ಮೇ 4ರಂದು ನಗರದಲ್ಲಿ ಶ್ರೀ ಭಗೀರಥ ಜಯಂತಿ : ಅದ್ದೂರಿ ಆಚರಣೆಗೆ ನಿರ್ಧಾರ

ಚಾಮರಾಜನಗರ: ಜಿಲ್ಲಾಕೇಂದ್ರದಲ್ಲಿ ಮೇ 4ರಂದು ಶ್ರೀ ಭಗೀರಥ ಜಯಂತಿ ಕಾರ್ಯಕ್ರಮವನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.  

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಶ್ರೀ ಭಗೀರಥ ಜಯಂತಿ ಆಚರಣೆ ಸಂಬಂಧ ಸಮುದಾಯದ ಮುಖಂಡರು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. 

ಆರಂಭದಲ್ಲಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಭಗೀರಥ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಕಾರ್ಯಕ್ರಮದ ರೂಪುರೇಷೆ ಕುರಿತು ಸಭೆಯಲ್ಲಿ ಹಾಜರಿದ್ದ ಸಮುದಾಯದ ಮುಖಂಡರ ಅಭಿಪ್ರಾಯ, ಸಲಹೆಗಳನ್ನು ಆಲಿಸಿದರು. 

ಶ್ರೀ ಭಗೀರಥ ಜಯಂತಿ ಮೆರವಣಿಗೆ, ವೇದಿಕೆ ಕಾರ್ಯಕ್ರಮ ನಿಗದಿತ ಸಮಯಕ್ಕೆ ಸರಿಯಾಗಿ ವ್ಯವಸ್ಥಿತವಾಗಿ ನಡೆಯಬೇಕು. ಮೆರವಣಿಗೆಯಲ್ಲಿ ಹೆಚ್ಚು ಕಲಾತಂಡಗಳು ಪಾಲ್ಗೊಳ್ಳಬೇಕು. ಕಲಾತಂಡಗಳ ನಿಯೋಜನೆಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಾಗಬಾರದು. ಕಾರ್ಯಕ್ರಮಕ್ಕೆ ನುರಿತ ಮುಖ್ಯ ಭಾಷಣಕಾರರನ್ನು ಕರೆಸಬೇಕು. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಭಗೀರಥರ ಭಾವಚಿತ್ರ ಅಳವಡಿಸಿ ಜಯಂತಿ ದಿನದಂದು ಭಾವಚಿತ್ರಕ್ಕೆ ಪುಷ್ಪಾರ್ಚನೆಯಾಗಬೇಕು ಎಂಬುದು ಸೇರಿದಂತೆ ಇತರೆ ಸಲಹೆಗಳು ಮುಖಂಡರಿಂದ ಸಭೆಯಲ್ಲಿ ಕೇಳಿಬಂದವು.

ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಜಿಲ್ಲಾಕೇಂದ್ರದಲ್ಲಿ ನಡೆಯಲಿರುವ ಮಹರ್ಷಿ ಶ್ರೀ ಭಗೀರಥರ ಜಯಂತಿ ಅಂಗವಾಗಿ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮಗಳ ಅಚ್ಚುಕಟ್ಟು ಆಯೋಜನೆಗೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. 

ಮೇ 4ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಪ್ರವಾಸಿ ಮಂದಿರದಿಂದ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಆರಂಭವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಳಿಕ ಜಿಲ್ಲಾಡಳಿತ ಭವನದಲ್ಲಿ ಅಂತ್ಯಗೊಳ್ಳಲಿದೆ. ಮೆರವಣಿಗೆಯಲ್ಲಿ ಬೆಳ್ಳಿ ಸತ್ತಿಗೆ, ಸೂರಪಾನಿಗಳು ಭಾಗವಹಿಸಲಿವೆ. ಬಳಿಕ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.

ಶಿಷ್ಠಾಚಾರ ಪ್ರಕಾರವೇ ವ್ಯವಸ್ಥಿತವಾಗಿ ಕಾರ್ಯಕ್ರಮ ನಡೆಯುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು.  ಕಾರ್ಯಕ್ರಮದ ಆಹ್ವಾನಪತ್ರಿಕೆಗಳನ್ನು ಜನಪ್ರತಿನಿಧಿಗಳು ಹಾಗೂ ಗಣ್ಯರಿಗೆ ಸಕಾಲದಲ್ಲಿ ತಲುಪಿಸಬೇಕು. ಭಗೀರಥ ಜಯಂತಿ ಕಾರ್ಯಕ್ರಮ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ನಂಜುಂಡಯ್ಯ, ನಗರಸಭೆ ಪೌರಾಯುಕ್ತರಾದ ಎಸ್.ವಿ. ರಾಮದಾಸ್, ಮುಖಂಡರಾದ ನೂರೊಂದು ಶೆಟ್ಟಿ, ಗಡಿಮನೆ ಯಜಮಾನರಾದ ಜಯಸ್ವಾಮಿ, ಮಂಗಲ ಕೃಷ್ಣ, ಜಯಸಿದ್ದು ಹೊಂಗನೂರು, ಕಾವೇರಿ ಶಿವಕುಮಾರ್, ಬ್ಯಾಡಮೂಡ್ಲು ಬಸವಣ್ಣ, ಮಹದೇವಶೆಟ್ಟಿ, ಚಿಕ್ಕ ಮಹದೇವು, ಭೀಮನಬೀಡು ಶಿವಕುಮಾರ್, ವಕೀಲರಾದ ರವಿ, ಡೂಲು ಶ್ರೀನಿವಾಸ್, ಮೂಡಲ ಅಗ್ರಹಾರ ಮಹದೇವಶೆಟ್ಟಿ, ಜಿಲ್ಲಾ ಉಪ್ಪಾರ ಯುವಕರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಸ್. ನಾಗರಾಜ್, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *