ಲೋಕ್ ಅದಾಲತ್ ನಲ್ಲಿ 14837 ಪ್ರಕರಣಗಳು ಇತ್ಯರ್ಥ

ಚಾಮರಾಜನಗರ: ಜಿಲ್ಲೆಯ ನ್ಯಾಯಾಲಯಗಳಲ್ಲಿ ಕಳೆದ ಜುಲೈ ೮ ರಂದು ನಡೆದ ಲೋಕ್ ಅದಾಲತ್ ನಲ್ಲಿ ಒಟ್ಟಾರೆ ೧೪,೮೩೭ ಪ್ರಕರಣಗಳು ಇತ್ಯರ್ಥಗೊಂಡಿವೆ.

ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಈ ವಿಷಯ ತಿಳಿಸಿದರು.

ಜಿಲ್ಲೆಯ ಚಾಮರಾಜನಗರ, ಯಳಂದೂರು, ಕೊಳ್ಳೇಗಾಲ, ಗುಂಡ್ಲುಪೇಟೆ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್ ನಡೆಸಲಾಗಿತ್ತು. ೨೯೪೯ ನ್ಯಾಯಾಲಯದ ಪ್ರಕರಣಗಳು ಹಾಗೂ ೧೧೮೮೮ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿದಂತೆ ಒಟ್ಟಾರೆ ೧೪೮೩೭ ಪ್ರಕರಣಗಳು ಲೋಕ್ ಅದಾಲತ್ ನಲ್ಲಿ ಇತ್ಯರ್ಥಗೊಳಿಸಲಾಗಿದೆ. ಇತ್ಯರ್ಥಗೊಂಡ ಪ್ರಕರಣಗಳ ಪೈಕಿ ೨೦೫ ಸಿವಿಲ್, ೨೭೭೪ ಕ್ರಿಮಿನಲ್ ಹಾಗೂ ೧೧೮೮೮ ವ್ಯಾಜ್ಯ ಪೂರ್ವ ಪ್ರಕರಣಗಳಾಗಿವೆ ಎಂದರು.

ಚಾಮರಾಜನಗರ ತಾಲೂಕಿನಲ್ಲಿ ೯೭೧ ನ್ಯಾಯಾಲಯದ ಪ್ರಕರಣಗಳು, ೪೬೧೬ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು ೫೫೮೭ ಪ್ರಕರಣಗಳನ್ನು ಬಗೆಹರಿಸಲಾಗಿದೆ. ಯಳಂದೂರು ತಾಲೂಕಿನಲ್ಲಿ ೨೮೨ ನ್ಯಾಯಾಲಯದ ಪ್ರಕರಣಗಳು, ೫೯೮ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು ೮೮೦ ಪ್ರಕರಣಗಳು, ಕೊಳ್ಳೇಗಾಲ ತಾಲೂಕಿನಲ್ಲಿ ೧೪೪೦ ನ್ಯಾಯಾಲಯದ ಪ್ರಕರಣಗಳು, ೪೧೭೬ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು ೫೬೧೬ ಪ್ರಕರಣಗಳನ್ನು ಬಗೆಹರಿಸಲಾಗಿದೆ.

ಗುಂಡ್ಲುಪೇಟೆ ತಾಲೂಕಿನಲ್ಲಿ ೨೫೬ ನ್ಯಾಯಾಲಯದ ಪ್ರಕರಣಗಳು, ೨೪೯೮ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು ೨೭೫೪ ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.

ಸರ್ವರಿಗೂ ನ್ಯಾಯ ಎಂಬ ಪರಿಕಲ್ಪನೆಯಡಿಯಲ್ಲಿ ಜನಸಾಮಾನ್ಯರ ಅನುಕೂಲಕ್ಕಾಗಿ ಶೀಘ್ರ ಹಾಗೂ ತ್ವರಿತವಾಗಿ ಪ್ರಕರಣಗಳು ಇತ್ಯರ್ಥವಾಗಬೇಕು. ಈ ಮೂಲಕ ನ್ಯಾಯ ಒದಗಿಸಬೇಕೆಂಬ ಆಶಯದಡಿ ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾದ್ಯಂತ ಮೆಗಾ ಲೋಕ್ ಅದಾಲತ್ ನಡೆಸಲಾಗಿದೆ.

