು ಮುಗಿಸುವಂತೆ ಸೂಚನೆ ನೀಡಿದರು.
ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ವನ್ಯಜೀವಿಧಾಮದಲ್ಲಿ ಇತ್ತೀಚೆಗೆ ನಡೆದ ಹುಲಿ ಹತ್ಯೆ ಮತ್ತು ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷದ ಕುರಿತು ಮಾಹಿತಿ ಪಡೆದರು.
ಈ ನಿಟ್ಟಿನಲ್ಲಿ, ಅರಣ್ಯದಂಚಿನಲ್ಲಿರುವ ಗ್ರಾಮಸ್ಥರೊಂದಿಗೆ ಸೌಜನ್ಯದಿಂದ ವರ್ತಿಸಿ, ಅವರ ವಿಶ್ವಾಸ ಗಳಿಸಬೇಕು. ಅರಣ್ಯದ ಮಹತ್ವ ತಿಳಿದು ಮುಂದಿನ ದಿನಗಳಲ್ಲಿ ವನ್ಯಜೀವಿಗಳ ಹತ್ಯೆಯಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ವಹಿಸುವಂತೆ ಲೋಕಸಭಾ ಸದಸ್ಯರಾದ ಸುನಿಲ್ ಬೋಸ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.