ಚಾಮರಾಜನಗರ: ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಈಜುಕೊಳ, ಪೆವಿಲಿಯನ್, ಹಾಗೂ ವಿವಿಧ ಆಟದ ಅಂಕಣಗಳನ್ನು 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಿರುವ ಕಾಮಗಾರಿಗೆ ಎಂ.ಎಸ್.ಐ.ಎಲ್. ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಇಂದು ಶಂಕುಸ್ಥಾಪನೆ ನೆರವೇರಿಸಿದರು.
ಇದೇ ವೇಳೆ ಅಯೋಜಿಸಲಾಗಿದ್ದ ಶಂಕುಸ್ಥಾಪನೆ ಸಮಾರಂಭ ಉದ್ದೇಶಿಸಿ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಜಿಲ್ಲಾ ಕೇಂದ್ರದಲ್ಲಿ ಕ್ರೀಡಾಂಗಣದ ಸಮಗ್ರ ಅಭಿವೃದ್ದಿ ಆಗಲಿದೆ. ಈ ಹಿಂದೆಯೇ ಕ್ರೀಡಾಂಗಣದ ಅಭಿವೃದ್ದಿ ಕಾಮಗಾರಿಗಳು ಆರಂಭವಾಗಬೇಕಿತ್ತು. ಕಾರಣಾಂತರದಿಂದ ನೆರವೇರಿರಲಿಲ್ಲ. ಪ್ರಸ್ತುತ 15 ಕೋಟಿ ರೂ. ವೆಚ್ಚದ ಕಾಮಗಾರಿಗೆ ಟೆಂಡರ್ ಆಗಿದ್ದು ಗುದ್ದಲಿಪೂಜೆ ನೆರವೇರಿಸಲಾಗಿದೆ ಎಂದರು.
ಈಜು ಕೊಳ, ಪೆವಿಲಿಯನ್ ಹಾಗೂ ವಿವಿಧ ಆಟಗಳ ಅಂಕಣಗಳ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ. ತ್ವರಿತವಾಗಿ ಕಾಮಗಾರಿ ಮುಗಿಸಿ ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಲಾಗುವುದು. ಈಗಾಗಲೇ ಬಾಲಕರು ಹಾಗೂ ಬಾಲಕಿಯರಿಗೆ ಪ್ರತ್ಯೇಕ ಕ್ರೀಡಾ ಹಾಸ್ಟೆಲ್ ವ್ಯವಸ್ಥೆ ಸಹ ಮಾಡಲಾಗಿದೆ ಎಂದು ಶಾಸಕರು ತಿಳಿಸಿದರು.
ಜಿಲ್ಲಾ ಕೇಂದ್ರದಲ್ಲಿ ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿವೆ. ನಗರಕ್ಕೆ ಕುಡಿಯುವ ನೀರು ಪೂರೈಸಲು ಮಾಲಂಗಿಯಿಂದ ನೀರು ಸರಬರಾಜು ಮಾಡುವ ಕಾಮಗಾರಿಯನ್ನು 110 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳುತ್ತಿದ್ದು, ಇದರ ಟೆಂಡರ್ ಕೂಡ ಆಗಿದೆ. ಅಲ್ಲದೇ 130 ಕೋಟಿ ರೂ. ವೆಚ್ಚದಲ್ಲಿ ಪಟ್ಟಣಕ್ಕೆ ಒಳಚರಂಡಿ ಕಾಮಗಾರಿಗು ಟೆಂಟರ್ ಪ್ರಕ್ರಿಯೆ ನಡೆದಿದೆ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಹೇಳಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಿದ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಚುಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶ್ರೀರೂಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾದ ಹೆಚ್.ಎಸ್. ಬಿಂದ್ಯಾ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಯಪ್ರಕಾಶ್, ಹಿರಿಯ ಕ್ರೀಡಾಪಟು ಶ್ರೀನಿವಾಸ ಪ್ರಸಾದ್, ಮುಖಂಡರಾದ ಚಾ.ರಂ. ಶ್ರೀನಿವಾಸಗೌಡ, ರಾಜಪ್ಪ, ಸ್ವಾಮಿ, ಸುರೇಶ್ ನಾಯಕ್, ಪದ್ಮಾ ಪುರುಷೋತ್ತಮ್, ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Like this:
Like Loading...
Related