ಮದ್ಯ, ಮಾದಕ ವಸ್ತುಗಳ ಸೇವನೆ ತ್ಯಜಿಸಲು ದೃಢಸಂಕಲ್ಪ ಮಾಡಿ : ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್. ಚಿದಂಬರ ಸಲಹೆ

ಚಾಮರಾಜನಗರ: ಜೀವ, ಜೀವನ ಎರಡೂ ಅಮೂಲ್ಯವಾಗಿದ್ದು, ಆರೋಗ್ಯಕ್ಕೆ ಮಾರಕವಾಗಿರುವ ಮದ್ಯ ಮತ್ತು ಮಾದಕ ಪದಾರ್ಥಗಳನ್ನು ತ್ಯಜಿಸಲು ಪ್ರತಿಯೊಬ್ಬರು ದೃಢಸಂಕಲ್ಪ ಮಾಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ ಅವರು ಸಲಹೆ ಮಾಡಿದರು.   

ಚಾಮರಾಜನಗರ ವಿಶ್ವವಿದ್ಯಾನಿಲಯದ ಸುವರ್ಣ ಗಂಗೋತ್ರಿಯಲ್ಲಿಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಚಾಮರಾಜನಗರ ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ಸೇವನೆ ದುಷ್ಪರಿಣಾಮಗಳ ಕುರಿತು ಆಯೋಜಿಸಲಾಗಿದ್ದ ವಿಚಾರ ಸಂಕಿರಣ ಹಾಗೂ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕುತೂಹಲದ ಮೋಜಿನ ಜೀವನ, ಜಿಗುಪ್ಸೆ, ಕೆಲಸದ ಒತ್ತಡದಿಂದ ಮುಕ್ತರಾಗಲು ಆರಂಭಿಸುವ ಮದ್ಯ, ಮಾದಕ ಪದಾರ್ಥಗಳ ಸೇವನೆ, ಇತ್ತೀಚೆಗೆ ಮಾರುಕಟ್ಟೆಗೆ ಬಂದಿರುವ ಕೈಗೆ ಅಂಟಿಸಿಕೊಳ್ಳುವ ನಿಕೋಟಿನ್ ಪ್ಯಾಚ್‍ಗಳು ಆರೋಗ್ಯಕ್ಕೆ ಹಾನಿಕರ. ಮಾದಕ ಉತ್ಪನ್ನಗಳಲ್ಲಿರುವ ರಾಸಾಯನಿಕಗಳು ಬಾಯಿ, ಯಕೃತ್, ಮೆದುಳು, ಶ್ವಾಸಕೋಶ ಕ್ಯಾನ್ಸರ್‍ನಂತಹ ಮಾರಕ ರೋಗಗಳಿಗೂ ಕಾರಣವಾಗಿವೆ. ಇವೆಲ್ಲವೂ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮಗಳನ್ನು ಉಂಟುಮಾಡಲಿವೆ. ಮದ್ಯ, ಮಾದಕ ಪದಾರ್ಥಗಳ ಸೇವನೆಯ ಅಭ್ಯಾಸವಿರುವವರು ಅವುಗಳಿಂದ ದೂರವಿರಲು ದೃಢ ಮನಸ್ಸು ಮಾಡಬೇಕು ಎಂದರು.

ಮದ್ಯ, ಮಾದಕ ಪದಾರ್ಥ ಸೇವನೆಯಿಂದ ಕುಟುಂಬ ಆರ್ಥಿಕವಾಗಿ ದುಸ್ಥಿತಿಗೆ ತಲುಪಲಿದೆ. ರಸ್ತೆ ಅಪಘಾತಗಳು ಸಂಭವಿಸುತ್ತವೆ. ಮದ್ಯ, ಮಾದಕ ಪದಾರ್ಥಗಳ ಸೇವನೆ ಇತ್ತೀಚೆಗೆ ಮಹಿಳೆಯರಲ್ಲೂ ಕಂಡುಬರುತ್ತಿದೆ. ಇವುಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರು, ಯುವಜನರು ಹಾಗೂ ಮಕ್ಕಳಿಗೆ ಬಾಲ್ಯದಿಂದಲೇ ಅರಿವು ಮೂಡಿಸಬೇಕಾಗಿದೆ. ತಂಬಾಕು ದೇಹಕ್ಕೂ, ದೇಶಕ್ಕೂ ಹಾನಿಕರವಾಗಿದ್ದು, ಅವುಗಳನ್ನು ತ್ಯಜಿಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಡಾ. ಚಿದಂಬರ ಅವರು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಂ.ಆರ್. ಗಂಗಾಧರ್ ಅವರು ಮಾತನಾಡಿ ಮನುಕುಲಕ್ಕೆ ಮಾರಕವಾಗಿರುವ ಮದ್ಯ, ಮಾದಕ ವಸ್ತುಗಳ ದುಷ್ಪರಿಣಾಮಗಳು ವಿಶ್ವದೆಲ್ಲೆಡೆ ಸರ್ವೇಸಾಮಾನ್ಯವಾಗಿದೆ. ಇವುಗಳ ಸೇವನೆಯಿಂದ ಕುಟುಂಬ ಅರ್ಥಿಕ ಸಂಕಷ್ಟಕ್ಕೀಡಾಗಲಿದೆ. ಹೆಣ್ಣುಮಕ್ಕಳು ಚಿಕ್ಕ ವಯಸ್ಸಿನಲ್ಲಿಯೇ ವಿಧವೆಯರಾಗುತ್ತಿದ್ದಾರೆ. ಇದು ತಪ್ಪಬೇಕು. ಈ ನಿಟ್ಟಿನಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಹೊರಬರಲು ಪ್ರತಿಯೊಬ್ಬರು ಗಟ್ಟಿಮನಸ್ಸು ಮಾಡಬೇಕು. ವಿದ್ಯಾರ್ಥಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.

ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಸಚಿವರಾದ ಆರ್. ಲೋಕನಾಥ್ ಅವರು ನೈಜ ಘಟನೆಗಳನ್ನು ಉದಾಹರಿಸಿ ಮಾತನಾಡಿ ನಾವು ದಿನನಿತ್ಯ ಸೇವಿಸುವ ಆಹಾರ ಪದಾರ್ಥಗಳಲ್ಲಿ ನಮ್ಮ ಆರೋಗ್ಯಕ್ಕೆ ಒಳ್ಳೇಯದೇ ಎಂಬ ಬಗ್ಗೆ ಖಾತರಿಪಡಿಸಿಕೊಳ್ಳಬೇಕಾಗಿದೆ. ಇನ್ನೂ ಮಾದಕ ಪದಾರ್ಥಗಳ ಸೇವನೆ ಬೇಕೆ, ಬೇಡವೇ ಎಂಬ ಬಗ್ಗೆ ನಮ್ಮ ಆತ್ಮಸಾಕ್ಷಿಯನ್ನೇ ಕೇಳಬೇಕು. ನಮ್ಮ ಮನಸಾಕ್ಷಿಯನ್ನು ಮುಂದಿಟ್ಟು ಮದ್ಯ, ಮಾದಕ ಪದಾರ್ಥಗಳನ್ನು ತ್ಯಜಿಸಿದರೆ ಜಾಗೃತಿಯ ಅವಶ್ಯಕತೆಯೇ ಇಲ್ಲ ಎಂದರು. 

ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ.ಜಿ.ವಿ. ವೆಂಕಟರಮಣ ಅವರು ಮಾತನಾಡಿ ಮಾದಕ ಪದಾರ್ಥಗಳ ಸೇವನೆಯಿಂದ ಸಾಕಷ್ಟು ಕುಟುಂಬಗಳು ಬೀದಿಗೆ ಬಿದ್ದಿವೆ. ಯುವಜನಾಂಗ ಮದ್ಯ, ತಂಬಾಕು ಸೇವನೆ ತ್ಯಜಿಸಿ ಇತರರಿಗೆ ಮಾದರಿಯಾಗಬೇಕು. ಜಿಲ್ಲೆಯನ್ನು ಆಲ್ಕೋಹಾಲ್ ಮುಕ್ತ ಜಿಲ್ಲೆಯಾಗಿ ಪರಿವರ್ತಿಸಲು ಪಣತೊಡಬೇಕು ಎಂದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋರೋಗ ತಜ್ಞರಾದ ಡಾ. ಮೇರಿ ಅಂಜಲ ಹಾಗೂ ಮಹದೇಶ್ ಅವರು ಕಾರ್ಯಕ್ರಮದಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ಸೇವನೆ ದುಷ್ಪರಿಣಾಮಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. 

ಕಾರ್ಯಕ್ರಮದಲ್ಲಿ ಯಳಂದೂರಿನ ರಂಗದೇಗುಲ ಕಲಾವೇದಿಕೆಯ ಶಾಂತರಾಜು ಮತ್ತು ತಂಡದವರು ಮದ್ಯ ಮತ್ತು ಮಾದಕ ವಸ್ತುಗಳ ಸೇವನೆ ದುಷ್ಪರಿಣಾಮಗಳ ಕುರಿತು ಜಾಗೃತಿ ಗೀತೆಗಳನ್ನು ಪ್ರಸ್ತುತಪಡಿಸುವ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಎ. ರಮೇಶ, ವಾರ್ತಾ ಸಹಾಯಕರಾದ ಸುರೇಶ್‍ಕುಮಾರ್, ವಿಶ್ವವಿದ್ಯಾಲಯದ ಉಪನ್ಯಾಸಕರಾದ ಗುರುರಾಜ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *