ಅರಣ್ಯ ಸಂರಕ್ಷಣೆಯಿಂದ ನಾಡು ಉಳಿಯಲು ಸಾಧ್ಯ : ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ

ಚಾಮರಾಜನಗರ: ಅರಣ್ಯ, ವನ್ಯಜೀವಿ ಸಂರಕ್ಷಣೆ ಬಹಳ ಮುಖ್ಯ. ಅರಣ್ಯ ಉಳಿದರೆ ನಾಡು ಉಳಿಯಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಅಭಿಪ್ರಾಯಪಟ್ಟರು.

ನಗರದ ಅರಣ್ಯ ಕೇಂದ್ರ ಸಸ್ಯ ಕ್ಷೇತ್ರದ ಅರಣ್ಯ ಹುತಾತ್ಮರ ಸ್ಮಾರಕದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಇಟ್ಟು ನಮಿಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಜೀವವನ್ನೇ ಬಲಿ ಕೊಟ್ಟ ಹುತಾತ್ಮರಿಗೆ ಗೌರವ ಸಮರ್ಪಣೆ ಮಾಡಲಾಗುತ್ತಿದೆ. ಅರಣ್ಯ ಸಂರಕ್ಷಣೆ ಬಹಳ ಮುಖ್ಯ. ಕಾಡು ಇದ್ದರೆ ಉತ್ತಮ ಮಳೆ ಬರಲು ಸಾಧ್ಯ. ಜೊತೆಗೆ ವನ್ಯಜೀವಿಗಳ ಸಂರಕ್ಷಣೆಯೂ ಮುಖ್ಯ. ಇತ್ತೀಚಿನ ದಿನಗಳಲ್ಲಿ ವನ್ಯಜೀವಿಗಳನ್ನು ಬೇಟೆಯಾಡುತ್ತಿರುವುದು ದುರದೃಷ್ಟಕರ. ಇಂತಹ ಸಾಕಷ್ಟು ಪ್ರಕರಣಗಳು ನಡೆಯುತ್ತಿದ್ದು ದೂರುಗಳು ದಾಖಲಾಗುತ್ತಿವೆ ಎಂದರು.

ಅರಣ್ಯ ಉಳಿಸಲು ತಮ್ಮ ಪ್ರಾಣ ಬಲಿ ಕೊಟ್ಟ ಅರಣ್ಯ ಸಂರಕ್ಷಕರಿಗೆ ಪ್ರತಿ ವರ್ಷ ಹುತಾತ್ಮರ ದಿನಾಚರಣೆ ಮೂಲಕ ಗೌರವ ಸಲ್ಲಿಸಲಾಗುತ್ತಿದೆ. ಅರಣ್ಯ, ವನ್ಯಜೀವಿ ಸಂರಕ್ಷಣೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಹೇಳಿದರು.

ಬಿಆರ್‌ಟಿ ಹುಲಿ ಯೋಜನೆ ನಿರ್ದೇಶಕರಾದ ದೀಪ ಜೆ. ಕಂಟ್ರಾಕ್ಟರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಅರಣ್ಯ ಸಂಪತ್ತು ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರಾಣತೆತ್ತ ಹುತಾತ್ಮರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ೨೦೧೩ರ ಸೆಪ್ಟೆಂಬರ್ ಹುತಾತ್ಮರ ದಿನಾಚರಣೆಯನ್ನು ಘೋಷಣೆ ಮಾಡಿತು ಎಂದರು.

ಇದಕ್ಕೂ ಮುನ್ನ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಇತರೆ ಗಣ್ಯರು ಪುಷ್ಪಗುಚ್ಛವಿಟ್ಟು ಗೌರವ ಸಲ್ಲಿಸಿದರು.

ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾದ ಮಲ್ಲೇಶಪ್ಪ, ಎಸಿಎಫ್ ಸುರೇಶ್ ಕರಿಯಪ್ಪ, ಸಾಮಾಜಿಕ ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಭ್ಯಶ್ರೀ, ವಲಯ ಅರಣ್ಯಾಧಿಕಾರಿಗಳಾದ ವಿನೋದ್‌ಗೌಡ, ನಾಗೇಂದ್ರನಾಯಕ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *