ಸ್ಪೋಟಕ, ಪಟಾಕಿ ತಯಾರಿಕೆ, ದಾಸ್ತಾನು ಸ್ಥಳಗಳ ಪರಿಶೀಲಿಸಿ ವರದಿ ನೀಡಲು ಅಧಿಕಾರಿಗಳ ಸಮಿತಿ ರಚಿಸಿ : ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ: ಅತ್ತಿಬೆಲೆ ಪಟಾಕಿ ದಾಸ್ತಾನು ಮಳಿಗೆ ದುರಂತ ಹಿನ್ನೆಲೆಯಲ್ಲಿ ಯಾವುದೇ ಅವಘಡಗಳು ನಡೆಯದಂತೆ ಎಚ್ಚರ ವಹಿಸುವ ಕಾರಣದಿಂದ ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅಧಿಕೃತ, ಅನಧಿಕೃತವಾಗಿ ಸ್ಪೋಟಕ, ಪಟಾಕಿ ತಯಾರಿಕೆ, ದಾಸ್ತಾನು ಮಾಡುವ ಸ್ಥಳಗಳ ಪರಿಶೀಲನೆ ನಡೆಸಿ ವರದಿ ನೀಡಲು ಅಧಿಕಾರಿಗಳ ಸಮಿತಿಯನ್ನು ರಚಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶ ಹೊರಡಿಸಿದ್ದಾರೆ.

ತಮಿಳುನಾಡಿನಿಂದ ಲಾರಿ ಮೂಲಕ ಬಂದ ಪಟಾಕಿಗಳನ್ನು ಬೆಂಗಳೂರಿನ ಅತ್ತಿಬೆಲೆಯ ದಾಸ್ತಾನು ಮಳಿಗೆಯಲ್ಲಿ ಇಳಿಸುವ ವೇಳೆಯಲ್ಲಿ ಬೆಂಕಿ ಹೊತ್ತಿಕೊಂಡು ಸಂಭವಿಸಿದ ದುರಂತದಲ್ಲಿ ಸುಮಾರು 14 ಮಂದಿ ಮರಣ ಹೊಂದಿರುತ್ತಾರೆ. ಜಿಲ್ಲೆಯಲ್ಲಿ ಇಂತಹ ಅವಘಡಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕಾಗಿದೆ. 2023ನೇ ಸಾಲಿನ ದೀಪಾವಳಿ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಸ್ಪೋಟಕ ವಸ್ತುಗಳು, ಪಟಾಕಿಗಳನ್ನು ತಯಾರಿಸುವುದು, ದಾಸ್ತಾನು ಮಾಡುವುದರಿಂದ ಸ್ಪೋಟಕ ಅಪಾಯವು ಸಂಭವಿಸಿ ಜೀವಹಾನಿ ಹಾಗೂ ಆಸ್ತಿಪಾಸ್ತಿ ಹಾನಿ ಉಂಟಾಗುವ ಸಂಭವವಿರುತ್ತದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅಧಿಕೃತ, ಅನಧಿಕೃತವಾಗಿ ಸ್ಪೋಟಕ, ಪಟಾಕಿ ತಯಾರಿಕೆ, ದಾಸ್ತಾನು ಮಾಡುವ ಸ್ಥಳಗಳ ಪರಿಶೀಲನೆ ನಡೆಸಿ ವರದಿ ನೀಡಲು ಅಧಿಕಾರಿಗಳ ಸಮಿತಿಯನ್ನು ರಚಿಸಿ ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.

ಕಂದಾಯ ಇಲಾಖೆ ತಹಶೀಲ್ದಾರ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ಹಾಗೂ ನಗರಸಭೆಗಳ ಪೌರಾಯುಕ್ತರು, ಪುರಸಭೆ, ಪಟ್ಟಣ ಪಂಚಾಯಿತಿ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳನ್ನು ಸದಸ್ಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ. ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳು, ಪೊಲೀಸ್ ಇಲಾಖೆಯ ವೃತ್ತ ನಿರೀಕ್ಷಕರು, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು, ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತಾಲೂಕು ಅಗ್ನಿಶಾಮಕ ಠಾಣಾಧಿಕಾರಿಗಳು, ಚೆಸ್ಕಾಂ ನ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.

ಸಮಿತಿಯು ಜಿಲ್ಲೆಯ ವ್ಯಾಪ್ತಿಯಲ್ಲಿ ಸ್ಪೋಟಕ, ಪಟಾಕಿಗಳ ತಯಾರಿಕೆ ಮತ್ತು ದಾಸ್ತಾನು ಘಟಕಗಳ ಸ್ಥಳಕ್ಕೆ ಖುದ್ದು ಭೇಟಿ ನೀಡಿ, ಸದರಿ ಸ್ಥಳದಲ್ಲಿ ಕೈಗೊಳ್ಳಬೇಕಾದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಹಾಗೂ ಅವರು ಹೊಂದಿರುವ ಪರವಾನಗಿಗಳನ್ನು ಪರಿಶೀಲಿಸಿ ನಿಗದಿಪಡಿಸಿರುವ ಚೆಕ್‍ಲಿಸ್ಟ್ ನಲ್ಲಿ ವರದಿ ತಯಾರಿಸಿ ಮೂರು ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ತಪ್ಪದೆ ಸಲ್ಲಿಸುವಂತೆ ಸೂಚಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *