ಕರ್ನಾಟಕ ಸೇನಾಪಡೆಯಿಂದ 149ನೇ ದಿನವೂ ಮುಂದುವರೆದ ಹೋರಾಟ

ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು 149ನೇ ದಿನವಾದ ಇಂದು ಕೂಡಾ ತಮ್ಮ ಹೋರಾಟವನ್ನು ಮುಂದುವರೆಸಿದರು.

148ದಿನಗಳಿಂದಲೂ ನಿರಂತರವಾಗಿ ಪ್ರತಿಭಟಿಸುತ್ತಿರುವ ಕಾರ್ಯಕರ್ತರು, ಇಂದು ಕೂಡಾ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ನಗರದ ಭುವನೇಶ್ವರಿ ವೃತ್ತದಲ್ಲಿ ಹೆದ್ದಾರಿಯನ್ನು ತಡೆದು ರಾಜ್ಯ, ಕೇಂದ್ರ ಹಾಗೂ ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದರು.

ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ ಹಾಗೂ ಕಾವೇರಿ ನಿರ್ವಹಣಾ ಮಂಡಳಿ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ನಿರ್ವಹಣಾ ಮಂಡಳಿಗೆ ಕಣ್ಣು, ಕಿವಿ, ಮೂಗು, ಬಾಯಿ ಏನೂ ಇಲ್ಲ. ಬರೀ ಶರೀರವನ್ನು ಇಟ್ಟುಕೊಂಡಿದೆ. ಯಾಕೆಂದರೆ, ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ. ಜಲಾಶಯಗಳು ಬತ್ತುತ್ತಿವೆ. ಮಾತೆತ್ತಿದರೆ ತಮಿಳುನಾಡಿಗೆ ನೀರು ಬಿಡಿ ಎನ್ನುತ್ತಾರೆ. ಇಲ್ಲಿನ ಪರಿಸ್ತಿತಿಯನ್ನು ಪರಿಶೀಲನೆ ಮಾಡಬೇಕು ಎಂದರು.

ರಾಜ್ಯ ಸರ್ಕಾರ ಮೇಲ್ಮನವಿಯನ್ನು ಸರಿಯಾಗಿ ಸಲ್ಲಿಸದೆ, ಸರಿಯಾಗಿ ಹೋರಾಟವನ್ನು ಮಾಡದೆ ತಮಿಳುನಾಡಿಗೆ ನೀರು ಬಿಡುತ್ತಿರುವುದು ಅತ್ಯಂತ ಖಂಡನೀಯ ಎಂದು ಆರೋಪಿಸಿದರು.

ತಮಿಳುನಾಡಿಗೆ ನೀರನ್ನು ಬಿಡುತ್ತಿರುವುದು ತಕ್ಷಣವೇ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ತಮಿಳುನಾಡಿಗೆ ನೀರನ್ನು ಬಿಡುತ್ತಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ಕೇಂದ್ರ ಸರ್ಕಾರ ಒಕ್ಕೂಟದ ವ್ಯವಸ್ಥೆಯ ಮೇಲೆ ಗೌರವ ಇದ್ದರೆ, ಎರಡು ರಾಜ್ಯಗಳನ್ನು ಕರೆದು ಮಾತನಾಡುವ ಮೂಲಕ ಮಧ್ಯ ಪ್ರವೇಶ ಮಾಡಿ ರಾಜ್ಯದ ಜನತೆಗೆ ನ್ಯಾಯ ಒದಗಿಸುವಂತಹ ಕೆಲಸವನ್ನು ಮಾಡಬೇಕು. ಎಂದು ಒತ್ತಾಯಿಸಿದರು.

ಎಲ್ಲಿಯವರೆಗೆ ನೀವು ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವುದಿಲ್ಲವೋ ಅಲ್ಲಿಯವರೆಗೂ ಉಗ್ರವಾದ ಹೋರಾಟವನ್ನು ಮಾಡುತ್ತೇವೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಚಾ.ವೆಂ.ರಾಜ್‍ಗೋಪಾಲ್, ಚಾ.ರಂ. ಕುಮಾರ್, ವೀರಭದ್ರ, ತಾಂಡವಮೂರ್ತಿ, ಗು.ಪುರುಷೋತ್ತಮ್, ಸೋಮವಾರಪೇಟೆ ಮಂಜು, ಪಣ್ಯದಹುಂಡಿ ರಾಜು ಇನ್ನಿತರರಿದ್ದರು.

Leave a Reply

Your email address will not be published. Required fields are marked *