ಬೆಂಗಳೂರು: ವೈದ್ಯ ವೃತ್ತಿ ಕೇವಲ ಜೀವನೋಪಾಯಕ್ಕಾಗಿ ಮಾತ್ರ ಮಾಡುವ ಕೆಲಸವಲ್ಲ. ಅದು ನಿಜವಾದ ಸಮಾಜ ಸೇವೆಯಾಗಿದೆ. ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ ಅವರ ಆರೋಗ್ಯವನ್ನು ಕಾಪಾಡುವುದು ಪ್ರತಿಯೊಬ್ಬ ವೈದ್ಯರ ಪ್ರಮುಖ ಕರ್ತವ್ಯ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದರು.
ಬೆಂಗಳೂರಿನ ಪೋರ್ ಸೀಸನ್ ಹೋಟೆಲ್ ನಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಅಪ್ರತಿಮ ಸೇವೆ ಸಲ್ಲಿಸುತ್ತಿರುವ ಉತ್ತರ ಕರ್ನಾಟಕದ ಶ್ರೇಷ್ಠ ವೈದ್ಯರು ಹಾಗೂ ವೈದ್ಯಕೀಯ ಸಂಸ್ಥೆಗಳನ್ನು ಗೌರವಿಸುವ ಉದ್ದೇಶದಿಂದ ವಿಜಯ ಕರ್ನಾಟಕ ದಿನಪತ್ರಿಕೆಯು ಆಯೋಜಿಸಿದ್ದ ‘ವಿಕೆ ಹೆಲ್ತ್ ಎಕ್ಸೆಲೆನ್ಸ್ & ಆನರ್ಸ್’ (VK Health Excellence & Honors) ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು ಪ್ರತಿಯೊಬ್ಬರಿಗೂ ಉತ್ತಮ ಚಿಕಿತ್ಸೆ ದೊರೆಯುವಂತೆ ಆಸ್ಪತ್ರೆಗಳು ಕಾರ್ಯನಿರ್ವಹಿಸಬೇಕು, ಬಡವರಿಗೂ ಸೇರಿದಂತೆ ಪ್ರತಿಯೊಬ್ಬರಿಗೂ ಉತ್ತಮ ಮತ್ತು ಗುಣಮಟ್ಟದ ಚಿಕಿತ್ಸೆ ದೊರೆಯಬೇಕು. ವೈದ್ಯಕೀಯ ಕ್ಷೇತ್ರದಲ್ಲಿ ಉತ್ತರ ಕರ್ನಾಟಕ ಭಾಗದ ಆರೋಗ್ಯ ರಕ್ಷಣೆಯಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ನಿಸ್ವಾರ್ಥ ಸಾಧಕರನ್ನು ನೇರವಾಗಿ ಅಭಿನಂದಿಸುವ ಸೌಭಾಗ್ಯ ತಮಗೆ ದೊರೆತಿರುವುದು ಬಹಳ ಸಂತಸ ತಂದಿದೆ ಎಂದು ಸಚಿವರು ತಿಳಿಸಿದರು.
ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ವೈದ್ಯಕೀಯ ಕ್ಷೇತ್ರದ ನೈಜ ಹೀರೋಗಳನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವ ವಿಜಯ ಕರ್ನಾಟಕ ಬಳಗದ ಈ ಪ್ರಯತ್ನ ಶ್ಲಾಘನೀಯ ಎಂದು ಅವರು ಹೇಳಿದರು. ಪ್ರಶಸ್ತಿ ಪುರಸ್ಕೃತರಾದ ಉತ್ತರ ಕರ್ನಾಟಕದ ಎಲ್ಲಾ ವೈದ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.
ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ವಿಜಯ ಕರ್ನಾಟಕ ಹಾಗೂ ಬೆಂಗಳೂರು ಮಿರರ್ ಪತ್ರಿಕೆಗಳ ಸಿಇಒ ಶ್ರೀ ದೀಪಕ್ ಸಲೂಜಾ, ವಿಜಯ ಕರ್ನಾಟಕ ಪತ್ರಿಕೆಯ ಸಂಪಾದಕರು ಶ್ರೀ ಸುದರ್ಶನ್ ಚೆನ್ನಂಗಿಹಳ್ಳಿ, ಚಲನಚಿತ್ರ ನಟಿ ನಿಮಿಕಾ ರತ್ನಾಕರ್ ಮತ್ತಿತರರು ಉಪಸ್ಥಿತರಿದ್ದರು