ಸಾಂಸ್ಕ್ರತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತಿ ಅದ್ದೂರಿ ಆಚರಣೆ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ನಗರದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಸಾಂಸ್ಕತಿಕ ನಾಯಕ, ವಿಶ್ವಗುರು, ಸಮಸಮಾಜದ ನಿರ್ಮಾತೃ ಬಸವೇಶ್ವರರ ಜಯಂತಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಮೊದಲಿಗೆ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಇನ್ನಿತರೆ ಗಣ್ಯರು ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿ ವಿಶೇಷವಾಗಿ ಅಲಂಕರಿಸಲಾಗಿದ್ದ ಜಗಜ್ಯೋತಿ ಬಸವೇಶ್ವರರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿದರು. 

ಬೆಳ್ಳಿರಥದಲ್ಲಿ ಅಲಂಕೃತ ಬಸವೇಶ್ವರರ ಭಾವಚಿತ್ರಕ್ಕೆ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಗಣ್ಯರು ಪೂಜೆ ಸಲ್ಲಿಸಿ ಪುಷ್ಪಾರ್ಚನೆಗೈದರು. ಅಲ್ಲಿಯೇ ಇದ್ದ ನಂದಿಧ್ವಜ ಕಂಬಕ್ಕೂ ಸಾಂಪ್ರಾದಾಯಿಕವಾಗಿ ಪೂಜೆ ಸಲ್ಲಿಸಿ ಭಕ್ತಿ-ಭಾವ ಮೆರೆದರು. ಬಳಿಕ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೂ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದರು.  

ಬಳಿಕ ಬಸವೇಶ್ವರರ ಪುತ್ಥಳಿ ಮುಂಭಾಗದಿಂದ ಹೊರಟ ಮೆರವಣಿಗೆಗೆ ಚಾಲನೆ ದೊರೆಯಿತು.  ಸಾಂಸ್ಕøತಿಕ ಕಲಾತಂಡಗಳಾದ ನಾದಸ್ವರ, ಡೊಳ್ಳುಕುಣಿತ, ಗೊರವರ ಕುಣಿತ, ಬೀಸು ಕಂಸಾಳೆ, ಹುಲಿವೇಷ, ಗಾರುಡಿ ಗೊಂಬೆ ಕುಣಿತ, ನಂದಿಕಂಬ ಕುಣಿತ, ನಗಾರಿ, ತಮಟೆ ವಾದನ ಹಾಗೂ ಈ ಬಾರಿಯ ವಿಶೇಷ ಮಹಿಳೆಯರಿಂದ ಚಂಡೆ ವಾದನಗಳು ಮೆರವಣಿಗೆಗೆ ವೈಭವಯುತ ಮೆರುಗು ತಂದವು. 

ನಗರದ ಶ್ರೀ ಸಿದ್ದಮಲ್ಲೇಶ್ವರ ವಿರಕ್ತ ಮಠದ ಚನ್ನಬಸವಸ್ವಾಮಿಗಳು, ಮರಿಯಾಲದ ಮುರುಘರಾಜೇಂದ್ರಸ್ವಾಮಿ ಮಠದ ಇಮ್ಮಡಿ ಮುರುಘರಾಜೇಂದ್ರಸ್ವಾಮಿ, ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಚುಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತ, ಇತರರು ಮೆರವಣಿಗೆ ಚಾಲನೆ ವೇಳೆ ಇದ್ದರು.

ಜಿಲ್ಲಾಡಳಿತ ಭವನದಿಂದ ಆರಂಭವಾದ ಮೆರವಣಿಗೆಯು ನಗರದ ಪಚ್ಚಪ್ಪ ವೃತ್ತ, ಗುಂಡ್ಲುಪೇಟೆ ವೃತ್ತ, ದೊಡ್ಡಂಗಡಿ ಬೀದಿ ಮೂಲಕ ಸಂತೇಮರಹಳ್ಳಿ ವೃತ್ತದ ಮೂಲಕ ವೇದಿಕೆ ಕಾರ್ಯಕ್ರಮ ಆಯೋಜಿಸಿದ್ದ ಪಟ್ಟಣದ ಸರ್ಕಾರಿ ಪೇಟೆ ಪ್ರೈಮರಿ ಶಾಲಾ ಆವರಣ ತಲುಪಿತು.

Leave a Reply

Your email address will not be published. Required fields are marked *