ಅರಣ್ಯವಾಸಿ ಕಾಡಂಚಿನ ಜನರಿಗೆ ಮೂಲ ಸೌಲಭ್ಯ ಒದಗಿಸಿ : ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ

ಚಾಮರಾಜನಗರ: ಅರಣ್ಯವಾಸಿ ಕಾಡಂಚಿನ ಜನರಿಗೆ ನಿಯಮಾನುಸಾರವಾಗಿ ಎಲ್ಲಾ ಅಗತ್ಯ ಮೂಲ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕೆಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬಂಡೀಪುರದ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ನಿರ್ದೇಶಕರ ಆಡಳಿತ ಕಚೇರಿಯ ಸಭಾಂಗಣದಲ್ಲಿಂದು ಬುಡಕಟ್ಟು ಜನಾಂಗದ ಮುಖಂಡರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಸಚಿವರು ಮಾತನಾಡಿದರು.

ಸಭೆಯ ಆರಂಭದಲ್ಲಿ ಬುಡಕಟ್ಟು, ಅರಣ್ಯವಾಸಿಗಳ ಮುಖಂಡರು, ಪ್ರÀತಿನಿಧಿಗಳು ಮಾತನಾಡಿ ಅರಣ್ಯ ಪ್ರದೇಶದಲ್ಲಿ ಕಿರು ಅರಣ್ಯ ಉತ್ಪನ್ನಗಳ ಸಂಗ್ರಹಣೆಗೆ ಅವಕಾಶ ಮಾಡಿಕೊಡಬೇಕು. ಅರಣ್ಯ ಹಕ್ಕು ಕಾಯ್ದೆಯಡಿ ಸಮುದಾಯದ ಹಕ್ಕು ನೀಡಬೇಕು. ಬಿಳಿಗಿರಿರಂಗನ ಬೆಟ್ಟದ ಕಂದಾಯ ಭೂಮಿ ಸಂಬಂಧ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು. ಅರಣ್ಯವಾಸಿಗಳಿಗೆ ಮನೆ, ರಸ್ತೆ, ನೀರಾವರಿ ಇನ್ನಿತರ ಮೂಲ ಸೌಕರ್ಯಗಳನ್ನು ಒದಗಿಸಬೇಕು. ದಿನಗೂಲಿ ನೌಕರರಿಗೆ ನಿವೃತ್ತಿ ನಂತರವು ಸೌಲಭ್ಯಗಳನ್ನು ನೀಡಬೇಕು ಎಂಬುದು ಸೇರಿದಂತೆ ಹಲವು ಸಮಸ್ಯೆಗಳನ್ನು ನಿವೇದಿಸಿ ಬೇಡಿಕೆಗಳನ್ನು ಮುಂದಿಟ್ಟರು.

ಅಹವಾಲುಗಳನ್ನು ಆಲಿಸಿ ಮಾತನಾಡಿದ ಅರಣ್ಯ ಸಚಿವರು ಅರಣ್ಯ ಪ್ರದೇಶದಲ್ಲಿರುವ ಜನತೆಗೆ ಕುಡಿಯುವ ನೀರು, ರಸ್ತೆ, ವಿದ್ಯುತ್ ಇನ್ನಿತರ ಮೂಲ ಸೌಕರ್ಯಗಳನ್ನು ನಿಯಮಾನುಸಾರವಾಗಿ ಒದಗಿಸಬೇಕು. ಮುಖ್ಯಮಂತ್ರಿಗಳು ಬುಡಕಟ್ಟು ಸಮುದಾಯಕ್ಕೆ ನೀಡಬೇಕಿರುವ ಸೌಲಭ್ಯಗಳ ಬಗ್ಗೆ ಸಭೆ ನಡೆಸಿ ಸೂಚನೆ ನೀಡಿದ್ದಾರೆ. ಹೀಗಾಗಿ ಅವಶ್ಯವಿರುವ ಸೌಲಭ್ಯಗಳನ್ನು ಅಧಿಕಾರಿಗಳು ನೀಡುವ ನಿಟ್ಟಿನಲ್ಲಿ ಕ್ರಮ ವಹಿಸಬೇಕೆಂದರು.

ಆನೆ ದಾಳಿಯಂತಹ ಪ್ರಕರಣಗಳಲ್ಲಿ ಪರಿಹಾರ ನೀಡಲಾಗುತ್ತಿದೆ. ಗಾಯಗೊಂಡವರಿಗೆ ಆಸ್ಪತ್ರೆಗಳಲ್ಲಿ ತಗಲುವ ಚಿಕಿತ್ಸಾ ವೆಚ್ಚವನ್ನು ಭರಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳ ವೆಚ್ಚವನ್ನು ನೀಡಲಾಗುತ್ತಿದೆ. ಅಂಗವಿಕಲತೆ ಉಂಟಾದಲ್ಲಿ ಪರಿಹಾರ ಕೊಡಲಾಗುತ್ತಿದೆ. ಕಾಡುಪ್ರಾಣಿಗಳ ದಾಳಿಗೊಳಗಾದವರಿಗೆ ಇಲಾಖೆ ನೆರವು ನೀಡುತ್ತಿದೆ ಎಂದು ಸಚಿವರು ತಿಳಿಸಿದರು.

ಬುಡಕಟ್ಟು ಸಮುದಾಯ, ಅರಣ್ಯ ವಾಸಿಗಳ ಬಗ್ಗೆ ಕಳಕಳಿ ಇದ್ದು, ಅಗತ್ಯವಿರುವ ಸೌಲಭ್ಯವನ್ನು ಸರ್ಕಾರ ನೀಡಲಿದೆ. ಈ ಭಾಗದ ಅರಣ್ಯ ಜನರ ಸಮಸ್ಯೆ, ಬೇಡಿಕೆಗಳ ಬಗ್ಗೆ ವಿಶೇಷವಾಗಿ ಗಮನ ಹರಿಸಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಿದ್ದೇವೆ. ಅರಣ್ಯ ಹಕ್ಕು, ಪುನರ್ವಸತಿಯಂತಹ ಪ್ರಮುಖ ವಿಷಯಗಳಿಗೆ ಆಧ್ಯತೆ ನೀಡಲಿದ್ದೇವೆ ಎಂದು ಅರಣ್ಯ ಸಚಿವರು ತಿಳಿಸಿದರು.

ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಕಿರು ಅರಣ್ಯ ಉತ್ಪನ್ನಗಳ ಸಂಗ್ರಹಣೆಗಾಗಿ ಬುಡಕಟ್ಟು ಜನರಿಗೆ ಅವಕಾಶ ಮಾಡಿಕೊಡಬೇಕು. ಪರಿಹಾರ ವಿತರಣಾ ಕಾರ್ಯ ತ್ವರಿತವಾಗಿ ಆಗಬೇಕು. ಗಂಗಾ ಕಲ್ಯಾಣ ಸೇರಿದಂತೆ ಇನ್ನಿತರ ಯೋಜನೆಗಳ ಅನುಷ್ಠಾನಕ್ಕೆ ಯಾವುದೇ ಅಡಚಣೆಯಾಗಬಾರದು ಎಂದರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಮಾತನಾಡಿ ಬಿಳಿಗಿರಿರಂಗನ ಬೆಟ್ಟದಲ್ಲಿ ಮೂಲ ನಿವಾಸಿಗಳಿಗೆ ಭೂಮಿಯ ಸಂಬಂಧ ಇರುವ ಸಮಸ್ಯೆಗಳು ಪರಿಹಾರವಾಗಬೇಕು. ಸಾಗುವಳಿ ಕುರಿತು ಇರುವ ಹಲವು ಗೊಂದಲಗಳು ಇತ್ಯರ್ಥವಾಗಬೇಕು. ಭೂಮಿ ಸಂಬಂಧ ಭೌತಿಕ ಸಮೀಕ್ಷೆ ಕಾರ್ಯ ನಡೆಯಬೇಕು ಎಂದರು.

ಶಾಸಕರಾದ ಎಚ್.ಎಂ. ಗಣೇಶ್ ಪ್ರಸಾದ್ ಅವರು ಮಾತನಾಡಿ ಅರಣ್ಯದಂಚಿನ ಭಾಗಗಗಳಲ್ಲಿ ಆನೆ ದಾಳಿ ತಡೆಯಲು ರೈಲ್ವೆ ಬ್ಯಾರಿಕೇಡ್‍ಗಳನ್ನು ವೈಜ್ಞಾನಿಕವಾಗಿ ಹಾಕಬೇಕು. ಕಾಡಂಚಿನ ಜನರು ಮತ್ತು ಫಸಲುಗಳಿಗೆ ಕಾಡುಪ್ರಾಣಿಗಳಿಂದ ಆಗುವ ತೊಂದರೆಯನ್ನು ತಪ್ಪಿಸಲು ಶಾಶ್ವತ ಕ್ರಮಗಳು ಆಗಬೇಕು ಎಂದರು.

ಶಾಸಕರಾದ ಎಂ.ಆರ್. ಮಂಜುನಾಥ್ ಅವರು ಮಾತನಾಡಿ ಅರಣ್ಯದೊಳಗಿನ ಜನರಿಗೆ ವಸತಿ ಸೌಲಭ್ಯ ಸಮರ್ಪಕವಾಗಿ ಆಗಬೇಕು. ಇನ್ನಿತರ ಮೂಲ ಸೌಕರ್ಯಗಳಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕಿದೆ. ಸಮಸ್ಯೆಗಳಿಗೆ ತುರ್ತಾಗಿ ಸ್ಪಂದನೆ ಸಿಗಬೇಕಿದೆ ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತ, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಾದ ಸುಭಾಷ್ ಕೆ. ಮಾಲ್ಕಡೆ, ಚಾಮರಾಜನಗರ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನವೀನ್‍ಕುಮಾರ್, ಸುರೇಶ್, ಸತೀಶ್, ಇನ್ನಿತರರು ಉಪಸ್ಥಿತರಿದ್ದರು.

ಬುಡಕಟ್ಟು ಸಮುದಾಯದ ಸಭೆಯ ಬಳಿಕ ಸಚಿವರು ಜಿಲ್ಲೆಯ ಹಿರಿಯ ಅಧಿಕಾರಿಗಳು, ಅರಣ್ಯ ಮತ್ತು ಪರಿಸರ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಗೆ ಮೊದಲು ನೂತನವಾಗಿ ನಿರ್ಮಿಸಿರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ನಿರ್ದೇಶಕರ ಆಡಳಿತ ಕಚೇರಿಯ ನೂತನ ಕಟ್ಟಡವನ್ನು ಸಚಿವರಾದ ಈಶ್ವರ ಖಂಡ್ರೆ ಅವರು ಉದ್ಘಾಟಿಸಿದರು.

Leave a Reply

Your email address will not be published. Required fields are marked *