ಸಿವಿಲ್ ಹಾಗೂ ರಾಜಿಯಾಗಬಲ್ಲ ಕ್ರಿಮಿನಲ್ ಪ್ರಕರಣಗಳು ಇನ್ನಿತರ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವುದು ಮೆಗಾ ಲೋಕ್ ಅದಾಲತ್ ನ ಉದ್ದೇಶವಾಗಿತ್ತು ಎಂದರು.

ಲೋಕ್ ಅದಾಲತ್ ನಲ್ಲಿ ಹೆಚ್ಚಿನ ಪ್ರಕರಣಗಳು ವಿಲೇವಾರಿ ಆಗಿರುವುದರಿಂದ ಜನಸಾಮಾನ್ಯರಿಗೆ ಅನುಕೂಲವಾಗಿರುವುದರ ಜೊತೆಗೆ ನ್ಯಾಯಾಲಯಗಳ ಮೇಲಿನ ಪ್ರಕರಣಗಳ ಹೊರೆ ತಗ್ಗಿದೆ. ಲೋಕ್ ಅದಾಲತ್ ಯಶಸ್ಸಿಗೆ ಕಾರಣರಾದ ಜಿಲ್ಲೆಯ ಎಲ್ಲ ನ್ಯಾಯಾಧೀಶರಿಗೆ, ವಕೀಲರಿಗೆ, ನ್ಯಾಯಾಲಯದ ಸಿಬ್ಬಂದಿ, ವಿವಿಧ ಇಲಾಖೆಗಳ ಅಧಿಕಾರಿಗಳಿಗೆ, ಮಾಧ್ಯಮ ಪ್ರತಿನಿಧಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ಮಾತನಾಡಿ ನಿರೀಕ್ಷೆಗೂ ಮೀರಿ ಹೆಚ್ಚಿನ ಪ್ರಕರಣಗಳು ಲೋಕ್ ಅದಾಲತ್ ನಲ್ಲಿ ಇತ್ಯರ್ಥಗೊಂಡಿವೆ. ಬಹುಕಾಲದ ಕೌಟುಂಬಿಕ ಪ್ರಕರಣಗಳು ಸಹ ಈ ಬಾರಿಯ ಲೋಕ್ ಅದಾಲತ್ ನಲ್ಲಿ ಬಗೆಹರಿದಿರುವುದು ವಿಶೇಷವಾಗಿದೆ. ಎಲ್ಲರ ಸಹಕಾರದಿಂದ ಲೋಕ್ ಅದಾಲತ್ ನಲ್ಲಿ ಹೆಚ್ಚು ಪ್ರಮಾಣದಲ್ಲಿ ವ್ಯಾಜ್ಯಗಳು ಒಮ್ಮತದಿಂದ ತೀರ್ಮಾನವಾಗಿವೆ ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಇಂದುಶೇಖರ್ ಅವರು ಮಾತನಾಡಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅವಿರತ ಶ್ರಮ ಕಕ್ಷಿದಾರರು ವಕೀಲರ ಸಹಕಾರದಿಂದ ಲೋಕ್ ಅದಾಲತ್ ನಲ್ಲಿ ಹೆಚ್ಚು ಪ್ರಕರಣಗಳು ಇತ್ಯರ್ಥಗೊಂಡಿವೆ ಎಂದರು.

ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷ ಸುದ್ದಿಗೋಷ್ಠಿಯಲ್ಲಿ ಇದ್ದರು.

Leave a Reply

Your email address will not be published. Required fields are marked *