- ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೆ ನಮ್ಮ ಕರ್ನಾಟಕ ಸೇನೆಯಿಂದ ಉಗ್ರ ಹೋರಾಟ…
ಚಾಮರಾಜನಗರದ: ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಆದೇಶಿಸಿರುವ ಕ್ರಮವನ್ನು ಖಂಡಿಸಿ ನಮ್ಮ ಕರ್ನಾಟಕ ಸೇನೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿ, ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಅವರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ನಗರದ ಜಿಲ್ಲಾಡಳಿತ ಭವನದ ಎದುರು ಸೇನೆಯ ಜಿಲ್ಲಾಧ್ಯಕ್ಷ ಸುರೇಶ್ ನಾಯಕ ಹಾಗೂ ತಾಲೂಕು ಅಧ್ಯಕ್ಷ ಜಿ.ಗಿರೀಶ್ ನಾಯಕ್ ಅವರ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಕಾವೇರಿ ನೀರು ನಿಯಂತ್ರಣ ಸಮಿತಿ ವಿರುದ್ದ, ತಮಿಳುನಾಡು ಸರ್ಕಾರ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಲ್ಲಾಧ್ಯಕ್ಷ ಸುರೇಶ್ ನಾಯಕ, ತಾಲೂಕು ಅಧ್ಯಕ್ಷ ಜಿ.ಗಿರೀಶ್ ನಾಯಕ ಮಾತನಾಡಿ,ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ಸಿ.ಡಬ್ಲ್ಯೂ.ಆರ್.ಸಿ. ಹೊರಡಿಸಿರುವುದು ಅತ್ಯಂತ ಖಂಡನೀಯ ಕೂಡಲೇ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಮಳೆ ಕೊರತೆಯಿಂದ ಅಂತರ್ಜಲ ಕುಸಿದು ಜನ,ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ತಲೆದೋರಿದ್ದು ರಾಜ್ಯ ಜನತೆ ತುಂಬಾ ಕಷ್ಟದಲ್ಲಿದ್ದಾರೆ.ಇಂತಹ ಸಂದರ್ಭದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸರ್ವಾಧಿಕಾರ ಧೋರಣೆ ನಡೆಸುತ್ತಿದೆ. ಇವರಿಗೆ ಕರ್ನಾಟಕ ಜನರ ಹಿತದೃಷ್ಟಿ.ಸಾರ್ವಜನಿಕ ಹಿತದೃಷ್ಟಿ ಬೇಕಿಲ್ಲ. ನಿಮ್ಮ ಆದೇಶ ಜನವಿರೋಧಿ ಆದೇಶವಾಗಿದೆ. ಈ ಕೂಡಲೇ ಈ ಆದೇಶ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಸ್ಮಾನ್, ಉಪಾಧ್ಯಕ್ಷ ನಾಗರಾಜು, ತಾಲೂಕು ಅಧ್ಯಕ್ಷ ಗಿರೀಶ್ ನಾಯಕ್, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಶ್ರೀನಿವಾಸನಾಯಕ, ಉಪಾಧ್ಯಕ್ಷ ಕೃಷ್ಣೇಗೌಡ, ಗೌರವಾಧ್ಯಕ್ಷ ರಮೇಶ್ ಗೌಡ, ಟೌನ್ ಅಧ್ಯಕ್ಷ ಮುದಾಸೀರ್, ಉಪಾಧ್ಯಕ್ಷ ಚೇತನ್, ಸಂಘಟನಾ ಕಾರ್ಯದರ್ಶಿ ಸಚಿನ್, ಸಹ ಕಾರ್ಯದರ್ಶಿ ರಾಜೇಂದ್ರ, ಅಂಕಶೆಟ್ಟಿ, ನಾಗೇಶ್ ಬಚ್ಚನ್ ಇತರರು ಭಾಗವಹಿಸಿದ್ದರು.