- ತಮಿಳುನಾಡಿಗೆ ಕಾವೇರಿ ನೀರು ಹರಿಸಿದರೆ ತಮಿಳು ನಾಡುಗಡಿ, ಚಲನಚಿತ್ರಗಳ ಪ್ರದರ್ಶನ ಬಂದ್ ಶ್ರೀನಿವಾಸಗೌಡ ಎಚ್ಚರಿಕೆ
ಚಾಮರಾಜನಗರದ: ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶ ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಖಾಲಿಕೊಡ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು.
ನಗರದ ಭುವನೇಶ್ವರಿ ವೃತ್ತದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಖಾಲಿ ಕೊಡ ಪ್ರದರ್ಶಿಸಿ ಕಾವೇರಿ ನೀರು ನಿಯಂತ್ರಣ ಸಮಿತಿ ವಿರುದ್ದ, ತಮಿಳುನಾಡು ಸರ್ಕಾರ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯು ಜು. 29 ರಿಂದ ಜಾರಿಗೆ ಬರುವಂತೆ ಮುಂದಿನ 15 ದಿನಗಳ ಕಾಲ ದಿನಕ್ಕೆ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಕರ್ನಾಟಕಕ್ಕೆ ನಿರ್ದೇಶನ ನೀಡಿರುವುದನ್ನು ಖಂಡನೀಯ. ಕಾವೇರಿನ್ಯಾಯಾಧೀಕರಣ ಮಂಡಳಿ ಕರ್ನಾಟಕ ಪರವಾಗಿ ತೀರ್ಪು ನೀಡಿಲ್ಲ. ರಾಜ್ಯದಲ್ಲಿ ಬರಗಾಲ ಅವರಿಸಿ ಜನ,ಜಾನುವಾರುಗಳ ಕುಡಿಯುವ ನೀರಿಗೂ ಪರಿತಪಿಸುವ ವಾತಾವರಣ ಸೃಷ್ಟಿಯಾಗಿದೆ. ಯಾವುದೇ ಕಾರಣಕ್ಕೂ ಕಾವೇರಿ ನೀರು ಹರಿಸಬಾರದು ಎಂದು ಒತ್ತಾಯಿಸಿದರು.
ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶ ಅವೈಜ್ಞಾನಿಕವಾದದ್ದು, ತಮಿಳನಾಡು ಸರ್ಕಾರ ಪದೇಪದೇ ಕಾವೇರಿ ನೀರಿನ ವಿಚಾರದಲ್ಲಿ ಕ್ಯಾತೆ ತೆಗೆಯುತ್ತಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶವನ್ನು ಕರ್ನಾಟಕ ಸರ್ಕಾರ ಒಪ್ಪಿಕೊಳ್ಳಬಾರದು. ಇಂದು ಸಾಂಕೇತಿಕ ವಾಗಿ ಹೋರಾಟ ಮಾಡಿದ್ದೇವೆ. ಒಂದು ವೇಳೆ ತಮಿಳುನಾಡಿಗೆ ಕಾವೇರಿ ನೀರು ಹರಿಸಿದರೆ ತಮಿಳುನಾಡು ಗಡಿ, ಕರ್ನಾಟಕದಲ್ಲಿ ತಮಿಳು ಚಲನಚಿತ್ರಗಳ ಪ್ರದರ್ಶನ ಬಂದ್ ಮಾಡಲಾಗುವುದು, ಎಂದು ಶ್ರೀನಿವಾಸಗೌಡ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಶಾ.ಮುರಳಿ, ಕಂಡಕ್ಟರ್ .ಸಿ.ಸೋಮನಾಯಕ, ಪಣ್ಯದಹುಂಡಿ ರಾಜು, ನಿಜಧ್ವನಿಗೋವಿಂದರಾಜು, ಬಂಗಾರು, ಆಟೋ ಲಿಂಗರಾಜು, ರಾಚಪ್ಪ, ಕೆಂಪರಾಜು, ಚಾ.ಸಿ.ಸಿದ್ದರಾಜು, ಮುತ್ತುರಾಜು ಇತರರು ಭಾಗವಹಿಸಿದ್ದರು.