ಚಾಮರಾಜನಗರ: ವಿಬಿ ಜಿ ರಾಮ್ ಜೀ ಯೋಜನೆ ಗ್ರಾಮೀಣ ಉದ್ಯೋಗ ವ್ಯವಸ್ಥೆಯನ್ನು ತಳಮಟ್ಟದಿಂದ ಬಲಪಡಿಸುವ ಗುರಿ ಹೊಂದಿದೆ. ಇದು ರೈತರು ಹಾಗೂ ಕಾರ್ಮಿಕರ ಘನತೆಗೆ, ಪಾರದರ್ಶಕತೆ ಹಾಗೂ ನಿಜವಾದ ಗ್ರಾಮೀಣ ಸಬಲೀಕರಣಕ್ಕೆ ಒತ್ತು ನೀಡುತಿರುವುದರಿಂದ ಕೂಲಿ ಕೆಲಸ ಮಾಡಿದ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ಕೂಲಿ ವೇತನ ಪಾವತಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮೋನಾರೋತ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯಳಂದೂರು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯಳಂದೂರು ಮತ್ತು ಕೊಳ್ಳೇಗಾಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಆಡಳಿತಾಧಿಕಾರಿಗಳ ಕಾರ್ಯವನ್ನು ಜಂಟಿಯಾಗಿ ಪ್ರಗತಿ ಪರಿಶೀಲಿಸಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಸ್ತುತ ಜನರಿಗೆ ಕೂಲಿ ಅವಶ್ಯಕವಾಗಿದ್ದು, ಜನರಿಗೆ ಆದ್ಯತೆಯ ಮೇರೆಗೆ ಉದ್ಯೋಗ ನೀಡಬೇಕು. ಮಾನವ ದಿನಗಳು ಶೂನ್ಯವಾಗದಂತೆ ನೋಡಿಕೊಳ್ಳಬೇಕು ಮತ್ತು ಪ್ರತಿ ಗ್ರಾಮ ಪಂಚಾಯತಿಯಲ್ಲಿಯೂ ಕನಿಷ್ಟ 60ಜನರು ಕೆಲಸ ಮಾಡುವಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಜಲ್ ಜೀವನ್ ಮಿಷನ್ ಯೋಜನೆಯನ್ನು ಎಲ್ಲಾ ಗ್ರಾಮಗಳಲ್ಲಿ ಅನುಷ್ಟಾನ ಗೊಳಿಸುವಂತೆ ತಿಳಿಸಿದರು. ವಸತಿ ಯೋಜನೆಯಲ್ಲಿ ಕಂಡು ಬರುವ ನ್ಯೂನತೆಗಳನ್ನು ಸರಿಪಡಿಸಿ ಪ್ರಗತಿ ಸಾಧಿಸುವಂತೆ ಹೇಳಿದರು.
ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ವರೆಗೆ ಸ್ವಚ್ಚತಾ ಹೀ ಸೇವಾ ಆಂದೋಲನ ನಡೆಯಲಿದ್ದು,ಸರ್ಕಾರಿ ಕಚೇರಿ, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸ್ವಚ್ಛತೆಯ ಮಾಡುವ ಜೊತೆಗೆ ಕಾರ್ಯಕ್ರಮ ರೂಪಿಸುವಂತೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮೋನಾರೋತ್ ಅವರು ಹೇಳಿದರು.
ಈ ಸಂಧರ್ಭದಲ್ಲಿ ಕೊಳ್ಳೇಗಾಲ ಮತ್ತು ಯಳಂದೂರು ಕಾರ್ಯನಿರ್ವಾಹಕ ಅಧಿಕಾರಿಗಳಾದ ಕುಮಾರ್, ವೇಣು, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸುದನ್ವ ನಾಗ್, ಸಹಾಯಕ ನಿರ್ದೇಶಕರು (ಗ್ರಾ.ಉ), ಗ್ರಾಮ ಪಂಚಾಯತಿ ಆಡಳಿತಾಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ವಿಬಿ ಜೀ ರಾಮ್ ಜೀ ಯೋಜನೆಯ ಸಿಬ್ಬಂದಿಗಳು, ಎನ್ ಆರ್ ಎಲ್ ಮತ್ತು ವಸತಿ ಯೋಜನೆಯ ಸಿಬ್ಬಂದಿಗಳು ಹಾಜರಿದ್ದರು.
