ಚಾಮರಾಜನಗರ: ಚಾಮರಾಜನಗರ ತಾಲೂಕಿನ ಚಂದಕವಾಡಿ ಗ್ರಾಮ ಪಂಚಾಯಿತಿಯಲ್ಲಿ ಜಿಲ್ಲಾ ಹಂತದ ಸ್ವಚ್ಚತೆಯೇ ಸೇವಾ ಕಾರ್ಯಕ್ರಮಕ್ಕೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಚಾಲನೆ ನೀಡಿದರು.

ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಶಾಸಕರು ಉದ್ಘಾಟಿಸಿದರು. ನಂತರ ಸ್ವಚ್ಚತಾ ಜಾಗೃತಿ ಜಾಥಾಗೆ ಚಾಲನೆ ನೀಡಿದರು.
ಇದೇ ವೇಳೆ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಗ್ರಾಮಗಳಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು.ಮನೆಯ ಸುತ್ತಮುತ್ತಲ ಪ್ರದೇಶದಲ್ಲಿಯೂ ನೈರ್ಮಲ್ಯ ಇರುವಂತೆ ನೋಡಿಕೊಳ್ಳಬೇಕು. ಗ್ರಾಮದಲ್ಲಿ ಪ್ರತಿಯೊಂದು ಮನೆಗಳಲ್ಲಿ ಬಳಕೆ ಮಾಡುವ ಹಸಿಕಸ, ಒಣಕಸಗಳನ್ನು ಬೇರ್ಪಡಿಸಿ ಪಂಚಾಯಿತಿಯಿಂದ ಬರುವ ಸ್ವಚ್ಚತಾ ವಾಹನಕ್ಕೆ ನೀಡಬೇಕು ಎಂದರು.

ಈಗಾಗಲೇ ಮನೆಗಳಲ್ಲಿ ಶೌಚಾಲಯ ನಿರ್ಮಿಸಲಾಗಿದೆ. ಯಾರು ಸಹ ಬಯಲಿನಲ್ಲಿ ಮಲವಿಸರ್ಜನೆ ಮಾಡಬಾರದು. ಆರೋಗ್ಯ ದೃಷ್ಠಿಯಿಂದ ಶೌಚಾಲಯ ಬಳಕೆ ಮಾಡಬೇಕು ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಸಲಹೆ ಮಾಡಿದರು.
ಇದೇ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರ ಶುಭ ಸಂದೇಶವನ್ನು ತಿಳಿಸಲಾಯಿತು.

ಸ್ವಚ್ಚ ಭಾರತ್ ಮಿಷನ್ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಯೋಜನಾ ನಿರ್ದೇಶಕರಾದ ಕಿರಣ್ ಪೆಡ್ನೆಕರ್ ಅವರು ಮಾತನಾಡಿ ಇಂದಿನಿಂದ ಅಕ್ಟೋಬರ್ 2ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಚತೆ ಸಂಬಂಧ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರತಿಮನೆಗಳಿಂದ ತ್ಯಾಜ್ಯ ಸಂಗ್ರಹಣೆ ಮಾಡಲಾಗುತ್ತಿದೆ. ಧಾರ್ಮಿಕ ಕೇಂದ್ರಗಳ ಸ್ವಚ್ಚತೆ, ಶೌಚಾಲಯಗಳ ಬಳಕೆ, ಪ್ಲಾಸ್ಟಿಕ್ ತ್ಯಜಿಸಿ ಬಟ್ಟೆ ಬ್ಯಾಗ್ಗಳ ಬಳಕೆ ಮಾಡಬೇಕು ಎಂದರು.
ಸ್ವಚ್ಚತೆಯೇ ಸೇವಾ ಕಾರ್ಯಕ್ರಮ ಅಂಗವಾಗಿ ಗ್ರಾಮದ ಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಶ್ರಮದಾನ ಮೂಲಕ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಯಿತು.
ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಇತರೆ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.