ದೈಹಿಕ ಆರೋಗ್ಯ ಜೊತೆಗೆ ಮಾನಸಿಕ ಆರೋಗ್ಯದ ಕಡೆ ಗಮನ ಅಗತ್ಯ : ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ

ಚಾಮರಾಜನಗರ:-ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನು ಸಹ ಕಾಯ್ದುಕೊಳ್ಳುವುದು ಕೂಡ ಅವಶ್ಯಕವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ತಿಳಿಸಿದರು.

ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಜಾಗೃತಿ ಜಾಥಾವನ್ನು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಎಲ್ಲರೂ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿ ಉತ್ತಮ ಜೀವನ ನಡೆಸುವಂತಾಗಬೇಕು. ಮಾನಸಿಕ ಆರೋಗ್ಯವನ್ನು ಸಮಾನ ಸ್ಥಿತಿಯಲ್ಲಿ ಕಾಪಾಡಿಕೊಳ್ಳಬೇಕು. ದೈಹಿಕ ಸಮಸ್ಯೆ ಉಂಟಾದಾಗ ಚಿಕಿತ್ಸೆ ತೆಗೆದುಕೊಳ್ಳುವ ರೀತಿಯಲ್ಲಿ ಮಾನಸಿಕ ಸಮಸ್ಯೆಗಳಿಗೂ ಚಿಕಿತ್ಸೆ ತೆಗೆದುಕೊಳ್ಳುವುದು ಸೂಕ್ತವಾಗಿದೆ ಎಂದರು.

ಸಮಸ್ಯೆಗಳನ್ನು ಅತಿಯಾಗಿ ಮನಸ್ಸಿಗೆ ತೆಗೆದುಕೊಳ್ಳದೇ ಸರಿಯಾಗಿ ನಿಭಾಯಿಸಿದಾಗ ಮಾತ್ರ ಮಾನಸಿಕ ಕಾಯಿಲೆಯಿಂದ ದೂರ ಉಳಿಯಬಹುದು. ವ್ಯಕ್ತಿ ಆರೋಗ್ಯವಾಗಿರಲು ನಗುವು ಅತಿ ಹೆಚ್ಚು ಉಪಕಾರಿಯಾಗಿದೆ. ಅದೇ ರೀತಿಯಲ್ಲಿ ಜೀವನದ ಸಮಸ್ಯೆಗಳನ್ನು ಖುಷಿಯಿಂದ ಸ್ವೀಕರಿಸಬೇಕು. ಆರೋಗ್ಯಕರ ಮನಸ್ಥಿತಿ ಮೈಗೂಡಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಸಲಹೆ ಮಾಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ಮಾತನಾಡಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಜಾಥಾವನ್ನು ಸಾರ್ವಜನಿಕರಿಗೆ ಮಾನಸಿಕ ರೋಗದ ಅರಿವು ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದೆ. ದೇಹಕ್ಕೆ ಮಾತ್ರವಲ್ಲದೇ ಮನಸ್ಸಿಗೂ ಚಿಕಿತ್ಸೆಯ ಅವಶ್ಯಕತೆ ಇದೆ. ಜೀವನದಲ್ಲಿ ಒತ್ತಡದಿಂದ, ಒಂಟಿತನದಿಂದ ಮಾನಸಿಕ ಕಾಯಿಲೆಗಳು ಕಂಡುಬರುವುದು ಸಹಜವಾಗಿದೆ. ಸರಿಯಾದ ಸಮಯದಲ್ಲಿ ಚಿಕಿತ್ಸೆ ತೆಗೆದುಕೊಂಡಾಗ ಮಾತ್ರ ಕಾಯಿಲೆ ನಿವಾರಣೆ ಮಾಡಲು ಸಾಧ್ಯವಾಗುತ್ತದೆ. ಸಕರಾತ್ಮಕವಾಗಿ ಚಿಂತಿಸಿದಾಗ ಆರೋಗ್ಯಕರ ಜೀವನ ನಡೆಸಬಹುದು ಎಂದರು.

ಜಿಲ್ಲಾ ಮಾನಸಿಕ ಕಾರ್ಯಕ್ರಮಾಧಿಕಾರಿ ಡಾ. ಚಂದ್ರಶೇಖರ್ ಅವರು ಮಾತನಾಡಿ ಅಕ್ಟೋಬರ್ 10ರಂದು ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಎಲ್ಲೆಡೆ ಆಚರಿಸಲಾಗುತ್ತದೆ. ಸಾರ್ವಜನಿಕರಿಗೆ ಮಾನಸಿಕ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದೇ ವಿಶ್ವ ಮಾನಸಿಕ ಆರೋಗ್ಯ ದಿನದ ಆಚರಣೆಯ ಉದ್ದೇಶವಾಗಿದೆ. ಮೂಲಭೂತ ಹಕ್ಕುಗಳ ರೀತಿಯಲ್ಲಿ ಮಾನಸಿಕ ಆರೋಗ್ಯವನ್ನು ಕಾಯ್ದುಕೊಳ್ಳುವುದು ಸಾರ್ವತ್ರಿಕ ಮಾನವ ಹಕ್ಕು ಎಂಬುವ ಘೋಷಣೆ ಮೂಲಕ ಈ ವರ್ಷದ ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಆಚರಿಸಲಾಗುತ್ತಿದೆ. ಹೀಗಾಗಿ ಮಾನಸಿಕ ಕಾಯಿಲೆಯನ್ನು ಸಮಾಜದಿಂದ ಹೊಗಲಾಡಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದರು.

ಸಾರ್ವಜನಿಕರು ಮಾನಸಿಕ ಕಾಯಿಲೆಯನ್ನು ಶಾಪ, ಮಾಟಮಂತ್ರ ಎಂದೂ ಮೌಢ್ಯಚರಣೆಯ ಮೊರೆ ಹೋಗದೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಕೊಡಿಸಬೇಕು. ರೋಗವು ಉಲ್ಭಣಗೊಳ್ಳುವುದಕ್ಕಿಂತ ಮುಂಚಿತವಾಗಿಯೇ ಚಿಕಿತ್ಸೆ ನೀಡಬೇಕು. ತಾಲೂಕು ಆಸ್ಪತ್ರೆಗಳಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಮನೋರೋಗ ತಜ್ಞರನ್ನು ನೇಮಕ ಮಾಡಲಾಗಿದೆ. ಹಿಂಜರಿಕೆ ಬಿಟ್ಟು ಸಮಸ್ಯೆಗಳಿಗೆ ಸೂಕ್ತ ಚಿಕಿತ್ಸೆ ಪಡೆಯಬೇಕು. ಮನೋಚೈತನ್ಯ ಎಂಬ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಡಾ. ಚಂದ್ರಶೇಖರ್ ಅವರು ತಿಳಿಸಿದರು.

ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ರವಿಕುಮಾರ್, ಮನೋರೋಗ ತಜ್ಞರಾದ ಡಾ. ರಾಜೇಶ್, ಡಾ. ಗೋಕುಲ್, ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ವೈದ್ಯಾಧಿಕಾರಿ ಡಾ. ಉಮಾರಾಣಿ, ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್, ಪ್ರೊ. ಕೃಷ್ಣಮೂರ್ತಿ, ಇತರರು ಇದ್ದರು.

ಜಾಥಾವು ಚಾಮರಾಜೇಶ್ವರ ದೇವಸ್ಥಾನ ಮುಂಭಾಗದಿಂದ ಹೊರಟು ಜೈ ಭುವನೇಶ್ವರ ವೃತ್ತದ ಮೂಲಕ ಬಿ. ರಾಚಯ್ಯ ಜೋಡಿ ರಸ್ತೆ ಮೂಲಕ ಸಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಮುಕ್ತಾಯಗೊಂಡಿತು.

Leave a Reply

Your email address will not be published. Required fields are marked *