ಚಾಮರಾಜನಗರ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರ ಸಮ್ಮುಖದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷರಾದ ಹೆಚ್.ವಿ. ಚಂದ್ರು ಅವರು ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಪ್ರಗತಿಯನ್ನು ವಿವರವಾಗಿ ಪರಿಶಿಲಿಸಿದರು.
ಅಧ್ಯಕ್ಷರಾದ ಹೆಚ್.ವಿ. ಚಂದ್ರು ಅವರು ಮಾತನಾಡಿ ಗ್ಯಾರಂಟಿ ಯೋಜನೆಗಳ ಪೈಕಿ ಪ್ರಮುಖವಾದ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳು ನೊಂದಣಿಯಾಗಬೇಕಿದ್ದಲ್ಲಿ ಕೂಡಲೇ ಅವರಿಗೆ ನೆರವಾಗಿ ಯೋಜನೆ ಪ್ರಯೋಜನ ತಲುಪಿಸಬೇಕು. ಇ-ಕೆವೈಸಿ ಬಾಕಿ ಇದ್ದಲ್ಲಿ ತ್ವರಿತವಾಗಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಯೋಜನೆಯಡಿ ಅರ್ಹರೆಲ್ಲರು ಸೌಲಭ್ಯ ಪಡೆಯಬೇಕು ಎಂದರು.
ಅನ್ನಭಾಗ್ಯ ಯೋಜನೆಯಡಿ ಸೌಲಭ್ಯಗಳು ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪಬೇಕು. ಪಡಿತರ ಚೀಟಿಗಳಲ್ಲಿ ತೊಡಕುಗಳಿದ್ದರೆ ಪರಿಹರಿಸಬೇಕು. ಗೃಹಜ್ಯೋತಿ ಯೋಜನೆಯಡಿ ಬಾಕಿ ಇರುವ ಅರ್ಜಿಗಳನ್ನು ಪರಿಶೀಲಿಸಿ ಯೋಜನೆ ಪ್ರಯೋಜನ ಲಭ್ಯವಾಗಲು ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ಶಕ್ತಿ ಯೋಜನೆಯಡಿ ಸಾಕಷ್ಟು ಸಂಖ್ಯೆಯಲ್ಲಿ ಜಿಲ್ಲೆಯಲ್ಲಿ ಜನರು ಪ್ರಯೋಜನ ಪಡೆಯುತ್ತಿದ್ದಾರೆ. ಈಲ್ಲೆಯ ಕೆಲವೆಡೆ ಕೊರತೆಯಿರುವ ಮಾರ್ಗಗಳಲ್ಲಿ ಬಸ್ಸುಗಳ ಕಾರ್ಯಾಚರಣೆ ಹೆಚ್ಚಾಗಿ ಆಗಬೇಕು. ವಿದ್ಯಾರ್ಥಿಗಳು, ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕೆ ತಕ್ಕಂತೆ ಬಸ್ಸುಗಳ ಓಡಾಟಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಹೆಚ್.ವಿ. ಚಂದ್ರು ಅವರು ಹೇಳಿದರು.
ಯುವನಿಧಿ ಯೋಜನೆಯಡಿ ಅಭ್ಯರ್ಥಿಗಳು ಪ್ರಯೋಜನ ಪಡೆಯಲು ವ್ಯಾಪಕವಾದ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕಾಲೇಜು ಹಂತದಲ್ಲಿ ಹಮ್ಮಿಕೊಳ್ಳಲಾಗುವ ಜಾಗೃತಿ ಕಾರ್ಯಕ್ರಮಗಳಿಗೆ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರು, ಸದಸ್ಯರಿಗೆ ಮಾಹಿತಿ ನೀಡಿ ಆಹ್ವಾನಿಸಬೇಕು. ಪರಿಣಾಮಕಾರಿಯಾಗಿ ಕಾರ್ಯಕ್ರಮಗಳನ್ನು ಏರ್ಪಾಡು ಮಾಡಬೇಕು ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಹೋಬಳಿಯಲ್ಲಿ ಫಲಾನುಭವಿಗಳ ಅನಿಸಿಕೆ ಆಲಿಸಲು, ಯೋಜನೆ ಪ್ರಗತಿ ಕುರಿತ ಸಂವಾದ ಸಭೆಯನ್ನು ನಡೆಸಲು ಉದ್ದೇಶಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸಮಿತಿಯ ಸದಸ್ಯರು ಹಾಗೂ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು ಅವರು ತಿಳಿಸಿದರು.
ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಬಿ.ಪಿ. ನಾಗರಾಜಮೂರ್ತಿ, ರವಿ, ಎನ್.ಸಿದ್ದರಾಜು, ಸದಸ್ಯರಾದ ಸೋಮೇಶ್ವರ, ಕೆ.ಬಿ. ಚಿನ್ನಸ್ವಾಮಿ, ಹೆಚ್.ಜಿ. ಉಮಾಪತಿ, ಎಂ.ರಾಚಯ್ಯ, ಭಾಗ್ಯ, ಹೆಚ್.ಎನ್. ಜಯರಾಜು, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ದೀಪಾ, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್ ಕುಮಾರ್, ಆಹಾರ ಇಲಾಖೆಯ ಉಪನಿರ್ದೇಶಕರಾದ ಯೋಗಾನಂದ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯಪಾಲಕ ಇಂಜಿನಿಯರ್ ತಬಸುಂ ಅಬ್ಸಾ, ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Like this:
Like Loading...
Related