ಚಾಮರಾಜನಗರ: ಹಲವು ಸವಾಲುಗಳಿಂದ ಕೂಡಿರುವ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ತಮ್ಮ ಅಸ್ಮಿತೆಯನ್ನು ಉಳಿಸಿಕೊಳ್ಳಲು ಪಠ್ಯವಲ್ಲದೇ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಭೋಗಾಪುರ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಪಿ. ದೇವರಾಜು ಅವರು ತಿಳಿಸಿದರು.

ಚಾಮರಾಜನಗರ ತಾಲೂಕಿನ ಭೋಗಾಪುರದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾವಿತ್ರಿಬಾಯಿ ಪುಲೆ ಸಭಾಂಗಣದಲ್ಲಿಂದು ಕನ್ನಡ ಮತ್ತು ಇಂಗ್ಲೀಷ್ ವಿಭಾಗಗಳು ಹಾಗೂ ಐ.ಕ್ಯೂ.ಎ.ಸಿ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ವಿಶೇಷ ಉಪನ್ಯಾಸ’ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇಂದಿನ ತೀವ್ರ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಸವಾಲುಗಳು ಎದುರಾಗಿವೆ. ಇಂತಹ ಸವಾಲುಗಳನ್ನು ಎದುರಿಸಿ ತಮ್ಮ ಅಸ್ಮಿತೆ ಕಾಪಾಡಿಕೊಳ್ಳಲು ಹಾಗೂ ಸುಪ್ತ ಪ್ರತಿಭೆ ಅನಾವರಣಗೊಳಿಸಲು ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶಗಳನ್ನು ಕಲ್ಪಿಸಿ ಸೂಕ್ತ ವೇದಿಕೆ ಒದಗಿಸಬೇಕಾಗಿದೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಸಾಮಾನ್ಯ ಜ್ಞಾನವನ್ನು ವೃದ್ದಿಸಿಕೊಳ್ಳುವುದರ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವ ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದರು.
ವಿಶ್ವಜ್ಞಾನಿ ಎನಿಸಿಕೊಂಡ ಡಾ. ಬಿ.ಆರ್. ಅಂಬೇಡ್ಕರ್ ಅವರು ಎಸ್.ಎಸ್.ಎಲ್.ಸಿ ಹಾಗೂ ಪದವಿಯಲ್ಲಿ 3ನೇ ದರ್ಜೆಯಲ್ಲಿ ಉತ್ತೀರ್ಣರಾಗಿದ್ದರು. ಭಾರತದಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶ ಕಲ್ಪಿಸದಿದ್ದುದ್ದೇ ಇದಕ್ಕೆ ಪ್ರಮುಖ ಕಾರಣವಾಗಿತ್ತು. ಬಳಿಕ ಅಂಬೇಡ್ಕರ್ ಅವರು ಕೊಲಂಬಿಯಾ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳಿಂದ ಪದವಿ ಪಡೆಯಲು ವಿದ್ಯಾರ್ಥಿಗಳಿಗೆ ಅಲ್ಲಿದ್ದ ಮುಕ್ತ ವಾತಾವರಣ ಕಾರಣವಾಗಿತ್ತು ಎಂದು ತಿಳಿಸಿದರು.
ಪ್ರತಿದಿನ 18 ಗಂಟೆಗಳ ಕಾಲ ಗ್ರಂಥಾಲಯದಲ್ಲಿಯೇ ಸಮಯ ಕಳೆಯುತ್ತಿದ್ದರು. ಇದು ಅವರ ವ್ಯಕ್ತಿತ್ವ ವೃದ್ಧಿಸಲು, ವಿಕಸನಗೊಳ್ಳಲು ನೆರವಾಯಿತು. ಇಂದಿನ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಬುದ್ಧರಾಗಲು ಅಂಬೇಡ್ಕರ್ ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕಾಗಿದೆ. ಭ್ರಷ್ಟಾಚಾರ, ಅಸ್ಪøಶ್ಯತೆ, ಜಾತಿಪದ್ದತಿಯನ್ನು ಬೇರುಸಮೇತ ಕಿತ್ತೊಗೆಯಲು ನಮ್ಮ ಜ್ಞಾನವನ್ನು ಕಾಪಾಡಿಕೊಂಡು ಇತರರಿಗೆ ಪಸರಿಸಬೇಕಿದೆ. ವಿದ್ಯಾರ್ಥಿಗಳು ಪ್ರಜ್ಞಾವಂತ ಸಮಾಜದ ಭಾಗವಾಗಬೇಕು ಹಾಗೂ ಜವಾಬ್ದಾರಿಯುತ ನಾಗರಿಕರಾಗಬೇಕು ಎಂದು ಪ್ರಾಂಶುಪಾಲರಾದ ದೇವರಾಜು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ನಂಜನಗೂಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಎಂ. ಜಯಶಂಕರ ಅವರು ಪದವಿ ವ್ಯಾಸಂಗದಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಮಹತ್ವ ಹಾಗೂ ಮೈಸೂರು ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಇಂಗ್ಲಿಷ್ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಜಿ. ಪರಶುರಾಮಮೂರ್ತಿ ಅವರು ಆರ್.ಕೆ ನಾರಾಯಣ್ ಕಾದಂಬರಿಯಲ್ಲಿ ವ್ಯಕ್ತಿ ಮತ್ತು ವ್ಯಕ್ತಿತ್ವದ ವಿಶ್ಲೇಷಣೆ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಇದೇ ವೇಳೆ ಭೋಗಾಪುರ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ವಿ.ಆರ್. ರಮೇಶ್ ಬಾಬು ನೇತೃತ್ವದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ತಯಾರಿಸಿದ್ದ ಆರ್.ಕೆ ನಾರಾಯಣ್ ಕಾದಂಬರಿ ಆಧಾರಿತ ವಸ್ತುಚಿತ್ರಗಳು ಹಾಗೂ ಮಾದರಿ ಪ್ರಾತ್ಯಕ್ಷಿಕೆಗಳನ್ನು ಗಣ್ಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾದ ನಂಜುಂಡಯ್ಯ, ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರು ಮತ್ತು ಐ.ಕ್ಯೂ.ಎ.ಸಿ ಸಂಚಾಲಕರಾದ ರಂಗಸ್ವಾಮಿ, ವಾರ್ತಾ ಇಲಾಖೆಯ ವಾರ್ತಾ ಸಹಾಯಕರಾದ ಸುರೇಶ್ಕುಮಾರ್, ಕಾಲೇಜಿನ ಉಪನ್ಯಾಸಕರು, ಭೋದಕೇತರ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.