ಚಾಮರಾಜನಗರ: ರೈತರು ಕೃಷಿ ಹಾಗೂ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಸರ್ಕಾರವು ರೈತರ ಹಿತರಕ್ಷಣೆಗೆ ಬದ್ಧವಾಗಿದೆ ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ತಿಳಿಸಿದರು.
ಚಾಮರಾಜನಗರ ಬಳಿಯ ಕಾಳನಹುಂಡಿ ರಸ್ತೆಯ ಮುಣಚನಹಳ್ಳಿ ತೆಂಗು ಸಂಸ್ಕರಣ ಘಟಕದ ಅವರಣದಲ್ಲಿಂದು ತಾಲೂಕು ತೆಂಗು ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ‘ವಿಶ್ವ ತೆಂಗು ದಿನಾಚರಣೆ ಮತ್ತು ತೆಂಗು ಬೆಳೆಗಾರರ ರಾಜ್ಯಮಟ್ಟದ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತೆಂಗು ಬೆಳೆ ರೈತರಿಗೆ ಹೆಚ್ಚು ಆದಾಯ ತರುವ ಹಾಗೂ ಬಹು ಉಪಯುಕ್ತ ಬೆಳೆಯಾಗಿದೆ. ತೆಂಗಿನ ದರಗಳಲ್ಲಿ ವ್ಯತ್ಯಾಸ, ಏರುಪೇರಾಗುವುದು ಸಹಜ. ತೆಂಗು ಬೆಳೆಯುವ ರೈತರಿಗೆ ನಿರಂತರವಾಗಿ ಸಮಸ್ಯೆಗಳು ಎದುರಾಗುತ್ತಲೇ ಇದ್ದು, ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಕಂಡುಕೊಳ್ಳುವುದರ ಜೊತೆಗೆ ರೈತರು ಬದುಕು ಕಟ್ಟಿಕೊಳ್ಳಬೇಕಾಗಿದೆ. ರೈತರು ಎದೆಗುಂದಬಾರದು. ಸರ್ಕಾರ ರೈತರ ಪರವಾಗಿದೆ ಎಂದರು.
ಭೌಗೋಳಿಕವಾಗಿ ವಿಸ್ತಾರವಾಗಿರುವ ಚಾಮರಾಜನಗರ ಜಿಲ್ಲೆಯ 12 ಸಾವಿರ ಎಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತಿದ್ದು, 12 ಸಾವಿರ ಕೋಟಿ ಕಾಯಿ ಉತ್ಪಾದನೆಯಾಗುತ್ತಿದೆ. ಜಿಲ್ಲೆಗೆ ಬರಗಾಲದ ಪರಿಸ್ಥಿತಿಯಲ್ಲಿ ತೆಂಗು ಬೆಳೆ ಒಣಗಿ ರೈತರು ಸಂಕಷ್ಟಗೀಡಾಗಿದ್ದರು. ಇದನ್ನು ಮನಗಂಡ ಸರ್ಕಾರವು ಜಿಲ್ಲೆಯ ಕೆರೆಗಳನ್ನು ತುಂಬಿಸುವ ಮೂಲಕ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳ ಪುನಶ್ಚೇತನಕ್ಕೆ ನೆರವಾಗಿದೆ ಎಂದು ಉಸ್ತುವಾರಿ ಸಚಿವರಾದ ವೆಂಕಟೇಶ್ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ತೆಂಗು ಕೈಪಿಡಿ ಬಿಡುಗಡೆ ಮಾಡಿದ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಮಾತನಾಡಿ ವಿಶ್ವದಲ್ಲಿ ಭಾರತ ತೆಂಗುಬೆಳೆಯಲ್ಲಿ ಮುಂಚೂಣಿಯಲ್ಲಿದೆ. ದೇಶದಲ್ಲಿಯೇ ಹೆಚ್ಚಾಗಿ ಕೇರಳದಲ್ಲಿ 7 ಲಕ್ಷದ 60 ಸಾವಿರ ಎಕ್ಟೇರ್ನಲ್ಲಿ ತೆಂಗು ಬೆಳೆಯುತ್ತಿದ್ದು, 7 ಲಕ್ಷದ 4 ಸಾವಿರ ಎಕ್ಟೇರ್ನಲ್ಲಿ ಬೆಳೆಯುವ ಮೂಲಕ ಕರ್ನಾಟಕ ನಂತರದ ಸ್ಥಾನದಲ್ಲಿದೆ. ಆದರೆ ಉತ್ಪಾದನೆಯಲ್ಲಿ ನಾವು ಕೇರಳಕ್ಕಿಂತ ಮುಂದಿದ್ದೇವೆ. ತೆಂಗು ದರ ಅನೇಕ ಬಾರಿ ಏರಿಳಿತ ಕಂಡಿದೆ. ಇದರಿಂದ ರೈತರು ತೊಂದರೆಗೊಳಗಾಗಿದ್ದಾರೆ. ಇದನ್ನು ಪರಿಹರಿಸಲು ಸರ್ಕಾರ ಕನಿಷ್ಠ ಬೆಂಬಲ ಬೆಲೆ ಯೋಜನೆ ಜಾರಿಗೊಳಿಸಿದೆ ಎಂದರು.
ಈ ಭಾಗದ ರೈತರು ಕಬ್ಬು, ದಾಳಿಂಬೆ ಹಾಗೂ ಮುಸುಕಿನ ಜೋಳ ಬೆಳೆಯಲು ಮುಂದೆ ಬರಬೇಕು. ರೈತರು ವೈಜ್ಞಾನಿಕ ಕೃಷಿ ಪದ್ದತಿ ಅಳವಡಿಸಿದರೆ ಉತ್ತಮ ಬದುಕು ಕಟ್ಟಿಕೊಳ್ಳಲು ನೆರವಾಗಲಿದೆ. ಜೊತೆಗೆ ಒಂದೇ ಬೆಳೆಯನ್ನು ಆಶ್ರಯಿಸದೇ ಬಹುಬೆಳೆಯನ್ನು ಬೆಳೆಯುವಂತಾಗಬೇಕು. ಕೃಷಿಯಲ್ಲಿ ಸ್ಪಾರ್ಧಾತ್ಮಕತೆ ಅಳವಡಿಸಿಕೊಳ್ಳಬೇಕು. ಕೊಟ್ಟಿಗೆ ಗೊಬ್ಬರ ಬಳಸಬೇಕು. ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಮುಂದಿದ್ದು, ರೈತರಿಗೆ ಪ್ರೋತ್ಸಾಹಧನÀ ನೀಡಿದೆ. ಸಹಕಾರ ಕ್ಷೇತ್ರ್ರದಲ್ಲಿ ಕರ್ನಾಟಕ ಅಭಿವೃದ್ಧಿ ಕ್ರಾಂತಿಯನ್ನೇ ಮಾಡಿದೆ. ತಾಲೂಕು ತೆಂಗು ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರ ಸಂಘ ರೈತರ ನೆರವಿಗೆ ಮುಂದಾಗಬೇಕು ಎಂದು ಶಿವಾನಂದ ಪಾಟೀಲ ಅವರು ತಿಳಿಸಿದರು.
ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಮಾತನಾಡಿ ಜಿಲ್ಲೆಯ ಪ್ರಮುಖ ತೋಟಗಾರಿಕೆ ಬೆಳೆಗಳಲ್ಲಿ ತೆಂಗು ಒಂದಾಗಿದೆ. ತೆಂಗಿಗೆ ಉತ್ತಮ ಬೆಲೆ ದೊರೆಯಬೇಕು.. ಚಂದಕವಾಡಿ ಮಾರ್ಗದಲ್ಲಿ ಹರಿಯುವ ಸುವರ್ಣಾವತಿ ಹಾಗೂ ಹೊನ್ನಹೊಳೆ ಭಾಗದ ಎಳನೀರು ಬಹಳ ಸಿಹಿಯಾಗಿದೆ. ಮದ್ದೂರಿನಲ್ಲಿ ಎಳನೀರು ಮಾರುಕಟ್ಟೆ ಸ್ಥಾಪಿಸಿರುವಂತೆಯೇ ಸರ್ಕಾರ ಜಿಲ್ಲೆಯ ಸಂತೆಮರಹಳ್ಳಿಯಲ್ಲಿ ಎಳನೀರು ಮಾರುಕಟ್ಟೆ ನಿರ್ಮಿಸಿ ರೈತರ ಬದುಕು ಹಸನು ಮಾಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಸದ್ಯದ ಪರಿಸ್ಥಿತಿಯಲ್ಲಿ ವಾಣಿಜ್ಯ ಬೆಳೆಯಾಗಿರುವ ತೆಂಗು ರೈತರಿಗೆ ಲಾಭದಾಯಕವಾಗಿದೆ. ಕೆರೆಗಳು ತುಂಬಿದರೆ ಮಾತ್ರ ಜನ-ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಕೃಷಿ ತೋಟಗಾರಿಕೆ ಬೆಳೆಗಳಿಗೆ ಅನುಕೂಲವಾಗಲಿದೆ. ಜಿಲ್ಲೆಯಲ್ಲಿ ಕೆರೆಗಳು ತುಂಬಿರುವುದರಿಂದ ಭೂಮಿಯಲ್ಲಿ ಅಂತರ್ಜಲ ಹೆಚ್ಚಾಗಿ ತೆಂಗು ಚೇತರಿಕೆ ಕಂಡಿದೆ ಎಂದರು.
ಸುತ್ತೂರು ಕ್ಷೇತ್ರದ ಮಹಾಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಚಾಮರಾಜನಗರ ತಾಲೂಕು ತೆಂಗು ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷರಾದ ಎ.ಎಂ. ಮಹೇಶ್ಪ್ರಭು ಅವರು ಪ್ರಸ್ತಾವಿಕವಾಗಿ ಮಾತನಾಡಿದರು. ಕೊಚ್ಚಿನ್ನ ತೆಂಗು ಅಭಿವೃದ್ಧಿ ಮಂಡಳಿಯ ಮುಖ್ಯ ತೆಂಗು ಅಭಿವೃದ್ಧಿ ಅಧಿಕಾರಿ ಡಾ. ಬಿ. ಹನುಮಂತೇಗೌಡ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರು ಮಾತನಾಡಿದರು.
ಗುಂಡ್ಲುಪೇಟೆ ಶಾಸಕರಾದ ಎಚ್.ಎಂ. ಗಣೇಶ್ ಪ್ರಸಾದ್, ಕಾವೇರಿ ಜಲಾನಯನ ಯೋಜನೆಯ ಅಚ್ಚುಕಟ್ಟು ಪ್ರದೇಶಾಶಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತ, ತಾಲೂಕು ತೆಂಗು ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಸವರಾಜ ತಳವಾರ, ಇತರರು ಕಾರ್ಯಕ್ರಮದಲ್ಲಿ ಇದ್ದರು.
ಕಾರ್ಯಕ್ರಮಕ್ಕೂ ಮೊದಲು ರೈತನಾಯಕರಾದ ಪ್ರೊ. ನಂಜುಂಡಸ್ವಾಮಿ ಅವರು ಪ್ರತಿಮೆಗೆ ಗಣ್ಯರು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.