5 ಹುಲಿ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ : ಸಚಿವ ಈಶ್ವರ ಖಂಡ್ರೆ

ಚಾಮರಾಜನಗರ: ಮಲೆ ಮಹದೇಶ್ವರಬೆಟ್ಟದ ಹೂಗ್ಯಂ ವಲಯದಲ್ಲಿ 5 ಹುಲಿಗಳ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ ಖಂಡ್ರೆ ಅವರು ತಿಳಿಸಿದ್ದಾರೆ.

ದುರ್ಘಟನೆ ಸಂಭವಿಸಿದ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಐದು ಹುಲಿಗಳ ಮೃತದೇಹಗಳಿಗೆ ಅಗ್ನಿ ಸ್ಪರ್ಶ ಮಾಡಿದ್ದನ್ನು ವೀಕ್ಷಿಸಿದ ನಂತರ ಮಾತನಾಡಿದ ಸಚಿವರು, ತನಿಖೆಗೆ ಆಗಮಿಸಿರುವ ಅಧಿಕಾರಿಗಳು ಮತ್ತು ತಜ್ಞರು, ವಿಷ ಪ್ರಾಶನದಿಂದ ಹುಲಿಗಳು ಸತ್ತಿವೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಇದೊಂದು ಅಪರಾಧ ಈ ಕುಕೃತ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ರಾಜ್ಯ ಸರ್ಕಾರ ವನ್ಯಜೀವಿ ಸಂರಕ್ಷಣೆಗೆ ಎಲ್ಲ ಅಗತ್ಯ ಕ್ರಮ ಕೈಗೊಂಡಿರುವುದರಿಂದಲೇ ರಾಜ್ಯ ಹುಲಿಗಳ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೆ ಐದು ಹುಲಿಗಳು ಒಂದೇ ದಿನ ಸಾವಿಗೀಡಾಗಿರುವುದು ಅತ್ಯಂತ ನೋವಿನ ಹಾಗೂ ಹೃದಯ ವಿದ್ರಾವಕ ಘಟನೆಯಾಗಿದೆ. ಈ ಘಟನೆ ಅತೀವ ನೋವು ತಂದಿದೆ ಎಂದರು.

ಹುಲಿಗಳ ಅಸಹಜ ಸಾವಿನ ವಿಷಯ ತಿಳಿದ ಕೂಡಲೇ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ. ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರ (ಎನ್.ಟಿ.ಸಿ.ಎ.) ಪ್ರತಿನಿಧಿಗಳೂ ಇಲ್ಲಿಗೆ ಆಗಮಿಸಿದ್ದಾರೆ. ವನ್ಯಜೀವಿ ತಜ್ಞರು ಮತ್ತು ಸಾಕ್ಷಿಗಳೂ ಆಗಮಿಸಿದ್ದಾರೆ. ಮರಣೋತ್ತರ ಪರೀಕ್ಷೆಯನ್ನು ನಿಯಮಾನುಸಾರ ನಡೆಸಲಾಗಿದ್ದು, ಮೃತದೇಹಗಳ ಸಂಸ್ಕಾರವೂ ಆಗಿದೆ, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಹೊರಗುತ್ತಿಗೆಯ ಮುಂಚೂಣಿ ಅರಣ್ಯ ಸಿಬ್ಬಂದಿಗೆ ಸಕಾಲದಲ್ಲಿ ವೇತನ ಆಗದಿರುವ ಬಗ್ಗೆ ವರದಿ ಇದೆ. ಈ ಬಗ್ಗೆಯೂ ತನಿಖೆ ನಡೆಸಿ, ಮುಂಚೂಣಿ ಸಿಬ್ಬಂದಿಗೆ ಸಕಾಲದಲ್ಲಿ ವೇತನ ಪಾವತಿಗೆ ಕ್ರಮವಹಿಸಲಾಗುವುದು. ಹುಲಿಗಳ ಸಾವಿನ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ತನಿಖೆಯಿಂದ ಕಂಡು ಬಂದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

ಹನೂರು ಶಾಸಕರಾದ ಎಂ.ಆರ್. ಮಂಜುನಾಥ್, ತನಿಖಾ ತಂಡದ ಅಧಿಕಾರಿಗಳು, ವನ್ಯಜೀವಿತಜ್ಞರಾದ ಸಂಜಯ್ ಗುಬ್ಬಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *