
ಚಾಮರಾಜನಗರ: ವೇಗವಾಗಿ ಬೆಳೆಯುತ್ತಿರುವ ತಾಂತ್ರಿಕತೆಗೆ ಅನುಗುಣವಾಗಿ ಶಿಕ್ಷಣ ನೀಡಿ ಮಕ್ಕಳ ಭವಿಷ್ಯ ರೂಪಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ತಿಳಿಸಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮತ್ತು ತಾಲೂಕುಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ಪುಸ್ತಕಗಳಿಗಿಂತ ಕಂಪ್ಯೂಟರ್, ಮೊಬೈಲ್ಗಳಲ್ಲಿ ಶಿಕ್ಷಣದ ಹೆಚ್ಚಿನ ಜ್ಞಾನ ದೊರೆಯುತ್ತಿದೆ. ತಂತ್ರಜ್ಞಾನದೊಂದಿಗೆ ವೇಗವಾಗಿ ಬೆಳೆÉಯುತ್ತಿರುವ ಈಗಿನ ಶಿಕ್ಷಣ ಕ್ಷೇತ್ರದ ವ್ಯವಸ್ಥೆಗೆ ಹೊಂದಿಕೊಳ್ಳುವುದು ಶಿಕ್ಷಕರಿಗೆ ಅನಿವಾರ್ಯವಾಗಿದೆ. ಶಿಕ್ಷಕರು ವೇಗವಾಗಿ ಕಲಿಯದಿದ್ದರೆ ಮಕ್ಕಳಿಗೆ ಕಲಿಸಲು ಸಾಧ್ಯವಿಲ್ಲ. ಹಿಂದೆ ಜ್ಞಾನಕ್ಕಾಗಿ ಶಿಕ್ಷಣವಿತ್ತು. ಈಗ ಶಿಕ್ಷಣಕ್ಷೇತ್ರ ಸ್ಪರ್ಧಾತ್ಮಕವಾಗಿದ್ದು, ಕಲಿಕಾ ಪ್ರಕ್ರಿಯೆಯಲ್ಲಿ ಶಿಕ್ಷಕರಿಗೆ ಸಾಕಷ್ಟು ಸವಾಲುಗಳು ಎದುರಾಗಿವೆ. ಅವುಗಳನ್ನು ಚಾಣಾಕ್ಷತೆಯಿಂದ ನಿಭಾಯಿಸುವ ಜವಾಬ್ದಾರಿ ಶಿಕ್ಷಕರಿಗೆ ಬೇಕು ಎಂದರು.
ಪ್ರತಿಯೊಬ್ಬರಿಗೂ ಶಿಕ್ಷಣ ನೀಡುವ ಉದ್ದೇಶದಿಂದ ಸರ್ಕಾರ ಕಡ್ಡಾಯ ಶಿಕ್ಷಣವನ್ನು ಜಾರಿಗೊಳಿಸಿದೆ. ಖಾಸಗಿ ಶಾಲೆಗಳ ಪೈಪೋಟಿಯಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಈ ಬಗ್ಗೆ ಚಿಂತನೆ ಅವಶ್ಯವಾಗಿದೆ. ವಿದ್ಯಾರ್ಥಿಗಳಿಗೆ ಶಿಕ್ಷಕರು ಅಗತ್ಯ ಮಾರ್ಗದರ್ಶನ ನೀಡಿ ಲಭ್ಯವಿರುವ ಸೌಲಭ್ಯ, ಸಂಪನ್ಮೂಲಗಳನ್ನು ಬಳಸಿಕೊಂಡು ಭಾರತದ ಸತ್ಪ್ರಜೆಗಳನ್ನು ರೂಪಿಸಬೇಕು. ಅಲ್ಲದೆ ಮುಂದಿನ ಪೀಳಿಗೆಗೆ ಸರ್ಕಾರಿ ಶಾಲೆಗಳನ್ನು ಉಳಿಸಿ, ಮುಂದುವರೆಸುವ ಮಹತ್ತರ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಹಿಂದೆ ಹೆಣ್ಣುಮಕ್ಕಳನ್ನು ಶಾಲೆಗಳಿಗೆ ಕಳುಹಿಸುತ್ತಿರಲಿಲ್ಲ. ಈಗ ಎಲ್ಲವೂ ಬದಲಾಗಿದೆ. ಹೆಣ್ಣುಮಕ್ಕಳು ಉನ್ನತ ಶಿಕ್ಷಣ ಪಡೆದು ದೇಶದ ಎಲ್ಲಾ ರಂಗಗಳಲ್ಲಿಯೂ ಮುನ್ನೆಡೆಯುತ್ತಿದ್ದಾರೆ. ಇದು ಆರೋಗ್ಯಕರ ಬೆಳವಣಿಗೆಯಾಗಿದೆ. ಶಿಕ್ಷಣಕ್ಕೆ ಒತ್ತು ನೀಡಿ ಜಿಲ್ಲೆಯನ್ನು ಶೈಕ್ಷಣಿಕವಾಗಿ ಮುಂಚೂಣಿಗೆ ತರಲು ಅವಶ್ಯವಿರುವ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ. ಶಿಕ್ಷಣದಿಂದ ಜಿಲ್ಲೆಯ ಸರ್ವತೋಮುಖ ಅಭಿವೃಧ್ಧಿ ಸಾಧ್ಯವಾಗಲಿದೆ ಎಂದು ಸಚಿವರಾದ ವೆಂಕಟೇಶ್ ಅವರು ತಿಳಿಸಿದರು.
ಮುಖ್ಯ ಭಾಷಣ ಮಾಡಿದ ಮೈಸೂರು ಸೆಂಟ್ ಫಿಲೋಮಿನಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಎಂ. ಕೃಷ್ಣೇಗೌಡ ಅವರು ಇಡೀ ಸಮಾಜದಲ್ಲಿ ಹೆಚ್ಚು ಮಾತನಾಡುವ ಅವಕಾಶ ಶಿಕ್ಷಕರಿಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಬಹಳ ಕಾಲ ಉಳಿಯುವ ವ್ಯಕ್ತಿ ಎಂದರೇ ಅದು ಶಿಕ್ಷಕರುÀ ಮಾತ್ರ. ನಮ್ಮ ನಂತರದ ಪೀಳಿಗೆಗೆ ಮಾರ್ಗದರ್ಶನ ಮಾಡುವ ಹಂತದಲ್ಲಿ ಶಿಕ್ಷಕರು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ. ಶಿಕ್ಷಕರು ಶಿಕ್ಷಕ ವೃತ್ತಿಯನ್ನು ಪ್ರೀತಿಸಿ ಗೌರವಿಸಬೇಕು. ಈ ದೇಶದ ಭವಿಷ್ಯ ಅಡಗಿರುವುದು ಶಾಲೆಗಳಲ್ಲಿ, ತರಗತಿಗಳಲ್ಲಿ ಆಗಿರುವುದರಿಂದ ಶಿಕ್ಷಕರ ಜವಾಬ್ದಾರಿ ಅಧಿಕವಾಗಿದೆ. ಸಾತ್ವಿಕತೆಯಲ್ಲಿ ಶಕ್ತಿ ಇದೆ ಎಂಬುದನ್ನು ತೋರಿಸಬೇಕು ಎಂದರು.
ನಮ್ಮ ಗ್ರಹಿಕೆಗಿಂತ ವೇಗವಾಗಿ ಬೆಳೆಯುತ್ತಿರುವ ಈಗಿನ ಹೊಸ ಜಗತ್ತಿನ ವಿದ್ಯಾಮಾನಗಳನ್ನು ಗಮನಿಸಿದಾಗ ಶಿಕ್ಷಕರಿಗೆ ಅಳಿವು-ಉಳಿವಿನ ಸವಾಲು ಎದುರಾಗುತ್ತಿವೆ. ಮುಂದಿನ ದಿನಗಳಲ್ಲಿ ಶಿಕ್ಷಕರ ಅಗತ್ಯವಿಲ್ಲದ ಪರಿಸ್ಥಿತಿ ಬಂದರೂ ಅತಿಶಯೋಕ್ತಿಯೇನಲ್ಲ. ಅಂಥಹ ಕಾಲ ಸಮೀಪಿಸುತ್ತಿದೆ. ಎಲ್ಲಾ ವಿಷಯಜ್ಞಾನ ಕಂಪ್ಯೂಟರ್, ಮೊಬೈಲ್ನಲ್ಲಿದೆ. ಆದರೂ ಯಾವುದೇ ತಾಂತ್ರಿಕತೆಯು ಮನುಷ್ಯನ (ರೀಪ್ಲೇಸ್) ಸ್ಥಾನ ತುಂಬುವಂತಾಗಬಾರದು. ಶಿಕ್ಷಕ ಎಂದರೇ ಬರೀ ವೃತ್ತಿಯಲ್ಲ. ಕಲಿಸುವ ಹಂತದಲ್ಲಿ ಶಿಕ್ಷಕರ ಎಲ್ಲಾ ಇಂದ್ರಿಯಗಳು ಕ್ರೀಯಾಶೀಲ ಚಟುವಟಿಕೆಯಿಂದ ಕೂಡಿರಬೇಕು. ನಮ್ಮೊಳಗಿನ ಆದರ್ಶಗಳನ್ನು ವಿದ್ಯಾರ್ಥಿಗಳಿಗೆ ಪಸರಿಸಿ ಸ್ಪೂರ್ತಿ ತುಂಬಬೇಕು ಎಂದು ಕೃಷ್ಣೇಗೌಡ ಅವರು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಎಂ.ಎಸ್.ಐ.ಎಲ್. ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಶಿಕ್ಷಣಕ್ಕೆ ತನ್ನದೇ ಆದ ಮಹತ್ವವಿದ್ದು, ಅಂದಿನ ಗುರುಕುಲ ಶಿಕ್ಷಣಕ್ಕೂ ಇಂದಿನ ಬದಲಾದ ಶಿಕ್ಷಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಪ್ರತಿಯೊಬ್ಬರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಸಮಾಜದಲ್ಲಿ ಗೌರವ ಪಡೆಯಲು ಶಿಕ್ಷಣ ನೆರವಾಗಲಿದೆ ಎಂದರು.
ಇದೇ ವೇಳೆ ಶಿಕ್ಷಕ ವೃತ್ತಿಯಲ್ಲಿ ಸಾಧನೆಗೈದವರಿಗೆ ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಅಲ್ಲದೆ ಸೇವೆಯಿಂದ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಆರಂಭದಲ್ಲಿ ಕರಡಿಮೋಳೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳು ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.
ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ನಗರಸಭೆ ಅಧ್ಯಕ್ಷರಾದ ಎಸ್. ಸುರೇಶ್ ನಾಯಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್, ನಗರಸಭೆ ಉಪಾಧ್ಯಕ್ಷರಾದ ಮಮತ ಬಾಲಸುಬ್ರಮಣ್ಯಂ, ಸದಸ್ಯರಾದ ಎಂ. ಮಹೇಶ್, ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್, ಡಯಟ್ ಪ್ರಾಂಶುಪಾಲರಾದ ಕಾಶಿನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ, ಜಿಲ್ಲಾ ಹಾಗೂ ತಾಲೂಕುಮಟ್ಟದ ಶಿಕ್ಷಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಅಲಂಕೃತ ಬೆಳ್ಳಿರಥದಲ್ಲಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಅಕ್ಷರದ ಅಮ್ಮ ಸಾವಿತ್ರಿಬಾಯಿ ಪುಲೆ ಅವರ ಭಾವಚಿತ್ರವನ್ನೊಳಗೊಂಡ ಮೆರವಣಿಗೆಗೆ ನಗರದ ಪೇಟೆ ಪ್ರೈಮರಿ ಶಾಲಾ ಆವರಣದಿಂದ ಆರಂಭಗೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಅಂಬೇಡ್ಕರ್ ಭವನದಲ್ಲಿ ಮುಕ್ತಾಯಗೊಂಡಿತು.