ಸಾಲಿಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ

ವರದಿ: ಕೆ.ಟಿ.ಮೋಹನ್ ಕುಮಾರ್

ಸಾಲಿಗ್ರಾಮ (ಮೈಸೂರು ಜಿಲ್ಲೆ): ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎರಡು ಕೋಟಿ ರೂಗಳ ಅನುದಾನಗಳಿಂದ 17ಕಡೆ ಶ್ರೀ ಮಹರ್ಷಿ ವಾಲ್ಮೀಕಿ ಭವನಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಅವರು ಸಾಲಿಗ್ರಾಮ ಪಟ್ಟಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಮತ್ತು ತಾಲೂಕು ವಾಲ್ಮೀಕಿ ನಾಯಕರ ಸಂಘ ಇವರುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ರವರ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಈಗಾಗಲೇ ಸರ್ಕಾರದಿಂದ ಒಂದು ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು ಮತ್ತೊಂದು ಕೋಟಿ ರೂ ಅನುದಾನವು ಅತೀ ಶೀಘ್ರದಲ್ಲಿ ಬಿಡುಗಡೆಯಾಗಲಿದ್ದು ಆ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಕ್ಷೇತ್ರದಲ್ಲಿ ಮತ್ತಷ್ಟು ವೇಗವನ್ನು ನೀಡಲಾಗುವುದು ಎಂದರು.

ಸಾಲಿಗ್ರಾಮ ಪಟ್ಟಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಭವನ ನಿರ್ಮಾಣಕ್ಕೆ ಅಗತ್ಯವಾಗಿ ಬೇಕಾಗಿರುವ ನಿವೇಶನದೊಂದಿಗೆ ಅನುದಾನವನ್ನು ನೀಡುವ ಮೂಲಕ ಈ ಭಾಗದ ಜನತೆಯ ಬಹುದಿನದ ಬೇಡಿಕೆಯನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

ಯಾವುದೇ ಸಮುದಾಯವು ಅಭಿವೃದ್ಧಿ ಪಥದತ್ತ ಸಾಗಬೇಕೆಂದರೆ ಪ್ರಮುಖವಾಗಿ ಶಿಕ್ಷಣ ಮತ್ತು ರಾಜಕೀಯ ಅಧಿಕಾರ ಬೇಕು. ಆ ನಿಟ್ಟಿನಲ್ಲಿ ನಾಯಕ ಸಮುದಾಯದವರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣವನ್ನು ಕೊಡಿಸುವ ಮೂಲಕ ಅವರುಗಳು ಉನ್ನತ ಸ್ಥಾನಮಾನಗಳನ್ನು ಅಲಂಕರಿಸುವಂತೆ ಮಾಡಬೇಕು, ಮಕ್ಕಳ ವಿದ್ಯಾಭ್ಯಾಸಕ್ಕೆ ನನ್ನ ಸಂಪೂರ್ಣ ಸಹಕಾರ ಇರುತ್ತದೆ ಎಂದರು.

ಕ್ಷೇತ್ರ ವ್ಯಾಪ್ತಿಯಲ್ಲಿ ನಾಯಕ ಸಮುದಾಯದವರು ವಾಸಿಸುತ್ತಿರುವ ಭಾಗಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿಗಳನ್ನು ಸುಮಾರು ಮೂರು ಕೋಟಿ ರೂ ಅನುದಾನದಲ್ಲಿ ಮಾಡುವ ಮೂಲಕ ಆ ಭಾಗದಲ್ಲಿ ಅಭಿವೃದ್ಧಿ ಕಾರ್ಯವನ್ನು ಮಾಡಲಾಗುವುದು ಎಂದರು.

ಕೆ.ಆರ್.ನಗರದಲ್ಲಿರುವ ಶ್ರೀ ವಾಲ್ಮೀಕಿ ಭವನದ ಬಳಿಯಲ್ಲಿ ಶ್ರೀ ಗಣೇಶ ದೇವಸ್ಥಾನದ ನಿರ್ಮಾಣ ಕಾರ್ಯಕ್ಕೆ ಶೀಘ್ರದಲ್ಲೇ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದರು.

ಶ್ರೀ ಮಹರ್ಷಿ ವಾಲ್ಮೀಕಿ ಅವರ ಪುತ್ತಳಿಯನ್ನು ವೈಯಕ್ತಿಕವಾಗಿ ಮಾಡಿಸಿ ಸ್ಥಳ ನಿಗದಿ ಮಾಡಿದ ನಂತರ ಅದನ್ನು ಪ್ರತಿಷ್ಠಾಪಿಸುವ ಕೆಲಸವನ್ನು ಮಾಡಲಾಗುವುದು ಎಂದರು.

ಮಹನೀಯರುಗಳ ಆದರ್ಶ ಗುಣಗಳನ್ನು ಸರ್ವರು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಆ ಹಾದಿಯಲ್ಲಿ ಸಾಗುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ಕರೆ ನೀಡಿದರು.

