ವಿವಿಧ ವಸತಿ ಶಾಲೆ, ಪುರಾಣಿ ಪೋಡಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಾದ ಎನ್. ಮಂಜುನಾಥ ಪ್ರಸಾದ್ ಭೇಟಿ : ಪರಿಶೀಲನೆ

ಚಾಮರಾಜನಗರ: ಸಹಕಾರ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಾದ ಎನ್. ಮಂಜುನಾಥ ಪ್ರಸಾದ್ ಅವರು ಇಂದು ವಿವಿಧ ವಸತಿ ಶಾಲೆಗಳು ಹಾಗೂ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟ ವ್ಯಾಪ್ತಿಯ ಪುರಾಣಿ ಪೋಡಿಗೆ ಭೇಟಿ ನೀಡಿ ಪರಿಶೀಲಿಸಿದರು.

ಬಿಳಿಗಿರಿರಂಗನಬೆಟ್ಟದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಇಂದು ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಸತಿ ಶಾಲೆಯಲ್ಲಿ ನೀಡಲಾಗುತ್ತಿರುವ ಊಟ ಉಪಹಾರ ಆಹಾರ ತಯಾರಿ ವಿತರಣೆ ವ್ಯವಸ್ಥೆಗಳ ಬಗ್ಗೆ ಖುದ್ದು ವೀಕ್ಷಿಸಿದರು. ವಿದ್ಯಾರ್ಥಿಗಳೊಂದಿಗೆ ವಸತಿ ಶಾಲೆಯಲ್ಲಿ ಕುಳಿತು ಬೆಳಗಿನ ಉಪಹಾರ ಸೇವಿಸಿದರು.

ಇದೇ ವೇಳೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ವಿದ್ಯಾರ್ಥಿಗಳಿಗೆ ವ್ಯಾಸಂಗದ ಜೊತೆ ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದರಾಗುವ ಬಗ್ಗೆ ಹಾಗೂ ಭಾಷಾ ಕೌಶಲ್ಯ ಹೆಚ್ಚುವಂತೆ ತರಬೇತಿಗೊಳಿಸಲು ಅಧ್ಯಾಪಕರಿಗೆ ಉಸ್ತುವಾರಿ ಕಾರ್ಯದರ್ಶಿಗಳು ಸೂಚಿಸಿದರು.

ಬಿಳಿಗಿರಿರಂಗನಬೆಟ್ಟ ವ್ಯಾಪ್ತಿಯ ಪುರಾಣಿ ಪೋಡಿಗೆ ತೆರಳಿ ಅಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಮ ಶಾಲೆಗೆ ಭೇಟಿ ನೀಡಿದರು. ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಕಲಿಕಾ ಪ್ರಗತಿಯ ಬಗ್ಗೆ ಮಾಹಿತಿ ಪಡೆದರು. ಪುರಾಣಿಪೋಡಿನ ಜನರನ್ನು ಭೇಟಿ ಮಾಡಿ ಅಹವಾಲುಗಳನ್ನು ಆಲಿಸಿದರು. ಪೋಡಿಗೆ ರಸ್ತೆ, ವಿದ್ಯುತ್ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಸ್ಥಳೀಯರು ಮನವಿ ಮಾಡಿದರು.

ಯಳಂದೂರು ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿರುವ ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಗೆ ಭೇಟಿ ಕೊಟ್ಟು ವಿದ್ಯಾರ್ಥಿಗಳು, ಅಧ್ಯಾಪಕರೊಂದಿಗೆ ಶೈಕ್ಷಣಿಕ ಸೌಲಭ್ಯಗಳು ಚಟುವಟಿಕೆಗಳ ಕುರಿತು ವಿವರವಾಗಿ ಚರ್ಚಿಸಿದರು. ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಅಧ್ಯಯನ, ಕಲಿಕಾ ಪ್ರಗತಿ ಬಗ್ಗೆ ತಿಳಿದುಕೊಂಡರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕರಾದ ಮಲ್ಲಿಕಾರ್ಜುನ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಇತರೆ ಅಧಿಕಾರಿಗಳು ಇದ್ದರು.

Leave a Reply

Your email address will not be published. Required fields are marked *