ಚಾಮರಾಜನಗರ: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗಾಗಿ (ಎಸ್.ಐ.ಆರ್) ವೇಳಾ ಪಟ್ಟಿ ಪ್ರಕಟಿಸಿದ್ದು, ಇದರ ಅನುಸಾರ ಪರಿಷ್ಕರಣಾ ಕಾರ್ಯ ನಡೆಯಲಿದ್ದು, ಈ ಪ್ರಕ್ರಿಯೆಗೆ ರಾಜಕೀಯ ಪಕ್ಷಗಳು ಸಂಪೂರ್ಣ ಸಹಕರಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಮನವಿ ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ನೋಂದಾಯಿತ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮತದಾರರ ಪಟ್ಟಿ ಹೆಸರು ಸೇರ್ಪಡೆಗೆ ದಿನಾಂಕ 01-10-2026ಕ್ಕೆ ಅರ್ಹತಾ ದಿನಾಂಕ ನಿಗದಿಪಡಿಸಿದ್ದು, ಜೂನ್ 20 ರಿಂದ ಅಕ್ಟೋಬರ್ 7ರವರೆಗೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ವೇಳಾ ಪಟ್ಟಿ ನಿಗದಿಯಾಗಿದೆ. ಮುಕ್ತ, ನಿಷ್ಪಕ್ಷಪಾತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಮತದಾರರ ಪಟ್ಟಿಗಳ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯ ಮೂಲಭೂತ ಅವಶ್ಯಕತೆಯಾಗಿದೆ. ಈ ಮಹತ್ತರ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯಗಳಿಗೆ ರಾಜಕೀಯ ಪಕ್ಷಗಳ ಸಹಕಾರ ಅತ್ಯಂತ ಅಗತ್ಯವಾಗಿದೆ ಎಂದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುವ ಸಲುವಾಗಿ 2002ರ ಮತದಾರರ ಪಟ್ಟಿಯಲ್ಲಿರುವ ಮತದಾರರನ್ನು 2025ರ ಮತದಾರರ ಪಟ್ಟಿಯಲ್ಲಿರುವ ಒಳಗೊಂಡಂತೆ 2026ರ ಮೇ 30ಕ್ಕೆ ಜಿಲ್ಲೆಯಲ್ಲಿ ಶೇ. 96.22ರಷ್ಟು ಮತದಾರರನ್ನು ಮ್ಯಾಪಿಂಗ್ ಮಾಡಲಾಗಿದೆ. ಉಳಿಕೆ ಮತದಾರರನ್ನು ಸಹ ಮ್ಯಾಪಿಂಗ್ ಮಾಡಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ಹೇಳಿದರು.
ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 983 ಮತಗಟ್ಟೆಗಳಿವೆ. ಮತಗಟ್ಟೆಗಳ ಸಂಖ್ಯೆಗನುಗುಣವಾಗಿ ಬಿಎಲ್ಒ ಗಳನ್ನು ನೇಮಕ ಮಾಡಲಾಗಿದೆ. ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಚಟುವಟಿಕೆಗಳಿಗೆ ರಾಜಕೀಯ ಪಕ್ಷಗಳ ಸಕ್ರಿಯ ಪಾಲ್ಗೊಳ್ಳುವಿಕೆ ಅತ್ಯಂತ ಮಹತ್ವ ಪೂರ್ಣವಾಗಿದೆ. ಹೀಗಾಗಿ ರಾಜಕೀಯ ಪಕ್ಷಗಳು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳಿಗೆ ಮತಗಟ್ಟೆ ಮಟ್ಟದ ಏಜೆಂಟರನ್ನು ನೇಮಕ ಮಾಡಿ ವಿವರವನ್ನು ಎರಡು ದಿನಗಳೊಳಗೆ ಸಲ್ಲಿಸುವಂತೆ ತಿಳಿಸಿದರು.
ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಯಾವುದೇ ರೀತಿಯ ಲೋಪಗಳಾಗದಂತೆ ಮತ್ತು ಕರಡು ಮತದಾರರ ಪಟ್ಟಿಯಲ್ಲಿ ಮತದಾರರು ದಾಖಲಾಗಿರುವುದು ಹಾಗೂ ನಿಧನ ಹೊಂದಿದ, ಸ್ಥಳಾಂತರಗೊಂಡ ಮತದಾರರನ್ನು ಗುರುತಿಸಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಮತಗಟ್ಟೆ ಮಟ್ಟದ ಏಜೆಂಟರು ಮಾಹಿತಿ ನೀಡಬಹುದಾಗಿದೆ. ಪರಿಷ್ಕರಣೆ ಸಂಬಂಧ ಮತಗಟ್ಟೆ ಮಟ್ಟದ ಏಜೆಂಟರಿಗೆ ಅರಿವು ಮೂಡಿಸುವ ಸಲುವಾಗಿ ಆಯಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರ ನೊಂದಣಾಧಿಕಾರಿಗಳು ಓರಿಯೇಂಟೇಷನ್ ಕಾರ್ಯಾಗಾರ ನಡೆಸಲಿದ್ದಾರೆ ಎಂದರು.
ಮತದಾರರ ಪಟ್ಟಿಯಲ್ಲಿ ಎಲ್ಲ ಅರ್ಹ ನಾಗರಿಕರು ಸೇರ್ಪಡೆಗೊಂಡಿರಬೇಕು. ಯಾರೇ ಅರ್ಹ ನಾಗರಿಕರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂಬ ಮಹತ್ತರ ಉದ್ದೇಶವನ್ನಿಟ್ಟುಕೊಂಡು ಶೇ. 100ರಷ್ಟು ದೋಷರಹಿತ ಮತದಾರರ ಪಟ್ಟಿ ತಯಾರಿಸಲು ಕೈಗೊಳ್ಳಲಾಗಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಎ.ಎಸ್. ಗುರುಸ್ವಾಮಿ, ಎಸ್. ಬಾಲಸುಬ್ರಹ್ಮಣ್ಯಂ, ಎನ್. ನಾಗಯ್ಯ, ಡಾ. ಗುರುಪ್ರಸಾದ್, ಮಹೇಶ್ ಗೌಡ, ಹೆಚ್.ಎಸ್. ತೋಂಟದಾರ್ಯಸ್ವಾಮಿ, ಎಂ. ಸ್ವಾಮಿ, ಭಾ.ಮ. ಕೃಷ್ಣಮೂರ್ತಿ, ಚುನಾವಣಾ ಶಿರಸ್ತೇದಾರರಾದ ಎನ್. ನಿತ್ಯ, ವಿಷಯ ನಿರ್ವಾಹಕರಾದ ಶಾಂತಮೂರ್ತಿ ಸಭೆಯಲ್ಲಿ ಉಪಸ್ಥಿತರಿದ್ದರು
Like this:
Like Loading...
Related