ಕೆ.ಆರ್.ನಗರ ಪುರಸಭೆ ಅಧ್ಯಕ್ಷ ಶಿವುನಾಯಕ್ ಮಾತನಾಡಿ ಸಾಲಿಗ್ರಾಮದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ಮಾಡಲು ಸರ್ವರೂ ಸಹಕರಿಸಬೇಕೆಂದು ಮನವಿ ಮಾಡಿದ ಅವರು ವೈಯಕ್ತಿಕವಾಗಿ ಒಂದು ಲಕ್ಷ ರೂಗಳನ್ನು ವೇದಿಕೆಯಲ್ಲಿಯೇ ದೇಣಿಗೆಯಾಗಿ ನೀಡಿದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದಿಂದ ಶ್ರೀ ಮಹರ್ಷಿ ವಾಲ್ಮೀಕಿ ರವರ ಭಾವಚಿತ್ರವನ್ನು ತೆರೆದ ವಾಹನದಲ್ಲಿ ಪ್ರತಿಷ್ಠಾಪಿಸಿ ವಿವಿಧ ಕಲಾತಂಡಗಳೊಂದಿಗೆ ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಮೆರವಣಿಗೆ ನಡೆಸಿ ವೇದಿಕೆಗೆ ಕರೆ ತರಲಾಯಿತು. ಈ ಸಂದರ್ಭದಲ್ಲಿ ಯುವಕರು ಸೇರಿದಂತೆ ಸರ್ವರೂ ವಾದ್ಯದ ಸದ್ದಿಗೆ ಹೆಜ್ಜೆ ಹಾಕಿ ನೃತ್ಯ ಮಾಡುವ ಮೂಲಕ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಸಮಾಜದ ಗಣ್ಯರುಗಳನ್ನು ಸನ್ಮಾನಿಸಲಾಯಿತು.

ಶ್ರೀ ಮಹರ್ಷಿ ವಾಲ್ಮೀಕಿ ಅವರನ್ನು ಕುರಿತು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಬೀಜಗನಹಳ್ಳಿ ನಾಗರಾಜ್ ಪ್ರಧಾನ ಭಾಷಣ ಮಾಡಿದರು.

ಶಿಕ್ಷಕ ಕರ್ಪೂರವಳ್ಳಿ ನಾರಾಯಣ್ ಹಾಗೂ ಗ್ರಂಥಪಾಲಕಿ ದಿವ್ಯ ಕುಮಾರಿ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಸಾಲಿಗ್ರಾಮ ತಾಲೂಕು ನಾಯಕರ ಸಂಘದ ಅಧ್ಯಕ್ಷ ಸಿ.ಸಿ.ಮಹದೇವ್, ಕೆ.ಆರ್.ನಗರ ತಾಲೂಕು ಅಧ್ಯಕ್ಷ ಸುಬ್ಬುಕೃಷ್ಣ, ಖಜಾಂಚಿ ನಾಗರಾಜು, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಮಹೇಶ್, ಕಾಂಗ್ರೆಸ್ ಪಕ್ಷದ ಎಸ್.ಟಿ ವಿಭಾಗದ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಉದಯಶಂಕರ್, ಎಂ.ಎಸ್.ಮಹದೇವ್, ತಹಶೀಲ್ದಾರ್ ಗಳಾದ ರುಕಿಯ ಬೇಗಂ, ಸುರೇಂದ್ರಮೂರ್ತಿ, ತಾ.ಪಂ ಇ ಓ ಗಳಾದ ಕುಲದೀಪ್, ಎ.ಎನ್.ರವಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಎಲ್.ಶಂಕರಮೂರ್ತಿ, ಬಿಇಒ ಕೃಷ್ಣಪ್ಪ, ಪೊಲೀಸ್ ಇನ್ಸ್ಪೆಕ್ಟರ್ ಶಶಿಕುಮಾರ್, ಪುರಸಭಾ ಮುಖ್ಯ ಅಧಿಕಾರಿ ರಮೇಶ್, ಗ್ರಾ.ಪಂ. ಅಧ್ಯಕ್ಷೆ ಸುವರ್ಣ, ಉಪಾಧ್ಯಕ್ಷೆ ಶಶಿಕಲಾ, ಸದಸ್ಯ ಹೇಮಂತ್ ಕುಮಾರ್, ತಾ.ಪಂ. ಮಾಜಿ ಅಧ್ಯಕ್ಷರಾದ ಎಚ್.ಟಿ.ಮಂಜುನಾಥ್, ಚಂದು, ಮಾಜಿ ಸದಸ್ಯ ಎ.ಟಿ.ಗೋವಿಂದೇಗೌಡ, ಪುರಸಭಾ ಸದಸ್ಯರಾದ ಶಂಕರ್, ವಿನಯ್, ಪುಟ್ಟಣ್ಣ, ಕಾಂಗ್ರೆಸ್ ವಕ್ತಾರ ಜಾಬೀರ್, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಭಾಕರ್, ಎಸ್ ಸಿ ಘಟಕದ ಅಧ್ಯಕ್ಷ ಕಂಠಿಕುಮಾರ್, ಮುಖಂಡರುಗಳಾದ ಶಿವಣ್ಣ, ದೇವರಾಜು, ರಾಮನಾಯಕ, ಮಹದೇವ್, ಲೋಕೇಶನಾಯಕ, ಗೋಬಿಶಂಕರ್, ವೆಂಕಟೇಶನಾಯಕ, ಹರೀಶ್, ಮುತ್ತರ್ ಪಾಷಾ, ಹೆಚ್.ಟಿ.ಮಂಜು, ವಿವಿಧ ಇಲಾಖೆ ಅಧಿಕಾರಿಗಳು, ನಾಯಕ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *