ಪಠ್ಯೇತರ ಚಟುವಟಿಕೆಗಳಲ್ಲೂ ಪ್ರತಿಭೆ ತೋರಿ : ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಸಲಹೆ

ಚಾಮರಾಜನಗರ: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಚೆಲ್ಲಬೇಕು ಎಂದು ಎಂ.ಎಸ್.ಐ.ಎಲ್. ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.

ತಾಲೂಕಿನ ಭೋಗಾಪುರದಲ್ಲಿರುವ ಪರಿಶಿಷ್ಟ ಜಾತಿ ಪರಿಶಿಷ್ಟಪಂಗಡ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾವಿತ್ರಿ ಬಾಯಿ ಫುಲೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕøತಿಕ ವೇದಿಕೆ, ಕ್ರೀಡೆ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಸಮಾರೋಪ ಸಮಾರಂಭ ಸಾಂಸ್ಕøತಿಕ ಸಂಭ್ರಮ-ಜನಪದೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಓದುವುದರ ಜೊತೆಗೆ ಕಲೆ, ಸಾಂಸ್ಕøತಿಕ ಕಾರ್ಯಕ್ರಮಗಳು, ಕ್ರೀಡೆಗಳಲ್ಲಿಯೂ ತೊಡಗಿಸಿಕೊಳ್ಳಬೇಕು.  ಪ್ರಾಥಮಿಕ ತರಗತಿಯಿಂದ ಕಾಲೇಜು ವರೆಗಿನ ವ್ಯಾಸಂಗದವರೆಗೂ ಸಂಸ್ಕøತಿ, ಕಲೆ, ಆಟೋಟ, ಮನರಂಜನೆ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಶಾಲಾ ಹಂತದಲ್ಲಿ ಪ್ರತಿಭಾ ಕಾರಂಜಿಗಳಂತ ಕಾರ್ಯಕ್ರಮಗಳನ್ನು ಶಿಕ್ಷಣ ಇಲಾಖೆ ನಡೆಸುತ್ತದೆ. ಇಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. 

ವಸತಿಯುಕ್ತ ಕಾಲೇಜಿಗೆ ಬಾಕಿ ಇರುವ ಮೂಲ ಸೌಕರ್ಯಗಳನ್ನು ಒದಗಿಸಿಕೊಡಲಾಗುವುದು. ಜಿಲ್ಲೆಯ ಅಭಿವೃಧ್ದಿಗೆ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ. ಕುಡಿಯುವ ನೀರು, ಕ್ರೀಡಾಂಗಣ ಅಭಿವೃದ್ದಿ, ಕೆರೆಗಳಿಗೆ ನೀರು ತುಂಬಿಸುವುದು ಸೇರಿದಂತೆ ಇನ್ನಿತರ ಅಭಿವೃದ್ದಿ ಕಾರ್ಯಗಳಿಗೆ ಆದ್ಯತೆ ನೀಡುತ್ತಿದೆ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು. 

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಎಂ. ಮುನಿರಾಜು ಅವರು ಮಾತನಾಡಿ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿಯೂ ಕ್ರಿಯಾಶೀಲರಾಗಿದ್ದಾಗ ಪರಿಪೂರ್ಣ ವಿದ್ಯಾರ್ಥಿಗಳಾಗಲು ಸಾಧ್ಯ. ಸಮಾಜಕ್ಕೆ ಸಹಕಾರಿಯಾಗುವ ರೀತಿಯಲ್ಲಿ ವಿದ್ಯಾಭ್ಯಾಸ ಆಗಬೇಕು. ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದಂತಹ ವಿದ್ಯಾರ್ಥಿಗಳು ವಿದೇಶದಲ್ಲಿಯೂ ಓದುವ ಸೌಲಭ್ಯಗಳಿಗೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದರು.

ಚಾಮರಾಜನಗರ ಜನಪದ ಕಲೆಯ ತವರೂರಾಗಿದೆ. ಜನಪದ ಕಲೆ ಬಗ್ಗೆ ಯುವಕರು ಆಸಕ್ತಿ ತೋರಬೇಕು. ಜಾನಪದ ಪರಂಪರೆಯನ್ನು ಉಳಿಸಿ ಬೆಳಿಸುವಂತಹ ಕೆಲಸ ಎಲ್ಲರಿಂದಾಗಲಿ. ವಿದ್ಯಾರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಕಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತಾಗಲಿ ಎಂದು ಮುನಿರಾಜು ಅವರು ತಿಳಿಸಿದರು. 

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲರಾದ ಡಾ. ಪಿ. ದೇವರಾಜು ಅವರು ಓದಿನಿಂದ ಮಾತ್ರವೇ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುವುದಿಲ್ಲ. ವಿದ್ಯಾರ್ಥಿಗಳು ಕೌಶಲ, ಪಠ್ಯೇತರ ಚಟುವಟಿಕೆಗಳಲ್ಲಿಯೂ ಆಸಕ್ತಿ ಹೊಂದಿದಾಗ ಬದುಕು ಕಟ್ಟಿಕೊಟ್ಟಿಕೊಳ್ಳಲು ಅನುಕೂಲವಾಗಲಿದೆ. ಆಧುನಿಕ ಬೆಳವಣಿಗೆಯ ಯುಗದಲ್ಲಿ ವಿದ್ಯಾರ್ಥಿಗಳು ಸಿಗುವ ಅವಕಾಶಗಳನ್ನು ಬಳಸಿಕೊಂಡು ಯಶಸ್ವಿಯಾಗಿ ಮುಂದೆ ಬರಬೇಕು ಎಂದರು.

ಚಾಮರಾಜನಗರ ಜೆ.ಎಸ್.ಎಸ್. ಮಹಿಳಾ ಕಾಲೇಜಿನ ಪ್ರಾಧ್ಯಾಪಕರಾದ ಡಆ. ಎ.ಆರ್. ಸುಷ್ಮಾ ಮುಖ್ಯ ಭಾಷಣ ಮಾಡಿದರು.

ಪಿ.ಎ.ಸಿ.ಸಿ. ಬ್ಯಾಂಕ್ ಅಧ್ಯಕ್ಷರಾದ ನಾಗೇಂದ್ರ ಮೂರ್ತಿ, ಭೋಗಾಪುರ ಗ್ರಾಮಪಂಚಾಯಿತಿ ಅಧ್ಯಕ್ಷರಾದ ರೂಪ, ಉಪಾಧ್ಯಕ್ಷರಾದ ಮಂಗಳಮ್ಮ, ಸದಸ್ಯರಾದ ರಾಜಮ್ಮ, ನಾಗಮ್ಮ, ಪುಟ್ಟಗೌರಮ್ಮ, ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಸದಸ್ಯರು, ಜನಪದ ಗಾಯಕರಾದ ಸಿ.ಎಂ. ನರಸಿಂಹಮೂರ್ತಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *