ಲಿಂಗತ್ವ ಅಲ್ಪಸಂಖ್ಯಾತರಿಗೆ ತ್ವರಿತ ಸೌಲಭ್ಯ : ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್

ಚಾಮರಾಜನಗರ: ಲಿಂಗತ್ವ ಅಲ್ಪಸಂಖ್ಯಾತರಿಗೆ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ನೀಡುತ್ತಿರುವ ವಿವಿಧ ಯೋಜನೆಗಳು ಹಾಗೂ ಇನ್ನಿತರ ಸೌಲಭ್ಯಗಳನ್ನು ತ್ವರಿತವಾಗಿ ತಲುಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವದೆಂದು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ (ಸೆ.೧೧) ನಡೆದ ಲಿಂಗತ್ವ ಅಲ್ಪಸಂಖ್ಯಾತರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಲಿಂಗತ್ವ ಅಲ್ಪಸಂಖ್ಯಾತರಿಗೆ ಪುನರ್ವಸತಿ ಯೋಜನೆ, ಹೆಚ್.ಐ.ವಿ ಸೋಂಕಿತ ಮಹಿಳೆಯರಿಗೆ ಧನಶ್ರಿ ಯೋಜನೆ, ಲೈಂಗಿಕ ಕಾರ್ಯಕರ್ತೆಯರಿಗೆ ಚೇತನ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ಈ ಕಾರ್ಯಕ್ರಮಗಳಡಿ ಫಲಾನುಭವಿಗಳಿಗೆ ಶೀಘ್ರವಾಗಿ ಸೌಲಭ್ಯಗಳು ಸಿಗಬೇಕು. ಈ ನಿಟ್ಟನಲ್ಲಿ ಕ್ರಮವಹಿಸಲಾಗುವುದೆಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಲಿಂಗತ್ವ ಅಲ್ಪಸಂಖ್ಯಾತರಿಗೆ ದೃಢೀಕೃತ ಗುರುತಿನ ಚೀಟಿ, ಬ್ಯಾಂಕ್ ಸಾಲ, ನಿವೇಶನಗಳು, ಪಡಿತರ ಚೀಟಿ, ಮುದ್ರಾ ಯೋಜನೆ ಸಾಲ, ನರೇಗಾ ಯೋಜನೆಯಡಿ ಜಾಬ್ ಕಾರ್ಡ್‌ಗಳನ್ನು ಶೀಘ್ರವೇ ತಲುಪುವಂತೆ ನೋಡಿಕೊಳ್ಳಲಾಗುವುದು. ಮುಂದಿನ ಒಂದು ತಿಂಗಳೊಳಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮೈತ್ರಿ ಯೋಜನೆಯ ಸಮಸ್ಯೆ ಪರಿಹರಿಸಲಾಗುವುದು ಎಂದರು.

ಲಿಂಗತ್ವ ಅಲ್ಪಸಂಖ್ಯಾತರು ಹೆಚ್.ಐ.ವಿ ಸೋಂಕಿತ ಮಹಿಳೆಯರು, ಲೈಂಗಿಕ ಕಾರ್ಯಕರ್ತೆಯರ ಸಮುದಾಯ ಸಂಸ್ಥೆಗಳಿಗೆ ಕಚೇರಿ ನಡೆಸಲು ಖಾಲಿ ಕಟ್ಟಡ ಅಥವಾ ನಿವೇಶನ ಒದಗಿಸುವಂತೆ ಮಾಡಲಾದ ಮನವಿ ಆಲಿಸಿದ ಜಿಲ್ಲಾಧಿಕಾರಿಯವರು ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಖಾಲಿ ಸರ್ಕಾರಿ ಕಟ್ಟಡ ಅಥವಾ ನಿವೇಶನ ಲಭ್ಯವಿದ್ದಲ್ಲಿ ಒದಗಿಸಿಕೊಡುವುದಾಗಿ ತಿಳಿಸಿದರು.

ನಿಮ್ಮ ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ನನ್ನ ಕಚೇರಿಗೆ ಬಂದು ಭೇಟಿ ಮಾಡಿ ಪರಿಹರಿಸಿಕೊಳ್ಳಿ. ಯಾವುದೇ ತೊಂದರೆಗಳಿದ್ದರೂ ಇಲಾಖಾ ಗಮನಕ್ಕೆ ತೆಗೆದುಕೊಂಡು ಬನ್ನಿ ಎಂದು ತಿಳಿಸಿದ ಜಿಲ್ಲಾಧಿಕಾರಿಯವರು ಪ್ರತಿ ಎರಡು ತಿಂಗಳಿಗೊಮ್ಮೆ ಸ್ಥಾಯಿ ಸಮಿತಿ ಸಭೆ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು. ಎನ್.ಆರ್.ಎಲ್.ಎಂ ಗಳಲ್ಲಿ ಸಮುದಾಯದವರು ರಚಿಸಿರುವ ಸ್ತ್ರೀ ಶಕ್ತಿ ಗುಂಪುಗಳನ್ನು ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ನಿರ್ದೇಶನ ನೀಡಿದರು.

ಇದೇ ವೇಳೆ ೪೦ ಮಂದಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಅಧಿಕೃತ ಗುರುತಿನ ಚೀಟಿಯನ್ನು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ವಿತರಣೆ ಮಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಗೀತಾಲಕ್ಷ್ಮಿ, ಸಮತಾ ಸೊಸೈಟಿಯ ದೀಪಾ ಬುದ್ದೆ, ದೊರೆಸ್ವಾಮಿ, ಚೇತನ ನೆಟ್ ವರ್ಕ್ ಸಂಸ್ಥೆಯ ಭಾಗ್ಯಮ್ಮ, ಸ್ನೇಹ ಟ್ರಸ್ಟ್‌ನ ಭಾಗ್ಯ, ಇತರರು ಸಭೆಯಲ್ಲಿ ಇದ್ದರು.

Leave a Reply

Your email address will not be published. Required fields are marked *