ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ಹರಿಸಲು ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ ಸಲಹೆ

ಚಾಮರಾಜನಗರ: ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಓದಿನ ಕಡೆ ಹೆಚ್ಚಿನ ಗಮನ ಹರಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ ಅವರು ಸಲಹೆ ಮಾಡಿದರು.

  ನಗರದ ಸೇವಾ ಭಾರತಿ ಪಬ್ಲಿಕ್ ಶಾಲೆಯಲ್ಲಿಂದು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೆÇಲೀಸ್ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಬಾಲ್ಯವಿವಾಹ ಮುಕ್ತ ಭಾರತ್ ಅಭಿಯಾನ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

  ವಿದ್ಯೆ ಎಂಬುದು ಯಾರೂ ಕದಿಯಲಾಗದ ಆಸ್ತಿಯಾಗಿದೆ. ಅಪ್ರಾಪ್ತ ಮಕ್ಕಳಲ್ಲಿ ಮನಸ್ಸು ಚಂಚಲವಾಗಿದ್ದು, ಇದರಿಂದ ಕೆಲ ಮಕ್ಕಳು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ವಿದ್ಯಾರ್ಥಿಗಳು ಯಾವುದೇ ಪ್ರೀತಿ ಪ್ರೇಮ ದುಶ್ಚಟಗಳಿಗೆ ಬಲಿಯಾಗದೆ ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕು. ವಿದ್ಯಾರ್ಥಿ ಜೀವನದಲ್ಲಿ ಅವಕಾಶಗಳು ಒಮ್ಮೆ ಮಾತ್ರ ಬರುತ್ತದೆ. ಅದನ್ನು ಸರಿಯಾದ ರೀತಿ ಸದ್ಭಳಕೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಗುರಿ ಹಿರಿಯರನ್ನು ಗೌರವಿಸಿ, ಉತ್ತಮ ಶಿಕ್ಷಣ ಪಡೆದು ಉನ್ನತ ಅಧಿಕಾರಿಗಳಾಗಿ ಭಾರತದ ಭವಿಷ್ಯವನ್ನು ಉಜ್ವಲಗೊಳಿಸಬೇಕು ನ್ಯಾಯಾಧೀಶರಾದ ಈಶ್ವರ ಅವರು ಹೇಳಿದರು. 

  ಬಾಲ್ಯ ವಿವಾಹ ಇಂದು ದೇಶಾದ್ಯಂತ ಒಂದು ಮಾರಕ ಪಿಡುಗಾಗಿ ಪರಿಣಮಿಸಿದೆ. ಬಾಲ್ಯ ವಿವಾಹ ತಡೆಯಲು ಸರ್ಕಾರವು ಬಾಲ್ಯವಿವಾಹ ಮುಕ್ತ ಕಾಯ್ದೆಯನ್ನು ಜಾರಿಗೊಳಿಸಿದೆ. ಮಕ್ಕಳ ಹಕ್ಕುಗಳ ರಕ್ಷಣೆಗೆ ಹಾಗೂ ಬಾಲ್ಯವಿವಾಹ ತಡೆಯಲು ಕಾನೂನುಗಳನ್ನು ರೂಪಿಸಿ ಸಂವಿಧಾನದಲ್ಲಿ ಅಡಕಗೊಳಿಸಲಾಗಿದೆ. ಪುರುಷ ಹಾಗೂ ಮಹಿಳೆಯರು ಇಬ್ಬರು ಕಾನೂನಿನ ಮುಂದೆ ಸಮಾನರಾಗಿದ್ದಾರೆ. ಪ್ರತಿಯೊಬ್ಬ ನಾಗರಿಕರು ಕಾನೂನುಗಳನ್ನು ಗೌರವಿಸಿ ರಕ್ಷಣೆ ಮಾಡಬೇಕು. ಮಕ್ಕಳ ಹಕ್ಕುಗಳಿಗೆ ಚ್ಯುತಿಯಾಗದಂತೆ ಮಕ್ಕಳಿಗೆ ಬದುಕುವ, ಅಭಿವೃದ್ಧಿ ಹೊಂದುವ, ಭಾಗವಹಿಸುವ ಹಾಗೂ ಶೈಕ್ಷಣಿಕ ಹಕ್ಕು ಸೇರಿದಂತೆ ಒಟ್ಟು 53 ಮಕ್ಕಳ ಹಕ್ಕುಗಳನ್ನು ಸಂವಿಧಾನದಲ್ಲಿ ಅಳವಡಿಸಲಾಗಿದೆ ಎಂದು ತಿಳಿಸಿದರು.

  ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಬಿ. ಮಂಜುಳಾ ಅವರು ಪ್ರಸ್ತಾವಿಕವಾಗಿ ಮಾತನಾಡಿ ಮಕ್ಕಳ ರಕ್ಷಣೆ ಹಾಗೂ ಹಕ್ಕುಗಳ ಬಗ್ಗೆ ತಿಳಿಸಲು ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ ವರ್ಷದಲ್ಲಿ 42 ಬಾಲ್ಯ ವಿವಾಹ ಹಾಗೂ 60 ಫೋಕ್ಸೋ ಪ್ರಕರಣಗಳು ದಾಖಲಾಗಿವೆ. ಬಾಲ್ಯವಿವಾಹಕ್ಕೆ ಹೆಚ್ಚಾಗಿ ವಿದ್ಯಾರ್ಥಿನಿಯರು ಬಲಿಯಾಗುತ್ತಿದ್ದು, ಶಾಲಾ-ಕಾಲೇಜು ಮಕ್ಕಳಿಗೆ ಅರಿವು ಮೂಡಿಸಲು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

  ಪೆÇಲೀಸ್ ಉಪಾಧೀಕ್ಷರು ಹಾಗೂ ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ ಎನ್. ಸ್ನೇಹರಾಜ್ ಅವರು ಮಾತನಾಡಿ ಶಾಲಾ, ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ ಮತ್ತು ಪೆÇೀಕ್ಸೋ ಕಾಯ್ದೆಗಳ ಬಗ್ಗೆ ವ್ಯಾಪಕ ಅರಿವು ಮೂಡಿಸಬೇಕು. ಜಿಲ್ಲೆಯ ಕೆಲ ಬುಡಕಟ್ಟು ಸಮುದಾಯಗಳಲ್ಲಿ 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಬಾಲ್ಯ ವಿವಾಹ ಮಾಡುತ್ತಿದ್ದಾರೆ. ಇದು ಸಲ್ಲದು. ಶಿಕ್ಷಣವು ವಿದ್ಯಾರ್ಥಿಗಳು ಸಂಪಾದಿಸುವ ಅತಿ ಮುಖ್ಯ ಆಸ್ತಿಯಾಗಿದೆ. ಉತ್ತಮ ಆರೋಗ್ಯ, ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸಿ ಅವರ ಉನ್ನತ ಮಟ್ಟಕ್ಕೆ ಕೊಂಡೊಯ್ಯಲಿದೆ ಎಂದು ತಿಳಿಸಿದರು 

  ಸೇವಾ ಭಾರತಿ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಆರ್.ವಿ. ರಾಧಿಕಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಎಂ ಅಶೋಕ, ಬಿ.ಎಸ್. ಮೇಘಶ್ರೀ, ರವಿ, ಶಾಲೆಯ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *